ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳನ್ನು ಅಭಿವೃದ್ಧಿ ಪಡಿಸಲು 3,885 ಕೋಟಿ ರೂಪಾಯಿಗಳ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ 4ನೇ ಹಂತದ ಕ್ರಿಯಾ ಯೋಜನೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
2022-23 ರಿಂದ 24-25 ನೇ ಸಾಲಿನ ಈ ಕ್ರಿಯಾ ಯೋಜನೆಯನ್ನು ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ಸಮಗ್ರ ಅಭಿವೃದ್ಧಿಯನ್ನು ಕೇಂದ್ರೀಕರಿಸಿ ಮೂಲ ಸೌಲಭ್ಯಗಳ ಕೊರತೆ ನೀಗಿಸಲು ರೂಪಿಸಲಾಗಿದೆ. ಇದನ್ನೂ ಓದಿ: ಇಡಿಯಿಂದ ಸ್ಯಾಂಡಲ್ವುಡ್ ನಿರ್ಮಾಪಕ ಆನಂದ್ ಅಪ್ಪುಗೋಳ್ ಅರೆಸ್ಟ್
ಅಮೃತ ನಗರೋತ್ಥಾನ 4ನೇ ಹಂತದ ಯೋಜನೆಯಿಂದ 23 ಜಿಲ್ಲಾ ಕೇಂದ್ರದ ನಗರ ಸಭೆಗಳು ಮತ್ತು 1ನೇ ದರ್ಜೆಯ ನಗರ ಸಭೆಗಳಿಗೆ ತಲಾ 40 ಕೋಟಿ ರೂಪಾಯಿಗಳಂತೆ ಒಟ್ಟು 920 ಕೋಟಿ ರೂಪಾಯಿ ನಿಗದಿ ಮಾಡಲಾಗಿದೆ. ಉಳಿದ 38 ನಗರ ಸಭೆಗಳಿಗೆ ತಲಾ 30 ಕೋಟಿ ರೂಪಾಯಿಗಳಂತೆ 1,140 ಕೋಟಿ ರೂಪಾಯಿ ಹಂಚಿಕೆ ಮಾಡಲಾಗಿದೆ.
124 ಪುರಸಭೆಗಳಿಗೆ ತಲಾ 10 ಕೋಟಿ ರೂಪಾಯಿನಂತೆ 1,240 ಕೋಟಿ ರೂಪಾಯಿ ಹಾಗೂ 117 ಪಟ್ಟಣ ಪಂಚಾಯಿತಿಗಳಿಗೆ ತಲಾ 5 ಕೋಟಿ ರೂಪಾಯಿಗಳಂತೆ 585 ಕೋಟಿ ರೂಪಾಯಿ ನೀಡಲಾಗಿದೆ. ಇದನ್ನೂ ಓದಿ: ಮದ್ಯ ಪ್ರಿಯರಿಗೆ ಸರ್ಕಾರದ ಶಾಕ್ – ವೀಕೆಂಡ್ ಕರ್ಫ್ಯೂ ವೇಳೆ ಮದ್ಯ ಮಾರಾಟಕ್ಕೆ ಬ್ರೇಕ್
ಈ ಯೋಜನೆಯ ಅಡಿಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಿಗೆ ಒದಗಿಸಿದ ಒಟ್ಟು ಮೊತ್ತದಲ್ಲಿ ಶೇ.24.10 ರಷ್ಟು ಹಣವನ್ನು ಪರಿಶಿಷ್ಟ ಜಾತಿ/ಗಿರಿಜನ ಉಪಯೋಜನೆಗಳಿಗೆ ಸೇರಿದ ಜನ ಹೆಚ್ಚಾಗಿ ವಾಸಿಸುತ್ತಿರುವ ಪ್ರದೇಶಗಳಿಗೆ ಮೂಲ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಲು ಸೂಚಿಸಲಾಗಿದೆ. ಶೇಕಡ 5 ರಷ್ಟು ಅನುದಾನವನ್ನು ಅಂಗವಿಕಲರ ಕಲ್ಯಾಣಕ್ಕಾಗಿ ಮತ್ತು ಶೇಕಡಾ 7.25 ರಷ್ಟು ಅನುದಾನವನ್ನು ಇತರೆ ಬಡಜನರ ಕಲ್ಯಾಣಕ್ಕಾಗಿ ಹಾಗೂ ಮೂಲಸೌಕರ್ಯಗಳನ್ನು ಒದಗಿಸಲು ಮೀಸಲಿಡಲು ನಿರ್ಧರಿಸಲಾಗಿದೆ.