ಶಿವಮೊಗ್ಗ: ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ಕಾಂಗ್ರೆಸ್ ವಿದ್ಯಾರ್ಥಿ ಸಂಘಟನೆಯಾದ ಎನ್ಎಸ್ಯುಐ ಕಾರ್ಯಕರ್ತರು ರಾಷ್ಟ್ರಧ್ವಜವನ್ನು ಹಾರಿಸಿದ್ದಾರೆ.
ಮಂಗಳವಾರ ವಿದ್ಯಾರ್ಥಿಗಳ ಮಧ್ಯೆ ಹಿಜಬ್- ಕೇಸರಿ ಶಾಲು ಸಂಘರ್ಷ ತೀವ್ರಗೊಂಡಿತ್ತು. ಈ ವೇಳೆ ವಿದ್ಯಾರ್ಥಿಗಳು ರಾಷ್ಟ್ರಧ್ವಜ ಹಾರಿಸುವ ಜಾಗದಲ್ಲಿ ಭಗವಾಧ್ವಜ ಹಾರಿಸಿದ್ದರು.
ಭಗವಾಧ್ವಜ ಹಾರಿಸಿದ್ದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಆಗಿ ಟ್ರೆಂಡ್ ಸೃಷ್ಟಿಯಾಗಿತ್ತು. ಭಗವಾಧ್ವಜಕ್ಕೆ ಪ್ರತಿಯಾಗಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚೇತನ್ ನೇತೃತ್ವದಲ್ಲಿ ಇಂದು ಬೆಳಂಬೆಳಗ್ಗೆಯೇ ಎನ್ಎಸ್ಯುಐ ಕಾರ್ಯಕರ್ತರು ರಾಷ್ಟ್ರಧ್ವಜ ಹಾರಿಸಿದ್ದಾರೆ. ಈ ವಿಚಾರ ತಿಳಿದು ನಂತರ ಕಾಲೇಜಿನ ಸಿಬ್ಬಂದಿ ರಾಷ್ಟ್ರ ಧ್ವಜವನ್ನು ಇಳಿಸಿದ್ದಾರೆ.
ಶಿವಮೊಗ್ಗ ಈಗ ಹೇಗಿದೆ?
ಪ್ರತಿಭಟನೆ, ಬಸ್ಸುಗಳಿಗೆ ಕಲ್ಲು ತೂರಾಟ ನಡೆದ ಹಿನ್ನೆಲೆಯಲ್ಲಿ ನಗರದಲ್ಲಿ ಪರಿಸ್ಥಿತಿ ನಿಯಂತ್ರಿಸಲು ಶಿವಮೊಗ್ಗ ನಗರದಲ್ಲಿ 144 ಸೆಕ್ಷನ್ ಜಾರಿಯಾಗಿದೆ. ಮುಂಜಾಗ್ರತಾ ಕ್ರಮವಾಗಿ ನಗರದ ಪ್ರಮುಖ ವೃತ್ತಗಳಲ್ಲಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದ್ದು ಸದ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿದೆ.
ಮುಂಜಾಗ್ರತಾ ಕ್ರಮವಾಗಿ ಸ್ವಯಂ ಪ್ರೇರಿತರಾಗಿ ವರ್ತಕರು ಅಂಗಡಿ ಮುಗ್ಗಟ್ಟನ್ನು ಮುಚ್ಚಿದ್ದಾರೆ. ಮುಂಜಾನೆಯೇ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿಪ್ರಸಾದ್ ಫಿಲ್ಡ್ಗೆ ಇಳಿದು ರೌಂಡ್ಸ್ ನಡೆಸಿದ್ದಾರೆ.
ಈ ವೇಳೆ ಪ್ರತಿಕ್ರಿಯಿಸಿದ ಲಕ್ಷ್ಮಿಪ್ರಸಾದ್, ಸದ್ಯಕ್ಕೆ ಶಿವಮೊಗ್ಗ ಶಾಂತಿಯುತವಾಗಿ ಇದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಅಗತ್ಯ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಅಂಗಡಿಗಳನ್ನು ಮುಚ್ಚುವಂತೆ ಯಾರಿಗೂ ಹೇಳಿಲ್ಲ. ಆದರೂ ಕೆಲವರು ಸ್ವಯಂ ಪ್ರೇರಿತರಾಗಿ ಬಂದ್ ಮಾಡಿದ್ದಾರೆ. ಯಾವುದೇ ಭಯವಿಲ್ಲದೇ ವ್ಯಾಪಾರ ವಹಿವಾಟು ನಡೆಸುವಂತೆ ಸೂಚಿಸಲಾಗಿದೆ ಎಂದರು.
ನಿನ್ನೆ ಘಟನೆ ಸಂಬಂಧ ಶಿವಮೊಗ್ಗದ ವಿವಿಧ ಠಾಣೆಯಲ್ಲಿ ಐದು ಪ್ರಕರಣ, ಸಾಗರದಲ್ಲಿ ಒಂದು ಪ್ರಕರಣ ದಾಖಲಾಗಿದೆ. ಶಿಕಾರಿಪುರದಲ್ಲಿ ಬಸ್ ಮೇಲೆ ನಡೆದ ಕಲ್ಲು ತೂರಾಟ ಪ್ರಕರಣ ಸಂಬಂಧ ಬಸ್ ಮಾಲೀಕರು ದೂರು ನೀಡಲು ಮುಂದೆ ಬಂದಿಲ್ಲ. ಶಿವಮೊಗ್ಗ ಘಟನೆಗೆ ಸಂಬಂಧಿಸಿದಂತೆ ನಾಲ್ಕು ಮಂದಿಯ ಗುರುತು ಪತ್ತೆ ಹಚ್ಚಲಾಗಿದೆ. ಇದರಲ್ಲಿ ಇಬ್ಬರು ವಿದ್ಯಾರ್ಥಿಗಳು, ಇಬ್ಬರು ಹೊರಗಿನವರು ಇದ್ದಾರೆ. ಇಂದು ಸಂಜೆಯೊಳೆಗೆ ಅವರನ್ನು ವಶಕ್ಕೆ ಪಡೆಯುತ್ತೇವೆ ಎಂದು ತಿಳಿಸಿದರು.
ಸರ್ಕಾರಿ ಪದವಿ ಕಾಲೇಜಿನಲ್ಲಿ ಯುವ ಕಾಂಗ್ರೆಸ್ ಹಾಗೂ ಎನ್ಎಸ್ಯುಐ ಕಾರ್ಯಕರ್ತರು ರಾಷ್ಟ್ರ ಧ್ವಜಾರೋಹಣ ಮಾಡಿದ್ದಾರೆ. ಈ ಬಗ್ಗೆ ಕಾಲೇಜಿನವರು ದೂರು ನೀಡುವುದಾಗಿ ತಿಳಿಸಿದ್ದಾರೆ. ದೂರು ನೀಡಿದ ಬಳಿಕ ಮುಂದಿನ ಕ್ರಮ ಜರುಗಿಸುತ್ತೇವೆ ಎಂದು ಹೇಳಿದರು.