ಬೆಂಗಳೂರು: ರಾಜಕೀಯ ಪಕ್ಷಗಳ ಪ್ರಚಾರದ ಭರಾಟೆ ನಡುವೆ, ಕರ್ನಾಟಕ ಕುರುಕ್ಷೇತ್ರಕ್ಕೆ ಮುಹೂರ್ತ ಬಹುತೇಕ ಫಿಕ್ಸ್ ಆಗಿದೆ. ಕೇಂದ್ರ ಚುನಾವಣಾ ಆಯೋಗ ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಸಲು ಆಸಕ್ತಿ ತೋರಿದ್ದು, ಮೇ 10 ರಂದು ಮತದಾನಕ್ಕೆ ದಿನಾಂಕ ನಿಗದಿ ಮಾಡಲು ಚಿಂತನೆ ನಡೆಸಿದೆ ಎನ್ನಲಾಗಿದೆ.
ರಾಜ್ಯ ಸರ್ಕಾರ ಒಂದೇ ಹಂತದ ಚುನಾವಣೆ ನಡೆಸಲು ಅಪಸ್ವರ ಎತ್ತಿದ್ದು, ಕಾನೂನು ಸುವ್ಯವಸ್ಥೆಯ ನೆಪ ಹೇಳಿ ಎರಡು ಹಂತಗಳಲ್ಲಿ ಚುನಾವಣೆ ನಡೆಸುವಂತೆ ಆಯೋಗಕ್ಕೆ ಮನವಿ ಮಾಡಿಕೊಂಡಿದೆ. ಆದರೆ ಈ ವಿಚಾರ ನಮ್ಮ ಕೈಯಲ್ಲಿ ಇಲ್ಲ. ಮುಖ್ಯ ಚುನಾವಣಾ ಆಯುಕ್ತರೇ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಉಪ ಆಯುಕ್ತ ಉಮೇಶ್ ಸಿನ್ಹಾ ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ.
ಒಂದು ವೇಳೆ ರಾಜ್ಯ ಸರ್ಕಾರದ ಮನವಿಗೆ ಕೇಂದ್ರ ಚುನಾವಣಾ ಆಯೋಗ ಸ್ಪಂದಿಸಿದರೆ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೇ 2ರಂದು ಮೊದಲನೇ ಹಂತದ ಚುನಾವಣೆ ನಡೆದರೆ ಮೇ 10ರಂದು ಎರಡನೇ ಹಂತದ ಚುನಾವಣೆ ನಡೆಯುವ ಸಾಧ್ಯತೆ ಇದೆ. ಮೇ 14ರಂದು ಮತ ಎಣಿಕೆ ನಡೆಯುವ ಸಂಭವ ಇದೆ.
ಅಭ್ಯರ್ಥಿಯ ಚುನಾವಣೆ ವೆಚ್ಚವನ್ನು ಏಳೂವರೆ ಲಕ್ಷದಿಂದ 28 ಲಕ್ಷ ರೂಪಾಯಿಗೆ ಏರಿಸಲಾಗಿದೆ. ಪ್ರತಿಯೊಂದು ಮತಗಟ್ಟೆ ಬಳಿ ಅಶಕ್ತರು, ವೃದ್ಧರಿಗೆ ನೆರವಾಗಲು ವೀಲ್ ಚೇರ್ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಮತದಾರ ಪಟ್ಟಿಗೆ ಹೆಸರು ಸೇರ್ಪಡೆಗೆ ನೀಡಲಾಗಿರುವ ಜನವರಿ 12ರ ಗಡುವನ್ನು ವಿಸ್ತರಿಸಲು ಆಯೋಗ ಚಿಂತನೆ ನಡೆಸಿದೆ. ಕಾಂಗ್ರೆಸ್ ಪಕ್ಷ ಬ್ಯಾಲೆಟ್ ಪೇಪರ್ ಬಳಕೆ ಮನವಿಯನ್ನು ತಳ್ಳಿಹಾಕಿರುವ ಆಯೋಗ ಇವಿಎಂ ಜೊತೆಗೆ ವಿವಿ ಪ್ಯಾಟ್ ಅಳವಡಿಸಲಿದೆ.