ಬೆಂಗಳೂರು: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಗಣೇಶೋತ್ಸವಕ್ಕೆ ಅನುಮತಿ ನೀಡುವ ನಿರ್ಧಾರವನ್ನು ಆಯುಕ್ತರಿಗೆ ಹೈಕೋರ್ಟ್ ನೀಡಿದೆ.
ಹುಬ್ಬಳ್ಳಿ ಪಾಲಿಕೆ ಹಿಂದೂ ಸಂಘಟನೆಗಳ ಮನವಿಯನ್ನು ಪುರಸ್ಕರಿಸಿ 3 ದಿನಗಳ ಕಾಲ ಗಣೇಶೋತ್ಸವ ಆಚರಿಸಲು ಅನುಮತಿ ನೀಡಿತ್ತು.
ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್ಗೆ ಅಂಜುಮಾನ್ ಸಂಸ್ಥೆ ಅರ್ಜಿ ಸಲ್ಲಿಸಿತ್ತು. ನ್ಯಾ.ಅಶೋಕ್ ಕಿಣಗಿ ಪೀಠದಲ್ಲಿ ಇಂದು ಅರ್ಜಿ ವಿಚಾರಣೆ ನಡೆದು ಅಂತಿಮವಾಗಿ ಪೀಠ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವ ನಿರ್ಧಾರವನ್ನು ಆಯುಕ್ತರಿಗೆ ನೀಡಿ ಆದೇಶ ಪ್ರಕಟಿಸಿತು.
ಈ ಸಂದರ್ಭದಲ್ಲಿ ಹೈಕೋರ್ಟ್, ಬೆಂಗಳೂರಿನ ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಿದ ಸಂಬಂಧ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್ನಲ್ಲಿ ನಡೆಯುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದ ಆದೇಶ ಪ್ರಕಟವಾದ ಬಳಿಕ ಅರ್ಜಿದಾರರು ಕೋರ್ಟ್ಗೆ ಬರಬಹುದು ಎಂದು ತಿಳಿಸಿತು.