– ಸವದಿ ಕಾಂಗ್ರೆಸ್ ಸೇರ್ಪಡೆ ಫಿಕ್ಸ್
ಬೆಳಗಾವಿ: ಏ.17 ಇಲ್ಲವೇ 18 ರಂದು ನಾಮಪತ್ರ ಸಲ್ಲಿಕೆ ಮಾಡುತ್ತೇನೆ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ (Laxman Savadi) ಬೆಳಗಾವಿಯಲ್ಲಿ ಶುಕ್ರವಾರ ಹೇಳಿದ್ದಾರೆ.
ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ (Sambra Airport) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಕ್ಷೇತ್ರದ ಜನರ ಒಪ್ಪಿಗೆ ಪಡೆದಿದ್ದೇನೆ. ವೈಯಕ್ತಿಕವಾಗಿಯೂ ಅನೇಕರು ತಮ್ಮ ನಿರ್ಧಾರವನ್ನು ಹೇಳಿದ್ದಾರೆ. ಕಾಂಗ್ರೆಸ್ (Congress) ಹಾಗೂ ಜೆಡಿಎಸ್ನಿಂದ (JDS) ಆಹ್ವಾನ ಇದೆ. ಸಂಜೆಯ ಒಳಗೆ ತೀರ್ಮಾನಕ್ಕೆ ಬರಲಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮುಂದಿನ ಮುಖ್ಯಮಂತ್ರಿ ಸೋಮಣ್ಣ – ಘೋಷಣೆ ಕೂಗಿದ ಅಭಿಮಾನಿಗಳು
ಇನ್ನೂ ಬಿಜೆಪಿ (BJP) ಹಂಗಿನಲ್ಲೇ ಇದ್ದೇನೆ, ಅದರಿಂದ ಹೊರಬರಬೇಕು. ವಿಧಾನ ಪರಿಷತ್ ಸ್ಥಾನ ಹಾಗೂ ಪಕ್ಷಕ್ಕೆ ರಾಜೀನಾಮೆ ನೀಡಬೇಕು. ಬೆಂಗಳೂರಿಗೆ ಹೋಗಿ ಸಾಧಕ-ಬಾಧಕ ಚರ್ಚೆ ಮಾಡಿ ಈ ಬಗ್ಗೆ ನಿರ್ಣಯ ಕೈಗೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.
ನನ್ನ ಸಂಪರ್ಕಕ್ಕೆ ಬಿ.ಎಲ್ ಸಂತೋಷ್ ಬಹಳ ಪ್ರಯತ್ನಪಟ್ಟಿದ್ದಾರೆ. ಕೆಲ ಮುಖಂಡರನ್ನು ಸಹ ಕಳುಹಿಸಿದ್ದರು. ಮನೆ ಬಿಟ್ಟು ಹೊರಗೆ ಬಂದ ಮೇಲೆ ಸಂಪರ್ಕ ಮಾಡಿದರೇನು? ಬಿಟ್ಟರೇನು? ಎಂದು ಅಸಮಾಧಾನ ಹೊರಹಾಕಿದ್ದಾರೆ.
ಸಂತೋಷ್ ಅವರು ನನ್ನ ಗುರು, ಅವರಿಗೆ ನನ್ನನ್ನು ಕ್ಷಮಿಸಿ ಎಂದು ಹೇಳುತ್ತೇನೆ. ಅವರಿಂದ ಯಾವುದೇ ಅನ್ಯಾಯ ಆಗಿಲ್ಲ. ಕಷ್ಟ ಕಾಲದಲ್ಲಿ ನೆರವು ಕೊಟ್ಟಿದ್ದಾರೆ. ಅವರ ಆಜ್ಞೆಯನ್ನು ಪಾಲಿಸುವುದು ಕಷ್ಟ, ಬಿಡುವುದು ಕಷ್ಟ ಎಂದಿದ್ದಾರೆ.
ನೀರಾವರಿಯಿಂದ ವಂಚಿತಗೊಂಡ ಅಥಣಿಯ ಕೆಲ ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸಬೇಕು ಎನ್ನುವುದು ನನ್ನ ಆಸೆ. ಇಂದಿನ ಚರ್ಚೆಯಲ್ಲಿ ನೀರಾವರಿ ಬೇಡಿಕೆ ಇಡುತ್ತೇನೆ ಎಂದಿದ್ದಾರೆ.
ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆ ಖಚಿತ
ಮಾಜಿ ಸಚಿವ ರಮೇಶ ಜಾರಕಿಹೊಳಿ ಮಣಿಸಲು ಮಾಜಿ ಡಿಸಿಎಂ ಲಕ್ಷ್ಮಣ ಸವದಿಯನ್ನ ಕಾಂಗ್ರೆಸ್ಗೆ ಕರೆತರಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (D.K Shivakumar) ಮುಂದಾಗಿದ್ದಾರೆ. ಇಂದು ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆ ಆಗುವುದು ಖಚಿತವಾಗಿದೆ.
ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚೆನ್ನರಾಜ ಹಟ್ಟಿಹೊಳಿ ಜೊತೆಯಲ್ಲಿ ಡಿ.ಕೆ ಶಿವಕುಮಾರ್ ಹೆಸರಿನಲ್ಲಿ ಬುಕ್ ಆಗಿರುವ ವಿಶೇಷ ವಿಮಾನದಲ್ಲಿ ಸವದಿ ಬೆಂಗಳೂರಿಗೆ ಬಂದಿದ್ದಾರೆ. ಮಧ್ಯಾಹ್ನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಇದನ್ನೂ ಓದಿ: ಸಮಾಜದ ಮುಖಂಡರ ಕಡೆಗಣನೆ – ರಾಷ್ಟ್ರೀಯ ಪಕ್ಷಗಳ ವಿರುದ್ಧ ಭೋವಿ ಶ್ರೀ ಕಿಡಿ