ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಎಂ ಸಿದ್ದರಾಮಯ್ಯ

Public TV
1 Min Read
Siddaramaiah 12

ನವದೆಹಲಿ: ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದಕ್ಕೆ ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್‌ ಪ್ರಕರಣವನ್ನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ (Supreme Court) ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅರ್ಜಿ ಸಲ್ಲಿಸಿದ್ದಾರೆ. ಫೆ.19 ರಂದು ಈ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ.

ಫೆಬ್ರವರಿ 2022 ರಲ್ಲಿ ಗುತ್ತಿಗೆದಾರ ಸಂತೋಷ್ ಅವರ ಆತ್ಮಹತ್ಯೆಯ ಹಿನ್ನಲೆಯಲ್ಲಿ ಅಂದಿನ ಸಚಿವ ಕೆಎಸ್ ಈಶ್ವರಪ್ಪ ಅವರ ರಾಜೀನಾಮೆ ಮತ್ತು ಬಂಧನಕ್ಕೆ ಒತ್ತಾಯಿಸಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಪ್ರತಿಭಟನೆ ವೇಳೆ ಮುಂಜಾಗ್ರತಾ ಕ್ರಮವಾಗಿ ಅವರನ್ನು ಬಂಧಿಸಿ ಕ್ರಿಮಿನಲ್ ಪ್ರಕರಣವನ್ನು ದಾಖಲಾಗಿಸಲಾಗಿತ್ತು. ಇದನ್ನೂ ಓದಿ: ಚುನಾವಣಾ ಬಾಂಡ್‌ಗಳ ಯೋಜನೆ ಅಸಂವಿಧಾನಿಕ: ಸುಪ್ರೀಂ ಕೋರ್ಟ್‌

supreme Court 1

ಕಳೆದ ವಾರ ಈ ಪ್ರಕರಣದ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ (Karnataka High Court) ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ವಿಚಾರಣಾ ನ್ಯಾಯಾಲಯದ ವಿಚಾರಣೆಯನ್ನು ರದ್ದುಗೊಳಿಸಲು ನಿರಾಕರಿಸಿತು ಮತ್ತು ಫೆಬ್ರವರಿ 26 ರಂದು ವಿಚಾರಣಾ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವಂತೆಯೂ ಸೂಚಿಸಿತ್ತು.  ಇದನ್ನೂ ಓದಿ: ಚಲಿಸುತ್ತಿದ್ದ ರೈಲಿನಿಂದ ನದಿಗೆ ಹಾರಿ ಯುವತಿ ಆತ್ಮಹತ್ಯೆ

ಈ ಆದೇಶದ ವಿರುದ್ಧ ಮೇಲ್ಮನವಿ ಅರ್ಜಿ ಸಲ್ಲಿಸಿರುವ ಸಿಎಂ ಸಿದ್ದರಾಮಯ್ಯ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 141 (ಕಾನೂನುಬಾಹಿರ ಸಭೆ) ಯಾವುದೇ ಅಂಶಗಳನ್ನು ಪ್ರಕರಣದಲ್ಲಿ ಪೂರೈಸಲಾಗಿಲ್ಲ, ಮುಖ್ಯವಾಗಿ ಸಭೆ ಹಿಂಸಾಚಾರಕ್ಕೆ ಕಾರಣವಾಯಿತು ಎಂಬ ಯಾವುದೇ ಆರೋಪವಿಲ್ಲ, ದೂರುದಾರರು ರಾಜಕೀಯ ವರಿಷ್ಠರ ಆದೇಶದ ಮೇರೆಗೆ ದೂರು ದಾಖಲಿಸಿರಬಹುದು ಎಂದು ಸಿದ್ದರಾಮಯ್ಯ ಅರ್ಜಿಯಲ್ಲಿ ಆರೋಪಿಸಿದ್ದಾರೆ.

ಕರ್ನಾಟಕ ಪೊಲೀಸ್ ಕಾಯ್ದೆಯ ಸೆಕ್ಷನ್ 103 ರ ಅಡಿಯಲ್ಲಿ ನಾವು ಯಾವುದೇ ಅಪರಾಧವನ್ನು ಮಾಡಿಲ್ಲ, ಸಾರ್ವಜನಿಕ ಸ್ಥಳಗಳಲ್ಲಿ ಟ್ರಾಫಿಕ್ ನಿಯಂತ್ರಿಸಲು ಅಥವಾ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ವಿಚಾರದಲ್ಲಿ ಆಯುಕ್ತರು ಅಥವಾ ಜಿಲ್ಲಾಧಿಕಾರಿಗಳು ಮಾಡಿದ ಆದೇಶಗಳನ್ನು ಉಲ್ಲಂಘಿಸಿದರೆ ದಂಡ ವಿಧಿಸಬಹುದು. ಹೀಗಾಗಿ ವಿಚಾರಣಾ ನ್ಯಾಯಾಲಯದಲ್ಲಿ ತಮ್ಮ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ರದ್ದುಗೊಳಿಸುವಂತೆ ಸಿದ್ದರಾಮಯ್ಯ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

 

Share This Article