ಬೆಂಗಳೂರು: ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿವೇತನವನ್ನು 20 ಲಕ್ಷ ರೂ.ಗಳಿಂದ 30 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಘೋಷಿಸಿದ್ದಾರೆ.
ಈ ಬಾರಿಯ ರಾಜ್ಯ ಬಜೆಟ್ನಲ್ಲಿ, ಅಲ್ಪಸಂಖ್ಯಾತರ 169 ವಸತಿ ಶಾಲೆ/ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 25,000 ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣಾ ಕೌಶಲ್ಯ, ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವತಿಯಿಂದ ಯುವಕ/ಯುವತಿಯರಿಗೆ ನವೋದ್ಯಮಗಳನ್ನು ಪ್ರಾರಂಭಿಸಲು ಉತ್ತೇಜನ ನೀಡಲಾಗುವುದು. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿವೇತನವನ್ನು 20 ಲಕ್ಷ ರೂ.ಗಳಿಂದ 30 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು. ಜೈನ ಅರ್ಚಕರು, ಸಿಖ್ ಮುಖ್ಯಗ್ರಂಥಿಗಳು, ಮಸೀದಿಗಳ ಪೇಷ್ ಇಮಾಮ್ಗಳಿಗೆ ನೀಡುತ್ತಿರುವ ಮಾಸಿಕ ಗೌರವಧನವನ್ನು 6,000ರೂ. ಗಳಿಗೆ ಹೆಚ್ಚಿಸಲಾಗುವುದು. ಸಿಖ್ ಸಹಾಯಕ ಗ್ರಂಥಿಗಳು ಹಾಗೂ ಮೋಝಿನ್ಗಳಿಗೆ ನೀಡುವ ಮಾಸಿಕ ಗೌರವಧನವನ್ನು 5,000 ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ತಿಳಿಸಿದರು.ಇದನ್ನೂ ಓದಿ: ಎಷ್ಟು ಜನರಿಗೆ ಯುವನಿಧಿ ಸಿಕ್ಕಿದೆ? ಬಜೆಟ್ನಲ್ಲಿ ಲೆಕ್ಕ ನೀಡಿದ ಸಿಎಂ
Advertisement
Advertisement
- ಬಜೆಟ್ ಘೋಷಣೆಗಳೇನು?
- ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ 250 ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆಗಳಲ್ಲಿ ಹಂತ ಹಂತವಾಗಿ ಕರ್ನಾಟಕ ಪಬ್ಲಿಕ್ ಶಾಲೆಗಳ ಮಾದರಿಯಲ್ಲಿ ಪೂರ್ವ ಪ್ರಾಥಮಿಕ ಹಂತದಿಂದ ಪಿ.ಯು ವರೆಗೂ ತರಗತಿಗಳನ್ನು ಪ್ರಾರಂಭಿಸಲಾಗುವುದು. ಇದಕ್ಕಾಗಿ ಒಟ್ಟಾರೆ 500 ಕೋಟಿ ರೂ. ವೆಚ್ಚದಲ್ಲಿ ಯೋಜನೆ ರೂಪಿಸಲಾಗುವುದು. ಪ್ರಸಕ್ತ ವರ್ಷದಲ್ಲಿ 100 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ. ಶಾಲಾ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಸದರಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುವುದು.
- ಶಿಕ್ಷಣ ಇಲಾಖೆಯಲ್ಲಿ ಅತೀ ಹೆಚ್ಚು ದಾಖಲಾತಿಯಿರುವ ಆಯ್ದ 100 ಉರ್ದು ಮಾಧ್ಯಮದ ಶಾಲೆಗಳಿಗೆ ಕರ್ನಾಟಕ ಪಬ್ಲಿಕ್ ಶಾಲೆ ಮಾದರಿಯಲ್ಲಿ ಮೂಲಸೌಕರ್ಯಗಳನ್ನು ಒದಗಿಸಿ ಕಲಿಕಾ ಗುಣಮಟ್ಟವನ್ನು ಹೆಚ್ಚಿಸಲು ಕ್ರಮವಹಿಸಿ ಮೌಲಾನಾ ಆಜಾದ್ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿಸಲಾಗುವುದು. ಒಟ್ಟಾರೆ 400 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನವಾಗಲಿರುವ ಈ ಯೋಜನೆಗೆ ಈ ವರ್ಷದಲ್ಲಿ 100 ಕೋಟಿ ರೂ. ಒದಗಿಸಲಾಗಿದೆ
- 2023-24ನೇ ಸಾಲಿನಲ್ಲಿ ಪದವಿ ಪೂರ್ವ ತರಗತಿಗಳನ್ನು ಪ್ರಾರಂಭಿಸಲಾಗಿರುವ 62 ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ವಾಣಿಜ್ಯ ವಿಭಾಗವನ್ನು ಪ್ರಾರಂಭಿಸಲಾಗುವುದು.
- ಮುಖ್ಯಮಂತ್ರಿಗಳ ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿ ಯೋಜನೆಯಡಿ 1,000 ಕೋಟಿ ರೂ. ಕ್ರಿಯಾ ಯೋಜನೆಯನ್ನು ತಯಾರಿಸಲಾಗಿದ್ದು, ಕಾಮಗಾರಿಗಳನ್ನು 2025-26ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುವುದು.
- ಮದರಸಾಗಳಲ್ಲಿ ಧಾರ್ಮಿಕ ಶಿಕ್ಷಣದೊಂದಿಗೆ ಔಪಚಾರಿಕ ಶಿಕ್ಷಣವನ್ನು ನೀಡಲು ಕಂಪ್ಯೂಟರ್, ಸ್ಮಾರ್ಟ್ ಬೋರ್ಡ್ ಇತ್ಯಾದಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ, ಈ ವಿದ್ಯಾರ್ಥಿಗಳು ಎನ್ಐಓಎಸ್ ಮೂಲಕ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಅವಕಾಶವಾಗುವಂತೆ ಸಜ್ಜುಗೊಳಿಸಲಾಗುವುದು.
- ವಕ್ಪ್ ಸಂಸ್ಥೆಗಳ ದುರಸ್ತಿ, ಜೀರ್ಣೋದ್ಧಾರ ಮತ್ತು ಖಬರಸ್ತಾನಗಳಲ್ಲಿ ಮೂಲಸೌಕರ್ಯಕ್ಕಾಗಿ ಹಾಗೂ ಆಸ್ತಿಗಳ ಸಂರಕ್ಷಣೆಗಾಗಿ 150 ಕೋಟಿ ರೂ. ಒದಗಿಸಲಾಗಿದೆ.
- ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮತ್ತು ವೃತ್ತಿ ಮಾರ್ಗದರ್ಶನಕ್ಕೆ ತರಬೇತಿ ನೀಡಲಾಗುವುದು.
- ಪದವಿ ಶಿಕ್ಷಣದಿಂದ ವಂಚಿತರಾಗುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬೆಂಗಳೂರಿನ ಹಜ್ ಭವನದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರ ತೆರೆದು, ವಿವಿಧ ಪದವಿ/ಸ್ನಾತಕೋತ್ತರ ಪದವಿ ಶಿಕ್ಷಣ ನೀಡಲಾಗುವುದು.
- ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ 50,000 ರೂ. ನೀಡಲಾಗುವುದು.
- ಹಜ್ ಯಾತ್ರಿಕರು ಹಾಗೂ ಅವರ ಸಂಬಂಧಿಕರಿಗೆ ಅಗತ್ಯ ಸೌಲಭ್ಯ ಮತ್ತು ಸೌಕರ್ಯಗಳನ್ನು ಒದಗಿಸಲು ಬೆಂಗಳೂರಿನ ಹಜ್ ಭವನದಲ್ಲಿ ಹೆಚ್ಚುವರಿ ಕಟ್ಟಡವನ್ನು ನಿರ್ಮಿಸಲಾಗುವುದು.
- ಅಲ್ಪಸಂಖ್ಯಾತ ಮಹಿಳೆಯರ ಉನ್ನತ ಶಿಕ್ಷಣಕ್ಕೆ ಪೂರಕವಾಗಿ 2024-25ನೇ ಸಾಲಿನಲ್ಲಿ ವಕ್ಫ್ ಸಂಸ್ಥೆಗಳ ಖಾಲಿ ನಿವೇಶನಗಳಲ್ಲಿ 15 ಮಹಿಳಾ ಕಾಲೇಜುಗಳ ನಿರ್ಮಾಣಕ್ಕೆ ಕ್ರಮಕೈಗೊಳ್ಳಲಾಗಿದೆ. ಮುಂದುವರೆದು, 2025-26ನೇ ಸಾಲಿನಲ್ಲಿ 16 ಹೊಸ ಮಹಿಳಾ ಕಾಲೇಜುಗಳನ್ನು ಸ್ಥಾಪಿಸಲಾಗುವುದು.
- ರಾಜ್ಯದಲ್ಲಿರುವ ಗುರುದ್ವಾರಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು 2 ಕೋಟಿ ರೂ. ಅನುದಾನ. ಬೆಂಗಳೂರಿನಲ್ಲಿ ಬೌದ್ಧ ಅಧ್ಯಯನ ಅಕಾಡೆಮಿಯನ್ನು ಸ್ಥಾಪಿಸಲಾಗುವುದು ಹಾಗೂ ಮಹಾಭೋಧಿ ಅಧ್ಯಯನ ಕೇಂದ್ರದ 100 ವರ್ಷಗಳ ಹಳೆಯ ಗ್ರಂಥಾಲಯವನ್ನು 1 ಕೋಟಿ ರೂ. ವೆಚ್ಚದಲ್ಲಿ ಡಿಜಿಟಲೀಕರಣಗೊಳಿಸಿ ಉನ್ನತೀಕರಿಸಲಾಗುವುದು.
- ಜೈನ, ಬೌದ್ಧ ಹಾಗೂ ಸಿಖ್ಖ್ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ. ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿಗಾಗಿ 250 ಕೋಟಿ ರೂ. ಒದಗಿಸಲಾಗುವುದು.
- ಪ್ರಾಚೀನ ಬೌದ್ಧ ಕೇಂದ್ರವಾಗಿರುವ ಕಲುಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನಲ್ಲಿ ಸನ್ನತಿ ಅಭಿವೃದ್ಧಿ ಪ್ರಾಧಿಕಾರ.ಅಲ್ಪಸಂಖ್ಯಾತರ ಸಮುದಾಯದವರಿಗೆ ಸಾಂಸ್ಕೃತಿಕ ಮತ್ತು ಸಾಮಾಜಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಹೋಬಳಿ ಮತ್ತು ತಾಲ್ಲೂಕು ಮಟ್ಟದಲ್ಲಿ 50 ಲಕ್ಷ ರೂ. ಹಾಗೂ ಜಿಲ್ಲಾ ಮತ್ತು ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಒಂದು ಕೋಟಿ ರೂ. ವೆಚ್ಚದಲ್ಲಿ ಬಹುಪಯೋಗಿ ಭವನಗಳನ್ನು ನಿರ್ಮಿಸಲಾಗುವುದು.
- ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಪ್ರದೇಶಗಳಲ್ಲಿರುವ ಐ.ಟಿ.ಐ ಗಳಲ್ಲಿ ಹೊಸ ಕೋರ್ಸ್ಗಳನ್ನು ಹಾಗೂ ಹೆಚ್ಚುವರಿ ತರಗತಿ ಪ್ರಾರಂಭಿಸಲಾಗುವುದು.
- KEA ಮುಖಾಂತರ ವೃತ್ತಿಪರ ಕೋರ್ಸ್ಗಳಲ್ಲಿ ಪ್ರವೇಶ ಪಡೆಯುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಐದು ಲಕ್ಷ ರೂ.ಗಳಿಗೆ ಸೀಮಿತಗೊಳಿಸಿ ಶುಲ್ಕದಲ್ಲಿ ಶೇ.50 ರಷ್ಟನ್ನು ಮರುಪಾವತಿ ಮಾಡಲಾಗುವುದು.
- ಉಳ್ಳಾಲದಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿನಿಯರಿಗಾಗಿ ವಸತಿ ಸಹಿತ ಪಿ.ಯು. ಕಾಲೇಜನ್ನು ಸ್ಥಾಪಿಸಲಾಗುವುದು.ಇದನ್ನೂ ಓದಿ:ಹನಿ, ತುಂತುರು ನೀರಾವರಿ ಘಟಕ ಅಳವಡಿಕೆ ಯೋಜನೆ – 1.81 ಲಕ್ಷ ರೈತರಿಗೆ 440 ಕೋಟಿ ಸಹಾಯಧನ
Advertisement