ಕರ್ನಾಟಕ ನೆರೆ: ಹೆಚ್ಚಿನ ಪರಿಹಾರ ಕೋರಲು ಮುಂದಿನ ವಾರ ದೆಹಲಿಗೆ ಸಿಎಂ ಬಿಎಸ್‍ವೈ

Public TV
4 Min Read
CM BS Yeddyurappa aerial survey 2

ಬೆಳಗಾವಿ: ಶೀಘ್ರ ಎಲ್ಲಾ ಶಾಸಕರ ಸಭೆ ಕರೆದು ಅತಿವೃಷ್ಟಿಯಿಂದ ಆಗಿರುವ ಹಾನಿಗೆ ಸಮರ್ಪಕ ಪರಿಹಾರ ನೀಡಲು ಯೋಜನೆ ರೂಪಿಸಲಾಗುವುದು. ಎಲ್ಲಾ ಮಾಹಿತಿಯನ್ನು ಕೇಂದ್ರ ಸರ್ಕಾರಕ್ಕೆ ಕಳಿಸಲಾಗುವುದು. ಮುಂದಿನ ವಾರ ದೆಹಲಿಗೆ ಹೋಗಿ ಹೆಚ್ಚಿನ ಪರಿಹಾರ ಬಿಡುಗಡೆಗೆ ಮನವಿ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಅತಿವೃಷ್ಟಿಗೆ ಸಂಬಂಧಿಸಿದಂತೆ ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಇಂದು ನಡೆದ ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳ ಜನಪ್ರತಿನಿಧಿಗಳ ಹಾಗೂ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಸಿಎಂ ಬಿಎಸ್‍ವೈ ಮಾತನಾಡಿದರು. ಶಾಸಕರು ತಮ್ಮ ತಮ್ಮ ಕ್ಷೇತ್ರದಲ್ಲಿ ಇದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು. ಕೋವಿಡ್-19 ಇರುವುದರಿಂದ ಎನ್.ಡಿ.ಆರ್.ಎಫ್ ಅನುದಾನದಡಿ ತುರ್ತು ಅಗತ್ಯವಿರುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು ಎಂದರು.

CM BS Yeddyurappa aerial survey 4 1

ಜಿಲ್ಲೆಯಲ್ಲಿ ಆಗಿರುವ ಹಾನಿ ಮತ್ತು ಅಗತ್ಯವಿರುವ ಅನುದಾನದ ಮಾಹಿತಿಯನ್ನು ತಕ್ಷಣ ಸರ್ಕಾರಕ್ಕೆ ಕಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರವಾಹ ನಿರ್ವಹಣೆ ಮತ್ತಿತರ ತುರ್ತು ಕೆಲಸಕ್ಕೆ ಬೆಳಗಾವಿ ಜಿಲ್ಲೆಯಲ್ಲಿ 412 ಕೋಟಿ ರೂಪಾಯಿ ಅನುದಾನ ಲಭ್ಯವಿದೆ. ಹೆಚ್ಚಿನ ಹಣ ಬೇಕಾದರೆ ತಕ್ಷಣವೇ ಬಿಡುಗಡೆ ಮಾಡಲಾಗುವುದು. ಜಿಲ್ಲೆಯಲ್ಲಿ ಮನೆ ನಿರ್ಮಾಣಕ್ಕೆ 174 ಕೋಟಿ ರೂಪಾಯಿ ಇದೆ. ಇದಲ್ಲದೇ ಉಳಿದಿರುವ ಅನುದಾನದಲ್ಲಿ ರಸ್ತೆ ದುರಸ್ತಿ ಮತ್ತಿತರ ಕಾಮಗಾರಿ ಕೈಗೊಳ್ಳಲು ಸೂಚನೆ ನೀಡಿದರು.

ಇದೇ ರೀತಿ ಇತರೆ ಜಿಲ್ಲೆಗಳಲ್ಲಿ ಸಾಕಷ್ಟು ಹಣ ಲಭ್ಯವಿದೆ. ಮನೆ ಕಳೆದುಕೊಂಡಿರುವ ಬೆಳಗಾವಿಯ 44,156 ಫಲಾನುಭವಿಗಳಿಗೆ 488 ಕೋಟಿ ರೂ. ಪರಿಹಾರ ಬಿಡುಗಡೆಯಾಗಿದೆ. ಜಿಲ್ಲೆಯಲ್ಲಿ ಆಗಿರುವ ಹಾನಿ ಮತ್ತು ಅಗತ್ಯವಿರುವ ಅನುದಾನದ ಮಾಹಿತಿಯನ್ನು ತಕ್ಷಣ ಸರ್ಕಾರಕ್ಕೆ ಕಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು. ಬೆಳಗಾವಿ-ಧಾರವಾಡ ಸಮಸ್ಯೆಗಳನ್ನು ಗಮನಕ್ಕೆ ಬಂದಿದ್ದು, ಕೋವಿಡ್-19 ಹಿನ್ನೆಲೆಯಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಆಧರಿಸಿ ಮನೆ ಹಾಗೂ ಬೆಳೆ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದರು.

CM BS Yeddyurappa aerial survey 1

ಕಂದಾಯ ಸಚಿವರಾದ ಆರ್.ಅಶೋಕ್ ಕಳೆದ ವರ್ಷದ ಮನೆಪರಿಹಾರ ನೀಡುವ ತಂತ್ರಾಂಶ ಪುನಃ ಆರಂಭಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಶೀಘ್ರ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ, ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಅವರು ಪ್ರವಾಹ ನಿರ್ವಹಣೆ ಮತ್ತು ಪರಿಹಾರ ಕ್ರಮಗಳ ಬಗ್ಗೆ ಮಾತನಾಡಿದರು.

ವಿಧಾನಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ, ಜಿಲ್ಲೆಯ ಇನ್ನೂ 9 ಸಾವಿರ ಮನೆಗಳನ್ನು ಪರಿಹಾರದ ಪಟ್ಟಿಗೆ ಸೇರ್ಪಡೆ ಮಾಡಿ ವಿವಿಧ ಕಂತುಗಳ ಬಿಡುಗಡೆ ಮಾಡಲು ವಿನಂತಿಸಿದರು. ವಿಧಾನಸಭೆಯ ಉಪಸಭಾಪತಿ ಆನಂದ ಮಾಮನಿ, ಬೆಳೆವಿಮೆಯಲ್ಲಿ ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳ ನಡುವೆ ಪ್ರತಿವರ್ಷ ವ್ಯತ್ಯಾಸ ಕಂಡುಬರುತ್ತಿದೆ. ಇದನ್ನು ಸರಿಪಡಿಸಲು ಮನವಿ ಮಾಡಿಕೊಂಡರು.

CM BS Yeddyurappa aerial survey 3

ಶಾಸಕರಾದ ಮಹಾದೇವಪ್ಪ ಯಾದವಾಡ ಅವರು ಕಳೆದ ಬಾರಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರ ನೀಡಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಅಭಯ್ ಪಾಟೀಲ ಮಾತನಾಡಿ, ಬೆಳಗಾವಿ ನಗರದ ಅಭಿವೃದ್ಧಿಗೆ ಸಂಬಂಧಿಸಿದಂತೆ 320 ಕೋಟಿ ರೂಪಾಯಿ ರಸ್ತೆ ಅಭಿವೃದ್ಧಿಗೆ ಅಗತ್ಯವಿದೆ. ಕಳೆದ ವರ್ಷ ಹಾನಿಗೊಳಗಾದ ಮನೆಗಳ ಮರು ಸಮೀಕ್ಷೆ ನಡೆಸಿ ಲಾಗಿನ್ ಆಗಲು ಅನುಕೂಲ ಕಲ್ಪಿಸಬೇಕು. ನಗರೋತ್ಥಾನ ಯೋಜನೆ ಅನುದಾನ ತಕ್ಷಣ ಬಿಡುಗಡೆಗೆ ಒತ್ತಾಯಿಸಿದರು.

ಮಹೇಶ್ ಕುಮಠಳ್ಳಿ ಅವರು ಅಥಣಿ ಮತಕ್ಷೇತ್ರದಲ್ಲಿ ಬೆಳೆಹಾನಿ ಮತ್ತು ಮನೆ ಪರಿಹಾರ ಇನ್ನೂ ಪಾವತಿಸುವುದು ಬಾಕಿಯಿದೆ. ರಸ್ತೆಗಳು ಹಾಳಾಗಿರುವುದರಿಂದ ತುರ್ತಾಗಿ 50-60 ಕೋಟಿ ಬಿಡುಗಡೆಗೆ ಆಗ್ರಹಿಸಿದರು.

RAIN NK 9 medium

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿ, ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕೆರೆಗಳು ಹಾಗೂ ಬಾಂದಾರಗಳು ಒಡೆದಿರುವುದರಿಂದ ಬೆಳೆ ಕೂಡ ಹಾನಿಯಾಗಿದೆ. ಆದ್ದರಿಂದ ಇವುಗಳ ಶಾಶ್ವತ ದುರಸ್ತಿಗೆ ಮತ್ತು ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿಕೊಂಡರು.

ಧಾರವಾಡ ಜಿಲ್ಲೆಯ ಶಾಸಕ ಅರವಿಂದ ಬೆಲ್ಲದ, ಮಳೆಯ ಪ್ರಮಾಣ ತಿಳಿಯಲು ಅತ್ಯಾಧುನಿಕ ತಂತ್ರಜ್ಞಾನ ಬಳಕೆ ಮಾಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಸರ್ಕಾರ ಗಮನಹರಿಸಬೇಕಿದೆ ಎಂದರು. ಅಲ್ಲದೇ ಹುಬ್ಬಳ್ಳಿ-ಧಾರವಾಡ ರಸ್ತೆ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ನೀಡಲು ಆಗ್ರಹಿಸಿದರು.

Rain North Karnataka 2 medium

ಶಾಸಕ ಶಂಕರಪಾಟೀಲ ಮುನೇನಕೊಪ್ಪ ಹಾಗೂ ಅಮೃತ ದೇಸಾಯಿ ಅವರು ಮಾತನಾಡಿ, ಪ್ರತಿ ಮಳೆಗಾಲದಲ್ಲಿ ಬೆಣ್ಣಿಹಳ್ಳದಿಂದ ಉದ್ಭವಿಸುವ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಮನವಿ ಮಾಡಿಕೊಂಡರು. ಶಾಸಕರಾದ ಮಹಾಂತೇಶ ಕೌಜಲಗಿ, ಮಹಾಂತೇಶ ದೊಡ್ಡಗೌಡ್ರ ತಮ್ಮ ಕ್ಷೇತ್ರದ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.

ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು, ಜಿಲ್ಲೆಯಲ್ಲಿ ಅತಿವೃಷ್ಟಿ ಪರಿಸ್ಥಿತಿ ಮತ್ತು ನಿರ್ವಹಣೆಯ ಸ್ಥಿತಿಗತಿಗಳನ್ನು ವಿವರಿಸಿದರು. ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಅತ್ಯಂತ ಮುತುವರ್ಜಿಯಿಂದ ಮಹಾರಾಷ್ಟ್ರ ಸರ್ಕಾರದ ಜತೆ ಸಮನ್ವಯ ಸಾಧಿಸಿದ್ದರಿಂದ ಪ್ರವಾಹ ನಿರ್ವಹಣೆ ಸಾಧ್ಯವಾಯಿತು. ಪ್ರವಾಹ ನಿರ್ವಹಣೆಗೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ನಮ್ಮ ಅಧಿಕಾರಿಗಳು ಮಹಾರಾಷ್ಟ್ರದ ಅಧಿಕಾರಿಗಳ ಜತೆ ಸತತ ಸಂಪರ್ಕದಲ್ಲಿದ್ದ ಪರಿಣಾಮ ಯಾವುದೇ ತೊಂದರೆಯಾಗಿಲ್ಲ. ಜಿಲ್ಲೆಯಲ್ಲಿ ಬೀಜ, ಗೊಬ್ಬರ ಸಮರ್ಪಕವಾಗಿ ವಿತರಿಸಲಾಗಿದ್ದು, ಸಾಕಷ್ಟು ದಾಸ್ತಾನು ಲಭ್ಯವಿದೆ ಎಂದು ಜಿಲ್ಲಾಧಿಕಾರಿ ವಿವರಿಸಿದರು.

ckd flood

ಧಾರವಾಡ ಜಿಲ್ಲೆಯ ಮಾಹಿತಿಯನ್ನು ಅಲ್ಲಿನ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ವಿವರಿಸಿದರು. ಕೈಮಗ್ಗ ಮತ್ತು ಜವಳಿ ಇಲಾಖೆಯ ಸಚಿವರಾದ ಶ್ರೀಮಂತ ಪಾಟೀಲ, ಸಂಸದರಾದ ಅಣ್ಣಾ ಸಾಹೇಬ್ ಜೊಲ್ಲೆ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಪಿ.ರಾಜೀವ್, ದುರ್ಯೋಧನ ಐಹೊಳೆ, ಉಮೇಶ್ ಕತ್ತಿ, ಮಹಾಂತೇಶ ಕೌಜಲಗಿ, ಶಾಸಕ ಅನಿಲ್ ಬೆನಕೆ, ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಆಶಾ ಐಹೊಳೆ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಎಲ್.ಅತೀಕ್, ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

ckd rain

Share This Article
Leave a Comment

Leave a Reply

Your email address will not be published. Required fields are marked *