ಮೈಸೂರು: ಕಾವೇರಿ ಜಲಾನಯನ ವ್ಯಾಪ್ತಿಯ ಕಬಿನಿ ಜಲಾಶಯ ಭರ್ತಿಯಾಗಿದೆ. ಭಾರೀ ಪ್ರಮಾಣದಲ್ಲಿ ಜಲಾಶಯಕ್ಕೆ ನೀರು ಹರಿದು ಬರುತ್ತಿರುವ ಕಾರಣ ಡ್ಯಾಂನಿಂದ 85 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿದುಬಿಡಲಾಗುತ್ತಿದೆ.
ಇಂದು ಬೆಳಗ್ಗೆ 50 ಸಾವಿರ ಕ್ಯೂಸೆಕ್ ನೀರು ಬರುತಿತ್ತು. ಕ್ಷಣಕ್ಕೆ ನೀರಿನ ಮಟ್ಟ ಹೆಚ್ಚುತ್ತಿದ್ದ ಹಿನ್ನೆಲೆಯಲ್ಲಿ ಮಧ್ಯಾಹ್ನದ ವೇಳೆ 85 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಹೀಗಾಗಿ ಅಷ್ಟೇ ಪ್ರಮಾಣದ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ.
ಗರಿಷ್ಠ ಮಟ್ಟ 84 ಅಡಿ ಇರುವ ಕಬಿನಿ ಜಲಾಶಯದ ನೀರಿನ ಮಟ್ಟ ಬುಧವಾರ 80 ಅಡಿ ಇತ್ತು. ಈಗ 83 ಅಡಿಗೆ ತಲುಪುತ್ತಿದ್ದಂತೆ ನೀರನ್ನು ಹೊರ ಬಿಡಲಾಗುತ್ತಿದೆ.
ಭಾರೀ ಪ್ರಮಾಣದಲ್ಲಿ ನೀರನ್ನು ಹರಿ ಬಿಡುತ್ತಿರುವ ಹಿನ್ನೆಲೆಯಲ್ಲಿ ನಂಜನಗೂಡು, ಟಿ ನರಸಿಪುರ, ಎಚ್ಡಿ ಕೋಟೆಯಲ್ಲಿರುವ ನದಿ ವ್ಯಾಪ್ತಿಯ ಗ್ರಾಮದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರೀ ಪ್ರಮಾಣದಲ್ಲಿ ನೀರು ಬಿಟ್ಟ ಹಿನ್ನೆಲೆಯಲ್ಲಿ ನಂಜನಗೂಡು ಸೇತುವೆ ಇಂದೇ ಮುಳುಗಡೆಯಾಗುವ ಸಾಧ್ಯತೆಯಿದೆ.