ನವದೆಹಲಿ: ಕರ್ನಾಟಕ ಹೈಕೋರ್ಟ್ನ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಅವರು ಭ್ರಷ್ಟಾಚಾರ ನಿಗ್ರಹ ದಳ (ACB) ಮತ್ತು ಅದರ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ADGP) ಸೀಮಂತ್ ಕುಮಾರ್ ಸಿಂಗ್ ವಿರುದ್ಧ ಮಾಡಿದ್ದ ಆರೋಪಗಳಿಗೆ ಇಂದು ಸುಪ್ರೀಂಕೋರ್ಟ್ ತಡೆ ನೀಡಿದೆ.
ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ಮತ್ತು ಜೆ.ಮಂಜುನಾಥ್ ಅವರು ಪ್ರತ್ಯೇಕವಾಗಿ ಸಲ್ಲಿಸಿದ್ದ ವಿಶೇಷ ಮನವಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಮತ್ತು ಹಿಮಾ ಕೊಹ್ಲಿ ಅವರಿದ್ದ ತ್ರಿಸದಸ್ಯ ಪೀಠವು ನಡೆಸಿತು. ಇದನ್ನೂ ಓದಿ: L- ಬೋರ್ಡ್ ಕಾರಿಗೆ ಲಾರಿ ಡಿಕ್ಕಿ : ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವು
ವಿಚಾರಣೆ ವೇಳೆ ನ್ಯಾಯಾಧೀಶರ ಅಭಿಪ್ರಾಯಕ್ಕೂ ಹಾಗೂ ಅವರು ವಿಚಾರಣೆ ಮಾಡುತ್ತಿರುವ ಪ್ರಕರಣಕ್ಕೂ ಸಂಬಂಧವಿಲ್ಲ. ಇಲ್ಲಿ ಅಪ್ರಸ್ತುತ ಅವಲೋಕನಗಳನ್ನು ಮಾಡಿದ್ದಾರೆ ಹಾಗೂ ಜಾಮೀನು ಅರ್ಜಿಯ ವ್ಯಾಪ್ತಿಯನ್ನೂ ಮೀರಿದ್ದಾರೆ ಎಂದು ಹೇಳಿದೆ.
ಜಾಮೀನು ಅರ್ಜಿ ಪ್ರಕರಣವೊಂದರ ವಿಚಾರಣೆ ಮಾಡುತ್ತಿದ್ದ ವೇಳೆ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಎಸಿಬಿ ವಿರುದ್ಧ ಖಂಡತುಂಡ ಟೀಕೆ ಮಾಡಿದ್ದರು. ಎಸಿಬಿ ಮುಖ್ಯಸ್ಥ ಸೀಮಂತ್ ಕುಮಾರ್ ಸಿಂಗ್ ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಸೀಮಂತ್ ಕುಮಾರ್ ಸಿಂಗ್ ಬಳಿ ತಮ್ಮ ಸರ್ಕಾರಿ ಸೇವೆಗಳ ವರದಿ ನೀಡುವಂತೆ ಕರ್ನಾಟಕ ಹೈಕೋರ್ಟ್ ಸೂಚಿಸಿತ್ತು. ಸುಪ್ರೀಂ ಕೋರ್ಟ್ ಇದಕ್ಕೂ ತಡೆ ನೀಡಿದೆ. ಇದನ್ನೂ ಓದಿ: ಯಾವುದೇ ಧರ್ಮ, ಜಾತಿಯವರಿಗೆ ಸಿಎಂ ಸ್ಥಾನ ಮೀಸಲು ಅಲ್ಲ: ಡಿಕೆಶಿಗೆ ಆರ್. ಅಶೋಕ್ ತಿರುಗೇಟು
ಜೆ.ಮಂಜುನಾಥ್ ಐಎಎಸ್ ಪರ ವಾದ ಮಂಡಿಸಿದ ಹಿರಿಯ ವಕೀಲ ಎಸ್.ನಾಗಮುತ್ತು ಅವರು, ಈ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಬದಲು ಬೇರೊಂದು ನ್ಯಾಯಪೀಠಕ್ಕೆ ವರ್ಗಾವಣೆ ಮಾಡುವಂತೆ ಕೋರಿದ್ದರು. ಇದಕ್ಕೆ ಅಸಮ್ಮತಿಸಿದ (ಸಮ್ಮತಿಯಿಲ್ಲದ) ನ್ಯಾಯಪೀಠ ವಿಚಾರಣೆಯನ್ನು ನ್ಯಾಯಾಧೀಶರೇ ಮುಂದುವರಿಸುತ್ತಾರೆ. ಆದರೆ ಪ್ರಕರಣಕ್ಕೆ ಸಂಬಂಧಪಡದ ವಿಚಾರಗಳಿಗೆ ನಾವು ತಡೆ ನೀಡುತ್ತಿದ್ದೇವೆ ಎಂದು ಸ್ಪಷ್ಟನೆ ನೀಡಿತು.
ಕಳೆದ ವಿಚಾರಣೆಯಲ್ಲೂ ಜಾಮೀನು ಮನವಿಯ ವಿಚಾರಣೆಯನ್ನು ಮೂರು ದಿನಗಳ ಕಾಲ ಮುಂದೂಡುವಂತೆ ಸುಪ್ರೀಂ ಕೋರ್ಟ್ಗೆ ಹೈಕೋರ್ಟ್ ಹೇಳಿತ್ತು.
ಏನಿದು ಪ್ರಕರಣ?
ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ಜಾಮೀನು ಕೋರಿ ಉಪ ತಹಸೀಲ್ದಾರ್ ಪಿ.ಎಸ್.ಮಹೇಶ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಅವರು ಪ್ರಕರಣದಲ್ಲಿ ಸಮರ್ಪಕ ತನಿಖೆ ನಡೆದಿಲ್ಲ ಎಂದು ಎಸಿಬಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದರು. ಇದೇ ಕಾರಣಕ್ಕೆ ತಮಗೆ ವರ್ಗಾವಣೆಯ ಬೆದರಿಕೆ ಒಡ್ಡಲಾಗಿದೆ ಎಂಬ ಸ್ಫೋಟಕ ವಿಚಾರವನ್ನು ನ್ಯಾಯಮೂರ್ತಿಗಳು ಮುಕ್ತ ನ್ಯಾಯಾಲಯದಲ್ಲಿ ಬಹಿರಂಗಪಡಿಸಿದ್ದರು. ಅಲ್ಲದೆ, ಬೆದರಿಕೆಯ ವಿಚಾರವನ್ನು ಜು.11ರಂದು ಲಿಖಿತ ಆದೇಶದಲ್ಲಿ ದಾಖಲಿಸಿದ್ದರು.