ದಾವಣಗೆರೆ: ಸುಳ್ಳು ಹೇಳುವುದರಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸಿಎಂ ಕುಮಾರಸ್ವಾಮಿ ನಿಸ್ಸೀಮರು. ಅವರಿಬ್ಬರಿಗೂ ನೊಬೆಲ್ ಪ್ರಶಸ್ತಿ ಕೊಡಿಸಬೇಕು ಎಂದು ಬಿಜೆಪಿ ಮುಖಂಡ ಕೆ ಎಸ್ ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.
ನಗರದಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಈಶ್ವರಪ್ಪ ಅವರು, ಜೆಡಿಎಸ್ ಕಾಂಗ್ರೆಸ್ ಕೇವಲ ಅಧಿಕಾರಕ್ಕೆ ಹೊಂದಾಣಿಕೆ ಮಾಡಿಕೊಂಡಿದೆ. ಅಹಿಂದ ನಾಯಕ ಹಾಗೂ ಮಣ್ಣಿನ ಮಗ ದೇವೇಗೌಡ ಅವರು ಜಂಟಿ ಪ್ರವಾಸ ಮಾಡಲಿ. ಈ ಮೂಲಕ ರಾಜ್ಯದ ಬರದ ಬಗ್ಗೆ ಅಧಿಕಾರಿಗಳ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾರ್ಗದರ್ಶನ ನೀಡಲಿ ಎಂದು ಸಲಹೆ ನೀಡಿದರು.
ಈ ಬಾರಿಯ ಅಧಿವೇಶನ ಉತ್ತರ ಕರ್ನಾಟಕದ ಬಗ್ಗೆ ಯಾವುದೇ ಚರ್ಚೆ ಮಾಡದೇ ವ್ಯರ್ಥ ಅಧಿವೇಶನವನ್ನು ರಾಜ್ಯ ಸರ್ಕಾರ ಮಾಡಿದೆ. ನಿಮ್ಮ ಸರ್ಕಾರ ಎಷ್ಟು ದಿನ ಇರುತ್ತೋ ಗೊತ್ತಿಲ್ಲ. ನೀವು ಘೋಷಣೆ ಮಾಡಿದ್ದನ್ನು ಜನರಿಗೆ ಬಹುಬೇಗ ನೆರವೇರಿಸಿ. 8 ದಿನಗಳ ಅಧಿವೇಶನದಲ್ಲಿ ಇಡೀ ರಾಜ್ಯದ ಯಾವುದೇ ಸಮಸ್ಯೆಗೆ ಸರ್ಕಾರ ಸ್ವಂದಿಸಿಲ್ಲ ಎಂದು ಆರೋಪಿಸಿದರು.
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ಮಾಡಲು ಅವಕಾಶ ಕೊಟ್ಟಿಲ್ಲ. ಕಬ್ಬು ಹಾಗೂ ನೀರಾವರಿ ಬಗ್ಗೆ ಸಮಗ್ರ ಚರ್ಚೆ ನಡೆದಿಲ್ಲ. ಇತ್ತ ಕಾಂಗ್ರೆಸ್ ಶಾಸಕರು ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಳಿದ್ರೆ, ನಾಳೆ ಬಾ ಅಂತಾರೆ. ಸಚಿವ ಸಂಪುಟ ವಿಸ್ತರಣೆ ಮಾಡಿದ ಮಾರನೇ ದಿನ ಸರ್ಕಾರ ಉರುಳುತ್ತದೆ. ಶೀಘ್ರವೇ ಸಮ್ಮಿಶ್ರ ಸರ್ಕಾರ ಬಿದ್ದು ಹೋಗುತ್ತೆ ಎಂದು ಮತ್ತೊಮ್ಮೆ ಭವಿಷ್ಯ ನುಡಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv