ಕಲಬುರಗಿ: ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಲು ಮುಸ್ಲಿಂ ಬಾಂಧವರು ಕರೆ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣ ಮತ್ತು ವಾಟ್ಸಪ್ ನಲ್ಲಿ ವೈರಲ್ ಆಗಿದೆ.
ನಗರದಲ್ಲಿ ನಡೆದ ಆಲ್ ಇಂಡಿಯಾ ಮಿಲ್ಲಿ ಕೌನ್ಸಿಲ್ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಈ ಮೂಲಕ ಮುಸ್ಲಿಂ ಬಾಂಧವರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಲು ಪಣ ತೊಟ್ಟಿದ್ದಾರೆ ಎನ್ನಲಾಗುತ್ತಿದೆ.
ಮಾಜಿ ಸಚಿವ ಖಮರುಲ್ ಇಸ್ಲಾಂ ಅವರ ಕೊನೆಯ ದಿನಗಳಲ್ಲಿ ಮಲ್ಲಿಕಾರ್ಜುನ ಖರ್ಗೆ ನಡೆದುಕೊಂಡ ರೀತಿ ಸರಿಯಲ್ಲ. ಖಮರುಲ್ ಆತ್ಮಕ್ಕೆ ಶಾಂತಿ ಸಿಗಬೇಕು ಅಂದ್ರೆ ಅವರ ಆಸೆಯಂತೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ನಾವು ಸೋಲಿಸಬೇಕಾಗಿದೆ. ಹೀಗಾಗಿ ಮುಸ್ಲಿಂ ಬಾಂಧವರು ಒಂದಾಗಬೇಕು ಎಂದು ಮಿಲ್ಲಿ ಸದಸ್ಯ ಖರೀಂಉಲ್ ಹುಸೇನಿ ಹೇಳಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಬಿಜೆಪಿಯಿಂದ ಕಣಕ್ಕೆ ಇಳಿಯಲಿರುವ ಉಮೇಶ್ ಜಾಧವ್ ಅವರಿಗೆ ಮತ ಹಾಕುಬೇಕು. ಈ ಮೂಲಕ ಖರ್ಗೆ ಅವರನ್ನು ಹಿನಾಯವಾಗಿ ಸೋಲಿಸಿ, ಉಮೇಶ್ ಜಾಧವ್ ಅವರನ್ನು ಗೆಲ್ಲಿಸಬೇಕು ಎಂದು ಮಿಲ್ಲಿ ಸದಸ್ಯ ನವಾಜ್ ಖಾನ್ ಸಮುದಾಯದ ಜನರಿಗೆ ಕೇಳಿಕೊಂಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv