ಧಾರವಾಡ: ಅಕ್ರಮ ಆಸ್ತಿ ಗಳಿಕೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ರೈಲ್ವೇ ಪೊಲೀಸ್ ಠಾಣೆಯ ಸಬ್ಇನ್ಸ್ ಪೆಕ್ಟರ್ ಕೆ.ಮಲ್ಲೇಶ್ ಅವರ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಹುಬ್ಬಳ್ಳಿಯ ರೈಲ್ವೇ ಪೊಲೀಸ್ ಠಾಣೆಯ ಕ್ರೈಂ ವಿಭಾಗದಲ್ಲಿ ಸಬ್ಇನ್ಸ್ ಪೆಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಕೆ. ಮಲ್ಲೇಶ್ ಮೂಲತಃ ರಾಮನಗರ ಜಿಲ್ಲೆಯ ಚನ್ನಪಟ್ಟಣದ ನಿವಾಸಿ ಆಗಿದ್ದು, ಬೆಂಗಳೂರು, ಮೈಸೂರು ಸೇರಿದಂತೆ ಚನ್ನಪಟ್ಟಣದಲ್ಲಿ ಅಕ್ರಮವಾಗಿ ಆಸ್ತಿ ಮಾಡಿದ್ದಾರೆ ಎನ್ನಲಾಗುತ್ತಿದೆ.
ಸೂಕ್ತ ಮಾಹಿತಿ ಮೇರೆಗೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳನ್ನ ಪರಿಶೀಲನೆ ಮಾಡುತಿದ್ದಾರೆ. ಈ ಹಿಂದೆ ಬೆಂಗಳೂರಿನ ರೈಲ್ವೇ ಪೊಲೀಸ್ ಠಾಣೆಯ ಕ್ರೈಂ ವಿಭಾಗದ ಸಬ್ಇನ್ಸ್ ಪೆಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ ಅವರನ್ನು ಏಪ್ರಿಲ್ 21 ರಂದು ಹುಬ್ಬಳ್ಳಿಗೆ ವರ್ಗಾವಣೆ ಮಾಡಲಾಗಿತ್ತು.
ಇದೇ ತಿಂಗಳು 30 ರಂದು ಕೆ.ಮಲ್ಲೇಶ್ ಅವರು ಕೆಲಸದಿಂದ ನಿವೃತ್ತಿಯಾಗಲಿದ್ದು, ಅವರು ಕೆಲಸ ಮಾಡಿದ ಬೆಂಗಳೂರು ಮತ್ತು ಹುಬ್ಬಳ್ಳಿ ಕಚೇರಿಯಲ್ಲಿ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.