ಕಲಬುರಗಿ: ಕಾಂಗ್ರೆಸ್ ಭದ್ರಕೋಟೆ ಕಲಬುರಗಿ ಕ್ಷೇತ್ರದಲ್ಲಿ ಬಿಜೆಪಿ ಟಫ್ ಫೈಟ್ ನೀಡುತ್ತಿದ್ದು, ಇದೀಗ ಬಿಜೆಪಿ ನಾಯಕರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ಹೌದು. ಸೂಫಿ ನಾಡು ಕಲಬುರಗಿ ಜಿಲ್ಲೆಯಲ್ಲಿ ಇದೀಗ ಲೋಕಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ರಂಗೆರುತ್ತಿದ್ದು, ಇದೇ ಮೊದಲ ಬಾರಿಗೆ ಕೈ ಮುಖಂಡ ಮಲ್ಲಿಕಾರ್ಜುನ ಖರ್ಗೆಗೆ ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ ಜಾಧವ್ ಪ್ರಬಲವಾಗಿ ಪೈಪೋಟಿ ನೀಡುತ್ತಿದ್ದಾರೆ. ಇದನ್ನು ಸಹಿಸಿಕೊಳ್ಳದ ಕೆಲ ಪುಡಾರಿಗಳು ಕಲಬುರಗಿ ಗ್ರಾಮೀಣ ಜಿಲ್ಲಾಧ್ಯಕ್ಷೆ ದಿವ್ಯಾ ಹಾಗರಗಿ ಹಾಗು ರಾಹುಲ್ ಎಂಬವರ ಮನೆ ಮತ್ತು ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ್ದಾರಂತೆ. ಈ ಮೂಲಕ ಬಿಜೆಪಿ ನಾಯಕರನ್ನು ಹತ್ತಿಕಲು ಕೈ ಕುತಂತ್ರವನ್ನು ಮಾಡುತ್ತಿದೆ ಎಂದು ಬಿಜೆಪಿ ನಿಯೋಗ ಇದೀಗ ಚುನಾವಣಾಧಿಕಾರಿಗೆ ದೂರು ನೀಡಿ ಸೂಕ್ತ ಭದ್ರತೆ ನೀಡುವಂತೆ ಮನವಿ ಸಲ್ಲಿಸಿದೆ.
2014ರ ಚುನಾವಣೆಯಲ್ಲಿ ಅಲ್ಪಸಂಖ್ಯಾತರು ಇರುವ ಕೆಲ ಮತಗಟ್ಟೆಗಳಲ್ಲಿ ಶೇ.90ರಷ್ಟು ಮತದಾನವಾಗಿದ್ದು, ಅಂತಹ ಬೂತ್ಗಳನ್ನು ಸೂಕ್ಷ್ಮ ಮತಗಟ್ಟೆ ಎಂದು ಪರಗಣಿಸಿ ಸೂಕ್ತ ಭದ್ರತೆ ನೀಡಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಇನ್ನು ಜಾಧವ್ ಹೆಸರಿನ ಮೂರು ಜನ ಪಕ್ಷೇತರ ಅಭ್ಯರ್ಥಿಗಳನ್ನು ನಿಲ್ಲಿಸಿ ಕೈ ನಾಯಕರು ಸಿಲ್ಲಿ ಪಾಲಿಟಿಕ್ಸ್ ಎಂದು ಬಿಜೆಪಿ ಆರೋಪಿಸಿದೆ. ಇದಕ್ಕೆ ತಿರುಗೇಟು ನೀಡಿರುವ ಮಲ್ಲಿಕಾರ್ಜುನ ಖರ್ಗೆ, ನನ್ನ 40 ವರ್ಷದ ರಾಜಕಾರಣದಲ್ಲಿ ಸಿಲ್ಲಿ ರಾಜಕೀಯ ಮಾಡಿಲ್ಲವೆಂದು ಹೇಳಿದ್ದಾರೆ.
ಬಿಜೆಪಿ ಅಭ್ಯರ್ಥಿ ಪರ ಬ್ಯಾಟ್ ಬೀಸಿದ ಕೈ ಮುಖಂಡ ಅಜಗರ್ ಮೇಲೆಯೂ ಹಲ್ಲೆ ಮಾಡಲಾಗಿದೆ. ಇದೆಲ್ಲವನ್ನು ನೋಡಿದ್ರೆ ಈ ಬಾರಿ ಕಲಬುರಗಿ ಲೋಕಸಭೆ ಸೂಕ್ತ ಭದ್ರತೆ ನೀಡಲಿಲ್ಲ ಅಂದ್ರೆ, ಪಾರದರ್ಶಕ ಚುನಾವಣೆ ನಡೆಯುವುದು ಬಹುತೇಕ ಅನುಮಾನ ಮೂಡಿಸುತ್ತಿದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.