ಬೆಂಗಳೂರು: ಅನಾರೋಗ್ಯ ಹಿನ್ನೆಲೆಯಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಚರಣ್ ರೆಡ್ಡಿ ನಿಧನರಾಗಿದ್ದಾರೆ.
ಸಿಐಡಿ ಎಡಿಜಿಪಿ ಆಗಿ ಕೆಲಸ ಮಾಡುತ್ತಿದ್ದ ಚರಣ್ ರೆಡ್ಡಿ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದರು. ತೀವ್ರ ಅನಾರೋಗ್ಯದಿಂದ ಬೆಂಗಳೂರಿನ ವಸಂತನಗರದ ಮಹಾವೀರ್ ಜೈನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗಿನ ಜಾವ ಏಳು ಗಂಟೆ ಸುಮಾರಿಗೆ ಕ್ಯಾನ್ಸರ್ ಕಾಯಿಲೆಯಿಂದ ನಿಧನರಾಗಿದ್ದಾರೆ.
Karnataka: Charan Reddy, Additional Director General of Police, Criminal Investigation Department (CID) who was battling cancer, passes away in Bengaluru. pic.twitter.com/6rcv7OyJ4v
— ANI (@ANI) March 13, 2020
ಆಂಧ್ರದ ಚಿತ್ತೂರು ಮೂಲದ ಚರಣ್ ರೆಡ್ಡಿ 1993ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿದ್ದರು. ಖಡಕ್ ಅಧಿಕಾರಿಯಾಗಿದ್ದ ಚರಣ್ ರೆಡ್ಡಿ ಬೆಂಗಳೂರಿನಲ್ಲಿ ಕಾವೇರಿ ಗಲಾಟೆ, ಅಕ್ರಮ ಗಣಿಗಾರಿಕೆ ಪ್ರಕರಣ, ಸಿಐಬಿ ಮತ್ತು ಬೆಂಗಳೂರಿನ ಪಶ್ಚಿಮ ವಲಯ ಹೆಚ್ಚುವರಿ ಪೊಲೀಸ್ ಅಧಿಕಾರಿಯಾಗಿ ಉತ್ತಮ ಸೇವೆ ಸಲ್ಲಿಸಿದ್ದರು.
ಕಳೆದ 13 ವರ್ಷದಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅಧಿಕಾರಿ ಇಂದು ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ. ಇಂದು ಡಾಲರ್ಸ್ ಕಾಲೋನಿಯ ಅವರ ಮನೆಯಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಡಿಜಿ ಐಜಿಪಿ ಪ್ರವೀಣ್ ಸೂದ್ ಸೇರಿದಂತೆ ಬೆಂಗಳೂರಿನ ಎಲ್ಲಾ ಹಿರಿಯ ಅಧಿಕಾರಿಗಳು, ರಾಜಕೀಯ ಮುಖಂಡರು ಅಂತಿಮ ದರ್ಶನ ಪಡೆದುಕೊಂಡರು. ಶನಿವಾರ ಚರಣ್ ರೆಡ್ಡಿ ಹುಟ್ಟೂರಾದ ಆಂಧ್ರದ ಚಿತ್ತೂರಿನಲ್ಲಿ ಅಂತಿಮ ವಿಧಿವಿಧಾನಗಳು ನಡೆಯಲಿವೆ.