ಬೆಂಗಳೂರು: ಸಚಿವ ಡಿಕೆ ಶಿವಕುಮಾರ್ ಅವರು ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ತೆರಳಿದ ಬೆನ್ನಲ್ಲೆ ರೋಗಿಗೆ ಚಿಕಿತ್ಸೆ ನೀಡಲು ವೈದ್ಯರು ನಿರ್ಲಕ್ಷ್ಯ ವಹಿಸಿ ಅಮಾನವೀಯತೆ ಪ್ರದರ್ಶಿಸಿದ್ದಾರೆ.
ವಿಕ್ಟೋರಿಯಾ ಆಸ್ಪತ್ರೆಯ ಅವ್ಯವಸ್ಥೆ ದೂರು ಬಂದ ಹಿನ್ನೆಲೆಯಲ್ಲಿ ವೈದ್ಯಕೀಯ ಹಾಗೂ ಜಲ ಸಂಪನ್ಮೂಲ ಖಾತೆ ಸಚಿವರಾದ ಡಿಕೆ ಶಿವಕುಮಾರ್ ಅವರು ಇಂದು ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಆದರೆ ಸಚಿವರು ಆಸ್ಪತ್ರೆ ಭೇಟಿ ನೀಡಿ ತೆರಳಿದ ಅರ್ಧ ಗಂಟೆ ಸಮಯದಲ್ಲೇ ಆಸ್ಪತ್ರೆಯ ಸಿಬ್ಬಂದಿ ರೋಗಿಯನ್ನು ದಾಖಲಿಸಿಕೊಳ್ಳಲು ನಿರ್ಲಕ್ಷ ತೋರಿದ್ದು, ಈ ಕುರಿತು ರೋಗಿಯ ಪೋಷಕರು ಹಾಗೂ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಏನಿದು ಘಟನೆ: ನಗರದ ಕೆಂಗೇರಿ ಬಳಿ ನಿಶಾಂತ್(28) ಅಪಘಾತದಲ್ಲಿ ಗಾಯಗೊಂಡು ಸಾವು ಬದುಕಿನ ನಡುವೆ ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆತರಲಾಗಿತ್ತು. ಸಚಿವರು ಭೇಟಿ ನೀಡಿ ತೆರಳಿದ ಬಳಿಕವೂ ಎಚ್ಚೆತ್ತುಕೊಳ್ಳದ ವೈದ್ಯರು ಅಪಘಾತದಲ್ಲಿ ಗಾಯಗೊಂಡು ರಕ್ತದ ಮಡುವಿನಲ್ಲಿ ರೋಗಿ ನರಳುತ್ತಿದ್ದ ನಿಶಾಂತ್ ನನ್ನು ಆಸ್ಪತೆಗೆ ದಾಖಲಿಸಿಕೊಳ್ಳಲು ಸಿಬ್ಬಂದಿ ನಿರ್ಲಕ್ಷ್ಯ ವಹಿಸಿ ರೋಗಿಯನ್ನು ಅಂಬುಲೆನ್ಸ್ ನಲ್ಲೇ ಇರಿಸಿದ್ದಾರೆ.
ಇದಕ್ಕೂ ಮುನ್ನ ಗಂಭೀರವಾಗಿ ಗಾಯಗೊಂಡಿದ್ದ ನಿಶಾಂತ್ ನನ್ನು ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲಿಸಲು ಪೋಷಕರು ಮುಂದಾಗಿದ್ದರು. ಆದರೆ ಅಲ್ಲಿಯ ವೈದ್ಯರು ಚಿಕಿತ್ಸೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದಾಗ ವಿಕ್ಟೋರಿಯಾ ಆಸ್ಪತ್ರೆಗೆ ಕರೆತಂದ ವೇಳೆ ಈ ಅಮಾನವೀಯ ಘಟನೆ ನಡೆದಿದೆ. ನಿಶಾಂತ್ ಹಾಗೂ ಆತನ ಸ್ನೇಹಿತ ಅರುಣ್ ಜೊತೆ ಬೈಕ್ನಲ್ಲಿ ಬರುತ್ತಿರುವಾಗ, ಕೆಂಗೇರಿ ಚೆಕ್ಪೋಸ್ಟ್ ಬಳಿ ಟಾಟಾ ಸುಮೊ ಹಾಗೂ ಅಪಾಚಿ ಬೈಕ್ ನಡುವೆ ಅಪಘಾತ ಸಂಭವಿಸಿತ್ತು.