– ಕೈ ಕಾಲು ಕಟ್ಟಿದ ಸ್ಥಿತಿಯಲ್ಲಿ ಬಾವಿಯಲ್ಲಿ ಶವ
ಬೆಳಗಾವಿ(ಚಿಕ್ಕೋಡಿ): ಮನೆ ಮುಂದೆ ಆಟವಾಡುತ್ತಿದ್ದಾಗ ನಾಪತ್ತೆಯಾಗಿದ್ದ 8 ವರ್ಷದ ಬಾಲಕಿಯ ಶವ, ಕೈ ಕಾಲು ಕಟ್ಟಿ ಎಸೆದ ಸ್ಥಿತಿಯಲ್ಲಿ ಬಾವಿಯೊಂದರಲ್ಲಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ಪರಮಾನಂದವಾಡಿ ಗ್ರಾಮದಲ್ಲಿ ನಡೆದಿದೆ.
ಪರಮಾನಂದವಾಡಿ ಗ್ರಾಮದ ನಿವಾಸಿ ಲಕ್ಷ್ಮೀ ಅತಾಲಟ್ಟಿ(8) ಅಕ್ಟೋಬರ್ 15ರ ಸಂಜೆ ಮನೆ ಮುಂದೆ ಆಟವಾಡುತ್ತಿದ್ದಾಗ ನಾಪತ್ತೆಯಾಗಿದ್ದಳು. ಆಕೆಯನ್ನು ಯಾರೋ ಅಪಹರಣ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿತ್ತು. ಹೀಗಾಗಿ ಕುಡಚಿ ಪೊಲೀಸ್ ಠಾಣೆಯಲ್ಲಿ ಬಾಲಕಿ ಪೋಷಕರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಅಪಹರಣ ಪ್ರಕರಣ ದಾಖಲಿಸಿಕೊಂಡು ಹುಡುಕಾಟ ನಡೆಸುತ್ತಿದ್ದರು.
ಬುಧವಾರ ರಾತ್ರಿ ಬಾಲಕಿ ಶವ ಆಕೆಯ ಮನೆ ಹತ್ತಿರವಿದ್ದ ಬಾವಿಯಲ್ಲಿ ಪತ್ತೆಯಾಗಿದೆ. ಬಾಲಕಿಯ ಕೈ ಕಾಲುಗಳನ್ನು ಹಗ್ಗದಿಂದ ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಮನೆ ಮುಂದೆ ಆಟವಾಡುತ್ತಿದ್ದ ಅಪಹರಣಗೊಂಡ ಬಾಲಕಿ, ಮರುದಿನ ಮನೆಯ ಹತ್ತಿರದ ಬಾವಿಯಲ್ಲಿಯೇ ಶವವಾಗಿ ಪತ್ತೆಯಾಗಿದ್ದಾಳೆ.
ಬಾಲಕಿಯ ಸಾವಿನ ಸುತ್ತ ಹಲವು ಅನುಮಾನಗಳ ಹುತ್ತ ಬೆಳೆದು ನಿಂತಿದ್ದು, ಸದ್ಯ ಬಾವಿಯಿಂದ ಬಾಲಕಿಯ ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.