ಶಿವಮೊಗ್ಗ: ಸರ್ಕಾರದ ಮಾರ್ಗಸೂಚಿ ಪ್ರಕಾರ ಕೋವಿಡ್ ನಿಯಂತ್ರಣಕ್ಕೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಜನರು ಗೊಂದಲಕ್ಕೆ ಒಳಗಾಗುವ ಅಗತ್ಯ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್ ಎದುರಿಸಲು ಜಿಲ್ಲಾಡಳಿತ ಎಲ್ಲಾ ಸಿದ್ಧತೆಗಳನ್ನು ಕೈಗೊಂಡಿದೆ. ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸಲಾಗಿದ್ದು, ಎಲ್ಲಾ ತಾಲೂಕುಗಳಲ್ಲಿ ಸೂಕ್ತ ಬೆಡ್ ವ್ಯವಸ್ಥೆ, ಆಕ್ಸಿಜನ್ ಲಭ್ಯತೆಯನ್ನು ಖಾತ್ರಿಪಡಿಸಲು ಸೂಚಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜನರು ಗುಂಪು ಸೇರುವುದನ್ನು ತಪ್ಪಿಸಲು ವಾರಾಂತ್ಯ ಕಫ್ರ್ಯೂ ವಿಧಿಸಲಾಗಿದ್ದು, ಜನರು ಭಯಪಡುವ ಅಗತ್ಯ ಇಲ್ಲ ಎಂದರು.
ಟಾಸ್ಕ್ ಫೋರ್ಸ್: ಗ್ರಾಮೀಣ ಮಟ್ಟದಲ್ಲಿ ಈಗಾಗಲೇ ರಚಿಸಲಾಗಿರುವ ಟಾಸ್ಕ್ ಫೋರ್ಸ್ ಮತ್ತೆ ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸಬೇಕು. ಗ್ರಾಮ ಪಂಚಾಯತ್ ಅಧ್ಯಕ್ಷರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚಿಸಲಾಗಿದ್ದು, ಅದರಲ್ಲಿರುವ ಅಧಿಕಾರಿಗಳು ಸಕ್ರಿಯವಾಗಿ ಸಭೆಗಳಲ್ಲಿ ಭಾಗವಹಿಸುವುದು ಸೇರಿದಂತೆ ಕರ್ತವ್ಯ ನಿರ್ವಹಿಸಬೇಕು. ಈ ಕುರಿತು ಯಾವುದೇ ದೂರುಗಳು ಬರಬಾರದು ಎಂದರು.
ಲಸಿಕೆ ಅಭಿಯಾನ: 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ನೀಡುವ ಪ್ರಕ್ರಿಯೆಗೆ ಜ.10 ರಿಂದ ಜಿಲ್ಲೆಯಾದ್ಯಂತ ಚಾಲನೆ ನೀಡಲಾಗುವುದು. ಈಗಾಗಲೇ ಎರಡನೇ ಡೋಸ್ ಪಡೆದು 90 ದಿನ ಕಳೆದಿರುವವರು ಬೂಸ್ಟರ್ ಡೋಸ್ ಪಡೆಯಬಹುದಾಗಿದೆ. ಬೂಸ್ಟರ್ ಡೋಸ್ ಪಡೆಯಲು ಜಿಲ್ಲೆಯಲ್ಲಿ ಒಟ್ಟು 2 ಲಕ್ಷ ಫಲಾನುಭವಿಗಳಿದ್ದಾರೆ. ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಬೂಸ್ಟರ್ ಡೋಸ್ ನೀಡಲು ವ್ಯವಸ್ಥೆ ಮಾಡಲಾಗುವುದು. ಇದೇ ರೀತಿ ಈಗಾಗಲೇ 15-18 ವರ್ಷದ ಒಳಗಿನವರಿಗೆ ಲಸಿಕೆ ನೀಡುವ ಕಾರ್ಯ ನಡೆಯುತ್ತಿದ್ದು, ಡಿಸೆಂಬರ್ 12ರ ಒಳಗಾಗಿ ಎಲ್ಲಾ 83,831 ಮಂದಿಗೆ ಲಸಿಕೆ ನೀಡುವ ಕಾರ್ಯ ಪೂರ್ಣಗೊಳಿಸಬೇಕು ಎಂದರು. ಇದನ್ನೂ ಓದಿ: ಸಶಸ್ತ್ರಪಡೆಗಳಲ್ಲಿ ಮಹಿಳೆಯರಿಗೆ ಅವಕಾಶ ಹೆಚ್ಚಿಸಲು ನೂರು ಸೈನಿಕ ಶಾಲೆಗಳ ಸ್ಥಾಪನೆ: ರಾಜನಾಥ್ ಸಿಂಗ್
ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಮಾತನಾಡಿ, ಕೋವಿಡ್ ಮೂರನೇ ಅಲೆಯನ್ನು ಎದುರಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ 1382 ಬೆಡ್ ಗಳು ಲಭ್ಯವಿದ್ದು, 640 ಬೆಡ್ ಗಳನ್ನೂ ಕೋವಿಡ್ ಗಾಗಿ ಮೀಸಲಿರಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 94 ಸಾವಿರ ಕಿಲೋ ಲೀಟರ್ ಆಕ್ಸಿಜನ್ ಸಂಗ್ರಹಣಾ ಸಾಮರ್ಥ್ಯದ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಅಧಿಕಾರದಲ್ಲಿದ್ದಾಗ ಕುಂಭಕರ್ಣ ನಿದ್ದೆ, ಈಗ ಮೇಕೆದಾಟು ಹೋರಾಟ: ಡಿಕೆಶಿಗೆ ಕಾರಜೋಳ ಟಾಂಗ್
ಸಭೆಯಲ್ಲಿ ಶಾಸಕರಾದ ಅಶೋಕ್ ನಾಯ್ಕ್, ರುದ್ರೇಗೌಡ, ಡಿ. ಎಸ್. ಅರುಣ್, ಜಿ.ಪಂ. ಸಿಇಒ ಎಂ.ಎಲ್. ವೈಶಾಲಿ, ಎಸ್.ಪಿ. ಲಕ್ಷ್ಮಿ ಪ್ರಸಾದ್ ಇತರರಿದ್ದರು.