ಬೆಳಗಾವಿ: ಕೇಂದ್ರದಂತೆ ರಾಜ್ಯ ಸರ್ಕಾರವೂ ರೈತ ವಿರೋಧಿ ಕಾನೂನುಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಸುವರ್ಣಸೌಧ ಮುತ್ತಿಗೆಗೆ ಯತ್ನಸಿದ್ದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನಾ ಅಧ್ಯಕ್ಷ ಕೂಡಿಹಳ್ಳಿ ಚಂದ್ರಶೇಖರ್ ಸೇರಿ ನೂರಾರು ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ಜಮಾವನೆಗೊಂಡಿದ್ದ ರೈತರು ಸುವರ್ಣಸೌಧದವರೆಗೆ ಪಾದಯಾತ್ರೆಗೆ ನಿರ್ಧರಿಸಿದ್ದರು. ಪಾದಯಾತ್ರೆಗೂ ಮುನ್ನ ಹಿರೇಬಾಗೇವಾಡಿಯ ಬಸವೇಶ್ವರ ಪುತ್ಥಳಿಗೆ ಕೋಡಿಹಳ್ಳಿ ಚಂದ್ರಶೇಖರ ಮಾಲಾರ್ಪಣೆಗೆ ಮುಂದಾದರು. ಆಗ ರೈತರನ್ನು ವಶಕ್ಕೆ ಪಡೆದ ಪೊಲೀಸರು ಒತ್ತಾಯಪೂರ್ವಕವಾಗಿ ಬಸ್ಸಿನಲ್ಲಿ ಹತ್ತಿಸಿದರು. ಬಳಿಕ ಸುವರ್ಣಸೌಧ ಎದುರಿನ ಕೊಂಡುಸಕೊಪ್ಪ ಪ್ರತಿಭಟನಾ ಸ್ಥಳಕ್ಕೆ ಕರೆತರಲಾಯಿತು. ಈ ವೇಳೆ ಪೊಲೀಸರು ಹಾಗೂ ರೈತರ ಮಧ್ಯೆ ವಾಗ್ವಾದವೂ ನಡೆಯಿತು. ಇದನ್ನೂ ಓದಿ: ಪ್ರತಿ ಮನೆಯಲ್ಲೂ ತಲ್ವಾರ್ ಇಟ್ಟುಕೊಂಡು ಗೋವು ರಕ್ಷಣೆ ಮಾಡಿ: ಸಾಧ್ವಿ ಸರಸ್ವತಿ
ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ:
ಪ್ರತಿಭಟನಾನಿರತರನ್ನು ಪೊಲೀಸರು ವಶಕ್ಕೆ ಪಡೆಯುತ್ತಿದ್ದಂತೆ ರಾಜ್ಯ ಸರ್ಕಾರದ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿರುದ್ಧ ಘೋಷಣೆ ಕೂಗಿದರು. ರೈತರ ವಿರೋಧಿ ಸರ್ಕಾರ ಬಹಳ ದಿನ ಉಳಿಯಲ್ಲ ಎಂದು ರೈತ ಹೋರಾಟಗಾರ್ತಿ ಮಂಜುಳಾ ಅಸಮಾಧಾನ ವ್ಯಕ್ತಪಡಿಸಿದರು. ಕೊಂಡುಸಕೊಪ್ಪದ ಪ್ರತಿಭಟನಾ ಸ್ಥಳದಲ್ಲಿ ಕೋಡಿಹಳ್ಳಿ ಚಂದ್ರಶೇಖರ ನೇತೃತ್ವದಲ್ಲಿ ಪ್ರತಿಭಟನೆ ಮುಂದುವರೆದಿದೆ. ಹೋರಾಟದ ರೂಪರೇಷೆಗಳ ಬಗ್ಗೆ ರೈತರು ಚರ್ಚೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ತವರು ಜಿಲ್ಲೆಯ ಅಧಿವೇಶನಕ್ಕೂ ಬರಲಿಲ್ಲ ರಮೇಶ್ ಜಾರಕಿಹೊಳಿ!