– ಬಿಜೆಪಿ ಜೊತೆಗೆ ವಿಶ್ವಾಸ ಸಾಧಿಸಿದ್ರೆ ಮುಸ್ಲಿಮರಿಗೆ ಟಿಕೆಟ್ ನೀಡುತ್ತೇವೆ
ಬೆಳಗಾವಿ (ಚಿಕ್ಕೋಡಿ): ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಅವರು, ಮಹಾತ್ಮಾ ಗಾಂಧೀಜಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇರುವ ವ್ಯತ್ಯಾಸವನ್ನು ತಿಳಿಸಿದ್ದಾರೆ.
ಚಿಕ್ಕೋಡಿ ಪಟ್ಟಣದ ಆರ್.ಡಿ.ಮೈದಾನದಲ್ಲಿ ನಡೆದ ಬಿಜೆಪಿ ಬಹಿರಂಗ ಸಮಾವೇಶದಲ್ಲಿ ಮಾತನಾಡಿ ಅವರು, ಒಂದು ಕೆನ್ನೆಗೆ ಹೊಡೆದರೆ ಇನ್ನೊಂದು ಕನ್ನೆಯನ್ನು ಮಹಾತ್ಮ ಗಾಂಧೀಜಿ ತೋರಿಸ್ತಿದ್ದರು. ಆದರೆ ಪ್ರಧಾನಿ ಮೋದಿ ಅವರ ಒಂದು ಕೆನ್ನೆಗೆ ಹೊಡೆದರೆ, ಹೊಡೆದವರನ್ನ ಹುಟ್ಟಲಿಲ್ಲ ಅನಿಸುತ್ತಾರೆ. ಇದೇ ಪ್ರಧಾನಿ ನರೇಂದ್ರ ಮೋದಿ ಮತ್ತು ಮಹಾತ್ಮಾ ಗಾಂಧೀಜಿ ಅವರಿಗೆ ಇರುವ ವ್ಯತ್ಯಾಸ ಎಂದು ಹೇಳಿದ್ದಾರೆ.
ಇದಕ್ಕೂ ಮುನ್ನ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಣ್ಣಾ ಸಾಹೇಬ ಜೊಲ್ಲೆ ಅವರ ನಾಮಪತ್ರ ಸಲ್ಲಿಸಿದರು. ಈ ವೇಳೆ ಮಾತನಾಡಿದ ಕೆ.ಎಸ್.ಈಶ್ವರಪ್ಪ ಅವರು, ಜೆಡಿಎಸ್ ಅಭ್ಯರ್ಥಿಗಳಿಗೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಬೆಂಬಲ ನೀಡುತ್ತಿಲ್ಲ ಎಂದು ಸಚಿವ ಜಿ.ಟಿ.ದೇವೇಗೌಡ ಅವರು ಆರೋಪಿಸಿದ್ದಾರೆ. ಈ ಮೂಲಕ ಮೈತ್ರಿಯಲ್ಲಿ ಭಿನ್ನಮತ ಎದ್ದಿದ್ದು, ಅವರಿಗೆ ಭಾರೀ ಹಿನ್ನಡೆಯಾಗುತ್ತದೆ. ರಾಜ್ಯದಲ್ಲಿ ಬಿಜೆಪಿಯು 25 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದರು.
ರಾಜ್ಯದ ಲೋಕಸಭಾ ಕ್ಷೇತ್ರಗಳಲ್ಲಿ ಮುಸ್ಲಿಂ ಮುಖಂಡರಿಗೆ ಬಿಜೆಪಿ ಟಿಕೆಟ್ ನೀಡುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ ಅವರು, ಅವರು ಪಕ್ಷದ ವಿಶ್ವಾಸವನ್ನು ಸಾಧಿಸಬೇಕು. ಆದರೆ ಈ ಬಾರಿ ಅಂತಹ ನಡತೆ ಕಂಡು ಬಂದಿಲ್ಲ. ಹೀಗಾಗಿ ಯಾರಿಗೂ ಟಿಕೆಟ್ ನೀಡಿಲ್ಲ. ದೇಶವನ್ನು ಪ್ರೀತಿಸುವ ಮುಸ್ಲಿಮರು ನಮಗೆ ವೋಟ್ ಮಾಡುತ್ತಿದ್ದಾರೆ. ಸ್ವಾತಂತ್ರ್ಯ ನಂತರ ಮುಸ್ಲಿಮರು ಹೆಚ್ಚಾಗಿ ಕಾಂಗ್ರೆಸ್ ನಂಬಿಕೊಂಡು ಬಂದಿದ್ದಾರೆ ಎಂದು ಹೇಳಿದರು.