ಬೆಂಗಳೂರು: ಲೋಕಸಭಾ ಚುನಾವಣೆ ಬೆನ್ನಲ್ಲೇ ರಾಜ್ಯದ ಚಿಂಚೋಳಿ, ಕುಂದಗೋಳ ಉಪಚುನಾವಣೆ ಸಿದ್ಧತೆ ನಡೆದಿದ್ದು, ಕಾಂಗ್ರೆಸ್ ಎರಡು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.
ಉಮೇಶ್ ಜಾಧವ್ ರಾಜೀನಾಮೆಯಿಂದ ತೆರವಾಗಿದ್ದ ಚಿಂಚೋಳಿ ವಿಧಾನಸಭಾ ಕ್ಷೇತ್ರಕ್ಕೆ ಸುಭಾಷ್ ರಾಥೋಡ್ ಅವರಿಗೆ ಟಿಕೆಟ್ ನೀಡಲಾಗಿದೆ. ಸುಭಾಷ್ ರಾಥೋಡ್ ಅವರು ಕಲಬುರಗಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದು, ಬಿಜೆಪಿ ಅಭ್ಯರ್ಥಿ ಡಾ.ಅವಿನಾಶ್ ಜಾಧವ್ ಅವರಿಗೆ ಪ್ರಬಲ ಪೈಪೋಟಿ ನೀಡುವ ನಿರೀಕ್ಷೆ ಇದೆ. ಅಲ್ಲದೇ ಚಿಂಚೋಳಿ ಕ್ಷೇತ್ರದ ಉಪಚುನಾವಣೆಯ ಜವಾಬ್ದಾರಿಯನ್ನು ಡಿಸಿಎಂ ಪರಮೇಶ್ವರ್ ಅವರಿಗೆ ನೀಡಲಾಗಿದೆ. ಕ್ಷೇತ್ರದಲ್ಲಿ ಲಂಬಾಣಿ, ದಲಿತ, ಲಿಂಗಾಯತ ಸಚಿವರಿಗೆ ಸಾರಥ್ಯ ನೀಡಲಾಗಿದ್ದು, ಪ್ರಿಯಾಂಕ್ ಖರ್ಗೆ, ರಾಜಶೇಖರ್ ಪಾಟೀಲ್, ತುಕಾರಾಂ, ಈಶ್ವರ್ ಖಂಡ್ರೆ, ಪಿ.ಟಿ.ಪರಮೇಶ್ವರ್ ನಾಯಕ್, ರಹೀಂಖಾನ್ ಕ್ಷೇತ್ರದಲ್ಲಿ ಪ್ರಚಾರ ಮಾಡಲಿದ್ದಾರೆ.
- Advertisement 2
- Advertisement 3
ಸಚಿವ ಶಿವಳ್ಳಿ ಅವರ ಆಕಾಲಿಕ ನಿಧನದಿಂದ ತೆರವಾಗಿದ್ದ ಕುಂದಗೋಳ ಕ್ಷೇತ್ರಕ್ಕೆ ಅವರ ಧರ್ಮಪತ್ನಿ ಕುಸುಮಾವತಿ ಶಿವಳ್ಳಿ ಅವರಿಗೆ ನಿರೀಕ್ಷೆಯಂತೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಕೆಲ ದಿನಗಳ ಹಿಂದೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಕುಸುಮಾವತಿ ಅವರು, ಅಭಿಮಾನಿಗಳು ಹಾಗೂ ಕಾರ್ಯಕರ್ತರು ತಮ್ಮನ್ನು ಚುನಾವಣೆಗೆ ನಿಲ್ಲುವಂತೆ ಒತ್ತಾಯಿಸುತ್ತಿದ್ದು, ಅವರ ಆಸೆಯಂತೆ ಸ್ಪರ್ಧೆ ನಡೆಸಲು ಸಿದ್ಧ ಎಂದಿದ್ದರು. ಕುಂದಗೋಳ ಕ್ಷೇತ್ರದ ಉಸ್ತುವಾರಿಯನ್ನು ಕುರುಬ, ಲಿಂಗಾಯತ ಸಚಿವರಾದ ಎಂಟಿಬಿ ನಾಗರಾಜು, ಎಂ.ಬಿ.ಪಾಟೀಲ್, ಶಿವಾನಂದ ಪಾಟೀಲ್ ಅವರಿಗೆ ನೀಡಲಾಗಿದೆ. ಈ ಕ್ಷೇತ್ರದ ಸಂಪೂರ್ಣ ಜವಾಬ್ದಾರಿಯನ್ನು ಕಾಂಗ್ರೆಸ್ ಟ್ರಬಲ್ ಶೂಟರ್, ಸಚಿವ ಡಿಕೆ ಶಿವಕುಮಾರ್ ಅವರಿಗೆ ವಹಿಸಲಾಗಿದೆ ಎಂದು ತಿಳಿದು ಬಂದಿದೆ. ಈಗಾಗಲೇ ಉಪ ಚುನಾವಣೆ ನಡೆಯುವ ಎರಡೂ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ನಿಲ್ಲಿಸುವುದಿಲ್ಲ ಎಂದು ಕಾಂಗ್ರೆಸ್ ಮೈತ್ರಿ ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.
- Advertisement 4
ಚಿಂಚೋಳಿ ಹಾಗೂ ಕುಂದಗೋಳ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.
ಈ ಅಭ್ಯರ್ಥಿಗಳು ಕಾಂಗ್ರೆಸ್ ಜೆಡಿಎಸ್ ಮೈತ್ರಿ ಅಭ್ಯರ್ಥಿಗಳಾಗಿದ್ದು ಈ ಚುನಾವಣೆಯಲ್ಲಿ ಅತ್ಯಧಿಕ ಮತಗಳ ಅಂತರದಲ್ಲಿ ಗೆಲುವನ್ನು ಸಾಧಿಸಿದ್ದಾರೆ. @KPCCPresident@dineshgrao pic.twitter.com/aqumVRc9ez
— Karnataka Congress (@INCKarnataka) April 27, 2019