ಬೆಂಗಳೂರು: ಉಪ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಮೈತ್ರಿ ಮುರಿದು ಸ್ವತಂತ್ರವಾಗಿ ಕಣಕ್ಕೆ ಇಳಿಯುತ್ತಿರುವ ಕಾಂಗ್ರೆಸ್ 8 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.
ರಾಜ್ಯದ 15 ಕ್ಷೇತ್ರಗಳ ಚುನಾವಣೆ ಡಿಸೆಂಬರ್ 5ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ 15 ಕ್ಷೇತ್ರಗಳ ಪೈಕಿ 8 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅನುಮೋದನೆ ನೀಡಿದ್ದಾರೆ. ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ಉಪಚುನಾವಣೆ ಕಣಕ್ಕೆ ಇಳಿಯಲಿದ್ದಾರೆ. ಇದನ್ನೂ ಓದಿ: ಉಪಚುನಾವಣೆ ಹತ್ತಿರ ಬರ್ತಿದ್ದಂತೆ ಗೊಂದಲದಲ್ಲಿ ಬಿಎಸ್ವೈ!
ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿಯವರ ಒಪ್ಪಿಗೆಯ ಮೇರೆಗೆ ಕರ್ನಾಟಕದ 8 ವಿಧಾನ ಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಅಭ್ಯರ್ಥಿಗಳಿಗೆ ಅಭಿನಂದನೆಗಳು.#byelections2019 pic.twitter.com/fOwFs0H9ui
— Karnataka Congress (@INCKarnataka) October 31, 2019
ಯಾವ ಕ್ಷೇತ್ರದಲ್ಲಿ ಯಾರು ಸ್ಪರ್ಧೆ?
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಕ್ಷೇತ್ರದಿಂದ ಭೀಮಣ್ಣ ನಾಯಕ್, ಹಾವೇರಿ ಜಿಲ್ಲೆಯ ಹಿರೇಕೆರೂರು ಕ್ಷೇತ್ರದಿಂದ ಬಿ.ಎಚ್.ಬನ್ನಿಕೋಡ, ರಾಣೆಬೆನ್ನೂರು ಕ್ಷೇತ್ರದಿಂದ ಕೆ.ಬಿ.ಕೋಳಿವಾಡ ಹಾಗೂ ಚಿಕ್ಕಬಳ್ಳಾಪುರದಿಂದ ಎಂ.ಆಂಜನಪ್ಪ ಅಭ್ಯರ್ಥಿಗಳಾಗಿ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: ಮಸ್ಕಿ, ಆರ್ಆರ್ ನಗರ ಕ್ಷೇತ್ರಕ್ಕೆ ಯಾಕಿಲ್ಲ ಎಲೆಕ್ಷನ್?
ಉಳಿದಂತೆ ಬೆಂಗಳೂರಿನ ಕೆ.ಆರ್.ಪುರ ಕ್ಷೇತ್ರದಿಂದ ಎಂ.ನಾರಾಯಣಸ್ವಾಮಿ, ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದಿಂದ ಎಂ.ಶಿವರಾಜ್, ಹೊಸಕೋಟೆಯಿಂದ ಪದ್ಮಾವತಿ ಸುರೇಶ್ ಹಾಗೂ ಮೈಸೂರು ಜಿಲ್ಲೆ ಹುಣಸೂರು ಕ್ಷೇತ್ರದಿಂದ ಎಚ್.ಪಿ.ಮಂಜುನಾಥ್ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಸ್ಪರ್ಧಿಸಲಿದ್ದಾರೆ. ಮುಂದಿನ ದಿನಗಳಲ್ಲಿ ಉಳಿದ 7 ಕ್ಷೇತ್ರಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ.
ಉಪ ಚುನಾವಣೆ ಅಧಿಸೂಚನೆಯು ನವೆಂಬರ್ 11ರಂದು ಪ್ರಕಟವಾಗಲಿದ್ದು, ನವೆಂಬರ್ 18 ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದೆ. ನವೆಂಬರ್ 19 ನಾಮಪತ್ರಗಳ ಪರಿಶೀಲನೆ, ನವೆಂಬರ್ 21ರಂದು ನಾಮಪತ್ರ ವಾಪಸ್ ಪಡೆಯಲು ಕೊನೆ ದಿನವಾಗಿರುತ್ತದೆ. ಡಿಸೆಂಬರ್ 5ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 9ರಂದು ಫಲಿತಾಂಶ ಪ್ರಕಟವಾಗಲಿದೆ.