ಬೆಂಗಳೂರು : ನಾಳೆಯಿಂದ ವಿಧಾನಮಂಡಲದ ಜಂಟಿ ಅಧಿವೇಶನ ಆರಂಭವಾಗಲಿದೆ. ಜೊತೆಗೆ ನಾಳೆ ವಿಧಾನ ಪರಿಷತ್ ಒಂದು ಸ್ಥಾನಕ್ಕೆ ಉಪಚುನಾವಣೆಯೂ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು ಸಿಎಂ ಯಡಿಯೂರಪ್ಪನವರು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯನ್ನು ಬೆಂಗಳೂರಿನ ಖಾಸಗಿ ಹೊಟೇಲಿನಲ್ಲಿ ಕರೆದಿದ್ದಾರೆ.
ಇಂದು ಸಂಜೆ 7 ಗಂಟೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಪಕ್ಷದ ಎಲ್ಲ 117 ಶಾಸಕರಿಗೂ ಶಾಸಕಾಂಗ ಪಕ್ಷದ ಸಭೆಗೆ ಕಡ್ಡಾಯವಾಗಿ ಬರಬೇಕೆಂದು ಈಗಾಗಲೇ ಸಂದೇಶ ನೀಡಲಾಗಿದೆ.
ಅಧಿವೇಶನದ ಮೊದಲ ದಿನವೇ ರಾಜ್ಯಪಾಲರು ಜಂಟಿ ಸದನವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ನಂತರ ವಿಧಾನ ಪರಿಷತ್ ಒಂದು ಸ್ಥಾನಕ್ಕೆ ವಿಧಾನಸಭೆಯಿಂದ ಚುನಾವಣೆ ಪ್ರಕ್ರಿಯೆ ನಡೆಯಲಿದೆ. ಪಕ್ಷೇತರ ಅಭ್ಯರ್ಥಿ ಕೊನೆಯ ಕ್ಷಣದಲ್ಲಿ ಕಣದಿಂದ ನಿವೃತ್ತಿ ಘೋಷಿಸಿದರೂ ನಿಗದಿಯಂತೆ ಚುನಾವಣಾ ಪ್ರಕ್ರಿಯೆ ನಡೆಯಲಿದೆ. ಬಿಜೆಪಿ ಅಭ್ಯರ್ಥಿಯಾಗಿ ಡಿಸಿಎಂ ಲಕ್ಷ್ಮಣ್ ಸವದಿ ಮಾತ್ರ ಕಣದಲ್ಲಿದ್ದು, ಗೆಲುವು ನಿರೀಕ್ಷಿತ. ಆದರೂ ಚುನಾವಣಾ ಪ್ರಕ್ರಿಯೆಯಲ್ಲಿ ಎಲ್ಲ ಶಾಸಕರೂ ಕಡ್ಡಾಯವಾಗಿ ಹಾಜರಿರಬೇಕೆಂದು ಇಂದಿನ ಶಾಸಕಾಂಗ ಪಕ್ಷದ ಸಭೆಯಲ್ಲಿ ವಿಪ್ ಜಾರಿ ಮಾಡಲಾಗುತ್ತದೆ. ವಿಧಾನಸಭೆಯಲ್ಲಿ ಆಡಳಿತ ಪಕ್ಷದ ಮುಖ್ಯ ಸಚೇತಕ ಸುನೀಲ್ ಕುಮಾರ್ ಪಕ್ಷದ ಶಾಸಕರಿಗೆ ವಿಪ್ ಜಾರಿ ಮಾಡಲಿದ್ದಾರೆ.
ಜಂಟಿ ಅಧಿವೇಶನದಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ, ಟೀಕೆಗಳಿಗೆ ತಕ್ಕ ಉತ್ತರ ಕೊಡಲು ಇವತ್ತಿನ ಸಭೆಯಲ್ಲಿ ರಣತಂತ್ರ ಹೆಣೆಯಲಾಗುತ್ತದೆ. ವಿಪಕ್ಷಗಳು ಸರ್ಕಾರವನ್ನು ಕಟ್ಟಿ ಹಾಕಲು ತಂತ್ರ ಹೆಣೆದಿವೆ. ವಿಪಕ್ಷಗಳ ಅಸ್ತ್ರಗಳಿಗೆ ಇವತ್ತಿನ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಪ್ರತಿ ಅಸ್ತ್ರ ಹೂಡುವ ಕುರಿತು ಚರ್ಚಿಸಲಾಗುತ್ತದೆ.
ಮುಖ್ಯವಾಗಿ ಸರ್ಕಾರವನ್ನು ಸಮರ್ಥಿಸಿಕೊಳ್ಳಲು ನೂತನ ಸಚಿವರಿಗೆ ಸಿಎಂ ಯಡಿಯೂರಪ್ಪ ಪಾಠ ಮಾಡಲಿದ್ದಾರೆ. ವಲಸಿಗ ಸಚಿವರು ಇತ್ತೀಚೆಗಷ್ಟೇ ಸಂಪುಟ ಸೇರ್ಪಡೆಯಾಗಿದ್ದಾರೆ. ತಮ್ಮ ತಮ್ಮ ಇಲಾಖೆಗಳ ಬಗ್ಗೆ ಇನ್ನೂ ಯಾವುದೇ ಅರಿವು ಈ ಹೊಸ ಸಚಿವರಿಗೆ ಇಲ್ಲ. ಹೀಗಾಗಿ ಸದನದಲ್ಲಿ ಹೇಗಿರಬೇಕು, ವಿಪಕ್ಷಗಳ ಪ್ರಶ್ನೆಗಳಿಗೆ ಯಾವ ರೀತಿ ಉತ್ತರಿಸಬೇಕೆಂದು ನೂತನ ಸಚಿವರಿಗೆ ಇಂದು ಸಿಎಂ ಯಡಿಯೂರಪ್ಪ ಪಾಠ ಮಾಡಲಿದ್ದಾರೆ.