ಕೊಪ್ಪಳ: ಸಿಎಂ ಯಡಿಯೂರಪ್ಪ ಅವರಿಂದ ನಾಮಕರಣಗೊಂಡ ಕಲ್ಯಾಣ ಕರ್ನಾಟಕದಲ್ಲಿನ ಮೊದಲ ಲಂಚಾವತಾರ ಪ್ರಕರಣದ ಅಧಿಕಾರಿ ಮತ್ತು ಸಿಬ್ಬಂದಿಯನ್ನ ಅಮಾನತುಗೊಳಿಸಿ ಕೊಪ್ಪಳ ಸಿಇಓ ಆದೇಶ ಹೊರಡಿಸಿದ್ದಾರೆ.
ಈ ಕುರಿತು ಮಾಧ್ಯಮಕ್ಕೆ ಜಿಲ್ಲಾಧಿಕಾರಿ ಪಿ.ಸುನಿಲ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಕೊಪ್ಪಳ ಎಚ್.ಕೆ.ಆರ್.ಡಿ.ಬಿ ನಿಗಮದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಿರಿಯ ಲೆಕ್ಕಾಧಿಕಾರಿ ನಾರಾಯಣ ಸ್ವಾಮಿ ಮತ್ತು ಕಂಪ್ಯೂಟರ್ ಆಪರೇಟರ್ ಆದೆಪ್ಪ ಲಂಚಕ್ಕೆ ಬೇಡಿಕೆ ಇಟ್ಟ ವೀಡಿಯೋ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ಕುರಿತು ಸೆ. 29ರಂದು ಪಬ್ಲಿಕ್ ಟಿವಿ ಸುದ್ದಿ ಪ್ರಸಾರ ಮಾಡಿತ್ತು. ವರದಿ ನೋಡಿ ಎಚ್ಚೆತ್ತ ಕೊಪ್ಪಳ ಜಿಲ್ಲಾಡಳಿತ ಇಬ್ಬರನ್ನೂ ಅಮಾನತುಗೊಳಿಸಿ ಆದೇಶಿಸಿದೆ.
ಎಚ್.ಕೆ.ಆರ್.ಡಿ.ಬಿ ನಿಗಮದಲ್ಲಿ ಕಾಮಗಾರಿಗಳ ಕಡತ ವಿಲೇವಾರಿಗಾಗಿ ಮೇಲಾಧಿಕಾರಿಗಳಿಗೆ ಲಂಚವನ್ನು ಕೊಡಬೇಕು ಎಂದು ಕೇಳಿದ್ದ ಅಧಿಕಾರಿ ನಾರಾಯಣ ಸ್ವಾಮಿಯ ಬಂಡವಾಳ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಹಾಗೆಯೇ ಕಂಪ್ಯೂಟರ್ ಆಪರೇಟರ್ ಸಹ ಕಡತ ವಿಲೇವಾರಿಗಾಗಿ ಹಣ ಕೇಳಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ಪ್ರಕರಣವು ಕಲ್ಯಾಣ ಕರ್ನಾಟಕದ ಮೊದಲ ಲಂಚಾವತಾರದ ಪ್ರಕರಣವಾಗಿದೆ.
ಕಾಮಗಾರಿಗೆ ಅನುಮತಿ ನೀಡಬೇಕು ಎಂದರೆ 30% ಲಂಚ ಕೊಡಲೇಬೇಕೆಂದು ಇಲ್ಲಿನ ಅಧಿಕಾರಿ ನಾರಾಯಣಸ್ವಾಮಿ ಮುಲಾಜಿಲ್ಲದೆ ಗುತ್ತಿಗೆದಾರರ ಬಳಿ ಬೇಡಿಕೆ ಇಟ್ಟಿದ್ದರು. ಗುತ್ತಿಗೆದಾರರು ನಮಗೆ ಏನೂ ಉಳಿಯೋದಿಲ್ಲ ಸರ್ ಕೊಡಕ್ಕೆ, ತಲೆಕೆಟ್ಟುಹೋಗಿದೆ. ನಮಗೆ 31 ಪರ್ಸೆಂಟೇಜ್ ಬರುತ್ತೆ, ಅದರಲ್ಲಿ ನಿಮಗೆಲ್ಲಿಂದ ಕೊಡೋದು ಎಂದರೆ, ಅಧಿಕಾರಿ ನಾರಾಯಣಸ್ವಾಮಿ ನಾವು ಇಲ್ಲಿ ತುಂಬಾ ಜನಕ್ಕೆ ಕೊಡಬೇಕು ಹಣ ಕೊಟ್ಟು ಕಾಮಗಾರಿ ಮಾಡಿ ಎಂದು ನೇರವಾಗಿ ಹಣ ಕೇಳುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿತ್ತು.
ಇಲ್ಲಿನ ಅಧಿಕಾರಿಗಳಿಗೆ ಲಂಚ ನೀಡಿದ್ದಲ್ಲದೇ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ ಕಂಪ್ಯೂಟರ್ ಆಪರೇಟರ್ ಗಳು ಕೂಡ ಲಂಚ ಹೇಳಿರುವ ಬಗ್ಗೆ ವರದಿಯಾಗಿತ್ತು. ಅತ್ತ ಅಧಿಕಾರಿ ಹಣ ಪೀಕಿದರೆ, ಇತ್ತ ಪಂಚಾಯತ್ ರಾಜ್ ಕಚೇರಿಯ ಕಂಪ್ಯೂಟರ್ ಆಪರೇಟರ್ ಆದೇಪ್ಪನಿಗೆ ಮಾಮೂಲಿ ಕೊಟ್ಟರೇನೆ ಆತ ಫೈಲ್ ಮುಂದಕ್ಕೆ ಕಳಿಹಿಸುತ್ತಾನೆ. ಇಲ್ಲದಿದ್ದರೆ ಯಾವ ಕೆಲಸನೂ ಆಗಲ್ಲ. ಯಾರು ಮೊದಲು ಕಮಿಷನ್ ಕೊಡುತ್ತಾರೋ ಅವರ ಕೆಲಸ ಬೇಗ ಆಗುತ್ತೆ. ಹಣ ಕೊಡು ನಿನ್ನ ಕೆಲಸ ನಾನು ಮಾಡಿಸಿ ಕೊಡುತ್ತೇನೆ ಎಂದು ಆದೇಪ್ಪ ಗುತ್ತಿಗೆದಾರರಿಗೆ ಹೇಳಿದ ದೃಶ್ಯಗಳು ಕೂಡ ವಿಡಿಯೋದಲ್ಲಿ ಸೆರೆಯಾಗಿತ್ತು. ಈ ವರದಿಯಿಂದ ಎಚ್ಚೆತ್ತ ಜಿಲ್ಲಾಡಳಿತ ಲಂಚ ಪಡೆದ ಅಧಿಕಾರಿ ಹಾಗೂ ಸಿಬ್ಬಂದಿಯನ್ನ ಅಮಾನತುಗೊಳಿಸಿದೆ.