– ಸಿಟಿ ರವಿ, ರೇಣುಕಾಚಾರ್ಯ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ
ಬೆಂಗಳೂರು: ಪೌರತ್ವ ಕಾಯ್ದೆ ವಿರೋಧಿಸಿ ನಡೆಸಿದ ಪ್ರತಿಭಟೆಯಲ್ಲಿ ಗೋಲಿಬಾರ್ ಮಾಡಿ, ಇಬ್ಬರನ್ನ ಬಲಿ ಪಡೆದು ರಾಜ್ಯ ಸರ್ಕಾರ ಮಾನವ ಹಕ್ಕು ಉಲ್ಲಂಘನೆ ಮಾಡಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಜಿ. ಜನಾರ್ದನ್ ದೂರು ನೀಡಿದ್ದಾರೆ.
ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯ ಮೂಲಕ ಪ್ರತಿಭಟನೆಗೆ ತಡೆಯೊಡ್ಡಿ, ಪ್ರಗತಿಪರ ಹೋರಾಟಗಾರರನ್ನು ಬಂಧಿಸಿದೆ. ಪೌರತ್ವ ಕಾಯ್ದೆ ವಿರುದ್ಧ ಹೋರಾಟ ಮಾಡುತ್ತಿದ್ದ ಇಬ್ಬರ ಯುವಕರಿಗೆ ಗುಂಡು ಹಾರಿಸಿ, ಬಲಿ ಪಡೆಯಲಾಗಿದೆ. ಇದಕ್ಕೆ ರಾಜ್ಯ ಸರ್ಕಾರವೇ ಮೂಲ ಕಾರಣ ಹಾಗೂ ಮಾನವ ಹಕ್ಕುಗಳನ್ನು ಸಂಪೂರ್ಣವಾಗಿ ಧಮನ ಮಾಡಿದೆ. ಅಲ್ಲದೇ ಪೊಲೀಸ್ ಇಲಾಖೆಯ ಮೂಲಕ ದೌರ್ಜನ್ಯ ಎಸಗಿ ಮಾನವ ಹಕ್ಕುಗಳನ್ನು ಉಲ್ಲಂಘನೆ ಮಾಡಿದೆ ಎಂದು ಜಿ.ಜನಾರ್ದನ್ ದೂರಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಮಂಗಳೂರಿನಲ್ಲಿ ಗೋಲಿಬಾರ್, ಇಬ್ಬರು ಬಲಿ- ಗುಂಡು ಹಾರಿಸಿದ್ದಕ್ಕೆ ಪೊಲೀಸ್ ಆಯುಕ್ತರಿಂದ ಸ್ಪಷ್ಟನೆ
ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿಟಿ ರವಿ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಈ ಇಬ್ಬರ ನಾಯಕರು ಪೌರತ್ವ ಕಾಯ್ದೆಯ ಪರ ಹೇಳಿಕೆ ನೀಡಿದ್ದಾರೆ. ಪಾಕಿಸ್ತಾನ ಹೆಸರನ್ನು ಪ್ರಸ್ತಾಪಿಸಿ ಪೌರತ್ವ ಕಾಯ್ದೆ ವಿರೋಧ ಮಾಡುವವರು ಪಾಕಿಸ್ತಾನಕ್ಕೆ ಹೋಗಲಿ ಅಂತ ಬೆದರಿಕೆ ಹಾಕಿದ್ದಾರೆ. ಅವರ ಹೇಳಿಕೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರುವಂತಿದೆ. ಹಾಗಾಗಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಿ ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು ಜಿ. ಜನಾರ್ದನ್ ಆಗ್ರಹಿಸಿದ್ದಾರೆ.