ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಜಯಮಾಲ ಅವರನ್ನು ವಿಧಾನಪರಿಷತ್ ಸಭಾ ನಾಯಕಿಯನ್ನಾಗಿ ನೇಮಿಸಿದ್ದಕ್ಕೆ, ಸದ್ಯ ಕಾಂಗ್ರೆಸ್ ಪಕ್ಷದಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದೆ.
ಭಾನುವಾರ ಸಮನ್ವಯ ಸಮಿತಿ ಸಭೆ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಆಗಮಿಸಿರುವ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಲು ಅನೇಕ ಶಾಸಕರು, ಸಚಿವರು ಹಾಗೂ ವಿಧಾನ ಪರಿಷತ್ ಸದಸ್ಯರು ಮುಂದಾಗುತ್ತಿದ್ದಾರೆ. ಅವರಲ್ಲಿ ಅನೇಕರು ಜಯಮಾಲ ಅವರಿಗೆ ಮಂತ್ರಿಗಿರಿ ಹಾಗೂ ವಿಧಾನ ಪರಿಷತ್ ಸಭಾನಾಯಕಿ ಸ್ಥಾನ ನೀಡಿದ್ದಕ್ಕೆ ಅಸಮಾಧಾನ ಹೊರ ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜಯಮಾಲ ಅವರನ್ನು ಸಭಾನಾಯಕಿ ಮಾಡಬಾರದು. ಬದಲಿಗೆ ಹಿರಿಯ ಪರಿಷತ್ ಸದಸ್ಯರೊಬ್ಬರನ್ನು ಸಚಿವರನ್ನಾಗಿ ನೇಮಿಸಿ ಅವರಿಗೆ ಸಭಾ ನಾಯಕರ ಸ್ಥಾನ ನೀಡಬೇಕು ಎಂದು ಪರಿಷತ್ ಸದಸ್ಯರಾದ ವಿ.ಎಸ್.ಉಗ್ರಪ್ಪ, ಹೆಚ್.ಎಂ.ರೇವಣ್ಣ, ಕೊಂಡಜ್ಜಿ ಮೋಹನ್ ಅವರ ನೇತೃತ್ವದ ಸದಸ್ಯರ ನಿಯೋಗ ಮನವಿ ಸಲ್ಲಿಸಿದೆ.
ಕೆ.ಸಿ.ವೇಣುಗೋಪಾಲ್ ಅವರನ್ನು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಭೇಟಿ ಮಾಡಿದ್ದು, ರಾಜ್ಯ ರಾಜಕೀಯದ ಪ್ರಸಕ್ತ ವಿದ್ಯಮಾನ ಹಾಗೂ ಸಮ್ಮಿಶ್ರ ಸರ್ಕಾರದಲ್ಲಿನ ಬೆಳವಣಿಗೆ ಕುರಿತಾಗಿ ಗಮನಕ್ಕೆ ತಂದಿದ್ದಾರೆ ಎಂದು ಪಕ್ಷದ ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ.