ಕೊಪ್ಪಳ: ಮಾಮೂಲಿ ಕೊಡಲು ನಿರಾಕರಿಸಿದ ವ್ಯಕ್ತಿ ಮೇಲೆ ಸುಳ್ಳು ಪ್ರಕರಣ ದಾಖಲಿಸಿ, ಮಾಧ್ಯಮಗಳಿಗೆ ಅಥವಾ ಅಧಿಕಾರಿಗಳಿಗೆ ದೂರು ಕೊಟ್ಟರೆ ಶೂಟ್ ಮಾಡುತ್ತೇನೆ ಎಂದು ಪಿಎಸ್ಯ ಒಬ್ಬರು ಬೆದರಿಸಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.
ಜಿಲ್ಲೆಯ ಕಾರಟಗಿ ಪಿಎಸ್ಐ ವಿಜಯಕೃಷ್ಣ ವಿರುದ್ಧ ಈ ಗಂಭೀರ ಆರೋಪ ಕೇಳಿ ಬಂದಿದೆ. ರಾಯಚೂರು ಜಿಲ್ಲೆಯ ಸಿಂಧನೂರ ತಾಲೂಕಿನ ಮುಕ್ಕುಂದ ಗ್ರಾಮದ ಭಾಷಾಸಾಬ್ ಅವರಿಗೆ ಪಿಎಸ್ಐ ಬೆದರಿಕೆ ಹಾಕಿದ್ದಾರೆ. ಇದರಿಂದ ಭಯಗೊಂಡ ಭಾಷಾಸಾಬ್ ‘ನನ್ನ ಜೀವಕ್ಕೆ ಏನಾದರು ಆದರೆ ಅದಕ್ಕೆ ವಿಜಯಕೃಷ್ಣ ಕಾರಣ’ ಎಂದು ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.
- Advertisement 2
ಮರಳು ಸಾಗಾಟ ವಿಚಾರದಲ್ಲಿ ಭಾಷಾಸಾಬ್ ಹಾಗೂ ಕಾರಟಗಿ ಪೊಲೀಸರ ನಡುವೆ ವಾಗ್ವಾದ ನಡೆದಿತ್ತು. ತಮ್ಮ ಠಾಣಾ ವ್ಯಾಪ್ತಿ ಮೀರಿ ಪೊಲೀಸರು ಭಾಷಾಸಾಬ್ ಟ್ರ್ಯಾಕ್ಟರ್ ಸೀಜ್ ಮಾಡಿದ್ದರು. ಈ ವಿಷಯ ಮಾಧ್ಯಮದಲ್ಲಿ ಭಿತ್ತರವಾಗುತ್ತಿದ್ದಂತೆ ರಿವೇಂಜ್ ತಗೆದುಕೊಂಡ ಪೊಲೀಸರು ಭಾಷಾಸಾಬ್ ವಿರುದ್ಧ ಐಪಿಸಿ ಸೆಕ್ಷನ್ 307 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ ಈ ವಿಷಯ ಮಾಧ್ಯಮದವರಿಗೆ ತಿಳಿಸಿದರೆ ರಿವಾಲ್ವರ್ ಇಟ್ಟು ಶೂಟ್ ಮಾಡುತ್ತೇನೆ ಎಂದು ಪಿಎಸ್ಐ ಬೆದರಿಕೆ ಹಾಕಿದ್ದಾರೆ. ಹೀಗಾಗಿ ಜೀವಭಯದಲ್ಲಿರುವ ಭಾಷಾಸಾಬ್ ವಿಜಯಕೃಷ್ಣ ವಿರುದ್ಧ ಸಿಎಂಗೆ ಪತ್ರ ಬರೆದಿದ್ದಾರೆ.
- Advertisement 3
- Advertisement 4
ಈ ಘಟನೆಗೆ ಪ್ರಮುಖ ಕಾರಣ ಕಾರಟಗಿ ಪೊಲೀಸ್ ಠಾಣೆ ಪೇದೆ ಭೀಮಣ್ಣ ಎನ್ನಲಾಗಿದೆ. ಕಳೆದ ಮೂರು ತಿಂಗಳ ಹಿಂದೆ ಮುಕ್ಕುಂದ ಗ್ರಾಮದಲ್ಲಿ ಮರಳು ಸಾಗಾಟದ ಮಾಮೂಲಿ ವಸೂಲಿಗೆ ಪೊಲೀಸರು ಹೋಗಿದ್ದರು. ಆದರೆ ಭಾಷಾಸಾಬ್ ನಮ್ಮ ಗ್ರಾಮ ನಿಮ್ಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರಲ್ಲ ಎಂದು ಪೊಲೀಸರ ಬಳಿ ಗಲಾಟೆ ಮಾಡಿದ್ದರು. ಅಲ್ಲದೇ ಮೊಬೈಲ್ನಲ್ಲಿ ಗಲಾಟೆಯ ದೃಶ್ಯವನ್ನು ಸೆರೆಹಿಡಿದಿದ್ದರು. ಹೀಗಾಗಿ ಪೊಲೀಸರು ಭಾಷಾಸಾಬ್ರನ್ನ ಟಾರ್ಗೆಟ್ ಮಾಡಿದ್ದರು. ಆದ್ದರಿಂದಲೇ ಭಾಷಾಸಾಬ್ ವಿರುದ್ಧ ಸುಳ್ಳು ಕೇಸ್ ದಾಖಲು ಮಾಡಿ ಪೊಲೀಸರು ಹಗೆ ಸಾಧಿಸಿದ್ದಾರೆ.
ಮಾಮೂಲಿ ಕೊಟ್ಟಿಲ್ಲ ಅನ್ನೋ ಕಾರಣಕ್ಕೆ ಪೊಲೀಸರು ಟಾರ್ಗೆಟ್ ಮಾಡುತಿದ್ದು, ಭಾಷಾಸಾಬ್ ಊರು ಬಿಟ್ಟು ಅಲೆಯುತ್ತಿದ್ದಾರೆ. ಅಲ್ಲದೆ ಪಿಎಸ್ಐ ವಿಜಯಕೃಷ್ಣ ಗೂಂಡಾಗಳನ್ನ ಬಿಟ್ಟು ಭಾಷಾಸಾಬ್ಗೆ ಧಮ್ಕಿ ಹಾಕಿದ್ದು, ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದ್ದಾರೆ.