ಕಲಬುರಗಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಈಗಾಗಲೇ ದೇಶದಾದ್ಯಂತ ತೀವ್ರ ಸ್ವರೂಪದ ಹೋರಾಟಗಳು ನಡೆಯುತ್ತಿವೆ. ಇತ್ತ ಕಲಬುರಗಿಯಲ್ಲಿಯೂ ಸಿಎಎ ವಿರೋಧಿಸಿ ಪ್ರತಿಭಟನೆಗಳು ನಡೆಯುತ್ತಿವೆ.
ಆದರೆ ಕಲಬುರಗಿಯ ಶ್ರೀರಾಮ್ ಸೇನೆ ಜಿಲ್ಲಾ ಘಟಕ ಪೌರತ್ವ ತಿದ್ದುಪಡಿ ಕಾಯ್ದೆ ಕಟ್ಟು ನಿಟ್ಟಾಗಿ ಜಾರಿಗೊಳಿಸಬೇಕೆಂದು ಆಗ್ರಹಿಸಿದೆ. ಪೌರತ್ವ ತಿದ್ದುಪಡಿ ಮಸೂದೆ ಅಂಗೀಕರಿಸಿದ್ದಕ್ಕೆ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದರು. ಅಲ್ಲದೆ ಪೌರತ್ವ ವಿರುದ್ಧದ ಹೋರಾಟಕ್ಕೆ ಮಣಿದು ಯಾವುದೇ ಕಾರಣಕ್ಕೂ ಮಸೂದೆ ಹಿಂಪಡೆಯಬಾರದು. ಸಿಎಎ ಮಸೂದೆಯನ್ನು ಯಥಾವತ್ತಾಗಿ ಕಟ್ಟು ನಿಟ್ಟಾಗಿ ಜಾರಿಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.
ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಮೆರವಣಿಗೆ ನಡೆಸಲು ಶ್ರೀರಾಮ್ ಸೇನೆ ಮುಖಂಡರು, ಕಾರ್ಯಕರ್ತರು ಪ್ಲ್ಯಾನ್ ಮಾಡಿಕೊಂಡಿದ್ದರು. ಆದರೆ ಪೊಲೀಸರು ಮೆರವಣಿಗೆಗೆ ಅವಕಾಶ ನೀಡದ ಕಾರಣ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಡಿಸಿ ಮುಖಾಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಸಲ್ಲಿಸಿದ್ದಾರೆ.