ಹಾಸನ: ಕರ್ನಾಟಕದ ದೇವಸ್ಥಾನಗಳನ್ನು ಕೇರಳ ಹಾಗೂ ತಮಿಳುನಾಡು ಮಾದರಿಯಲ್ಲಿ ಅಭಿವೃದ್ದಿ ಮಾಡುವಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ತಿಳಿಸಿದ್ದಾರೆ.
ಬೇಲೂರು ಚೆನ್ನಕೇಶವ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಲ್ಲ ಜಿಲ್ಲೆಗಳಲ್ಲಿರುವ ಪ್ರವಾಸಿ ತಾಣಗಳಿಗೆ ಶಿಘ್ರದಲ್ಲಿಯೇ ಭೇಟಿ ನೀಡುತ್ತೇನೆ. ವಿಶ್ವದ ಪ್ರವಾಸಿ ಕೇಂದ್ರವನ್ನಾಗಿ ಕರ್ನಾಟಕವನ್ನು ಬದಲಾವಣೆ ಮಾಡುತ್ತೇವೆ ಎಂದರು.
ಇದೇ ವೇಳೆ ಕೆಎಂಎಫ್ ಅಧ್ಯಕ್ಷ ಸ್ಥಾನದ ಕುರಿತು ಮಾಜಿ ಸಚಿವ ಎಚ್ ಡಿ ರೇವಣ್ಣ ಹೇಳಿಕೆಗೆ ತಿರುಗೇಟು ನೀಡಿದ ಸಚಿವರು, ಕೆಎಂಎಫ್ ಎಂಬುದು 80 ಲಕ್ಷ ಜನ ಜನರಿಗೆ ಉದ್ಯೋಗ ಕೊಟ್ಟಿದೆ. ಇದರ ಬಗ್ಗೆ ಹಗುರವಾಗಿ ಮಾತನಾಡಬಾರದು. ಅದು ಯಾವ ಅರ್ಥದಲ್ಲಿ ಮಾತನಾಡಿದ್ದಾರೋ ಗೊತ್ತಿಲ್ಲ ಎಂದು ತಿಳಿಸಿದರು.
ಲಕ್ಷ್ಮಣ ಸವದಿಯನ್ನು ಉಪಮುಖ್ಯಮಂತ್ರಿ ಮಾಡಿರುವುದನ್ನು ಸಾರ್ವಜನಿಕವಾಗಿ ಚರ್ಚೆ ಮಾಡುವುದಿಲ್ಲ. ನಮ್ಮ ಪಾರ್ಟಿಯಲ್ಲಿ ಯಾರು ಏನು ಬೇಕಾದರೂ ಆಗಬಹುದು. ಪತ್ರಕರ್ತರಿಗೆ ಟಿಕೆಟ್ ಕೊಟ್ಟು ಸಂಸದನಾಗಿ ಗೆಲ್ಲಿಸಿರುವುದು ಇದಕ್ಕೆ ಪ್ರಮುಖ ಉದಾಹರಣೆಯಾಗಿದೆ ಎಂದರು.
ಡಿಕೆಶಿ ಇಡಿ ವಿಚಾರಣೆ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಕಾನೂನಿನಡಿಯಲ್ಲಿ ಎಲ್ಲವನ್ನೂ ಎದುರಿಸಬೇಕು ಅದು ಯಾವುದೇ ಪಕ್ಷದ ರಾಜಕಾರಣಿ ಆಗಿರಬಹುದು. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ತಿಳಿಸಿದರು.