– ಕಾಂಗ್ರೆಸ್ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಪೂರ್ಣ ಹಾಡಲ್ಲ
– ಸೋನಿಯಾ ಗಾಂಧಿ ವಿರುದ್ಧದ ಆರೋಪ RSS ಕುತಂತ್ರ ಎಂದ ಕೆಪಿಸಿಸಿ ಅಧ್ಯಕ್ಷ
ನವದೆಹಲಿ: ಕಾಂಗ್ರೆಸ್ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ (Vande Mataram Row) ಗೀತೆಯನ್ನು ಪೂರ್ಣವಾಗಿ ಹಾಡುವುದಿಲ್ಲ. ಎರಡು ಪ್ಯಾರಾಗಳನ್ನಷ್ಟೇ ಹಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ (B.K.Hariprasad) ಸ್ಪಷ್ಟಪಡಿಸಿದ್ದಾರೆ. ವಂದೇ ಮಾತರಂಗೆ ಕಾಂಗ್ರೆಸ್ ವಿರೋಧವಿಲ್ಲ ಎಂದಿರುವ ಅವರು, ಬಂಕಿಮಚಂದ್ರ ಚಟರ್ಜಿ ಬರೆದಿರುವ ಗೀತೆಯ ಎರಡು ಪ್ಯಾರಾಗಳನ್ನು ಮಾತ್ರ ಕಾಂಗ್ರೆಸ್ ಕಾರ್ಯಕ್ರಮಗಳಲ್ಲಿ ಹಾಡುತ್ತೇವೆ ಎಂದು ಹೇಳಿದ್ದಾರೆ.
ಸೋನಿಯಾ ಗಾಂಧಿ ಅವರು ವಂದೇ ಮಾತರಂಗೆ ಅಪಮಾನ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಪ್ರತಿಕ್ರಿಯಿಸಿದ ಹರಿಪ್ರಸಾದ್, ನೇಣು ಹಾಕಿದರೂ, ಜೈಲಿಗೆ ಹಾಕಿದರೂ ನಾವು ಹಾಡುವುದು ಎರಡು ಪ್ಯಾರಾ ಎಂದಿದ್ದಾರೆ. ಇದನ್ನೂ ಓದಿ: ಸೋನಿಯಾ ಗಾಂಧಿ ದೇಹದಲ್ಲಿ ಇಟಲಿ ರಕ್ತ ಹರಿಯುತ್ತಿದೆ – ಹೆಚ್ಡಿಕೆ ಕಿಡಿ
ವಂದೇ ಮಾತರಂ ಅನ್ನು ಕಡ್ಡಾಯಗೊಳಿಸುವ ಮೂಲಕ ರಾಷ್ಟ್ರಗೀತೆ ‘ಜನಗಣಮನ’ವನ್ನು ಎರಡನೇ ದರ್ಜೆಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ಆರೋಪಿಸಿದರು. ರಾಷ್ಟ್ರಗೀತೆ, ರಾಷ್ಟ್ರಧ್ವಜ ಹಾಗೂ ರಾಷ್ಟ್ರಚಿಹ್ನೆಗೆ ಬಿಜೆಪಿ ಮತ್ತು ಆರ್ಎಸ್ಎಸ್ ಅಪಮಾನ ಮಾಡಿದೆ ಎಂದು ಟೀಕಿಸಿದರು.

ನಾವು ವಂದೇ ಮಾತರಂ ವಿರುದ್ಧ ಇಲ್ಲ. ಆದರೆ, ಕಾಂಗ್ರೆಸ್ ಕಾರ್ಯಕ್ರಮಗಳಲ್ಲಿ ಪೂರ್ಣ ಗೀತೆ ಹಾಡುವುದಿಲ್ಲ. ಎರಡು ಪ್ಯಾರಾಗಳನ್ನು ಮಾತ್ರ ಹಾಡುತ್ತೇವೆ ಎಂದು ಅವರು ಸ್ಪಷ್ಟಪಡಿಸಿದರು. ರಾಜ್ಯದಲ್ಲಿ ಸರ್ಕಾರದ ಕಾರ್ಯಕ್ರಮಗಳಲ್ಲಿ ಪೂರ್ಣ ಗೀತೆ ಹಾಡುವುದು ಸರ್ಕಾರಕ್ಕೆ ಬಿಟ್ಟ ವಿಚಾರ. ಸರ್ಕಾರ ಜನರಿಂದ ಆಯ್ಕೆಯಾಗಿದೆ. ಕಾನೂನು ಪಾಲನೆ ಮಾಡಲಿ, ನಮ್ಮ ಆಕ್ಷೇಪವಿಲ್ಲ ಎಂದರು.
ಆರ್ಎಸ್ಎಸ್ ಹಾಗೂ ಹಿಂದೂ ಮಹಾಸಭಾದ ಚಟುವಟಿಕೆಗಳನ್ನು ಪ್ರಸ್ತಾಪಿಸಿದ ಹರಿಪ್ರಸಾದ್, ‘ಸದಾ ವತ್ಸಲೇ’ಯನ್ನು ರಾಷ್ಟ್ರಗೀತೆ ಎಂದು ಪರಿಗಣಿಸಬಹುದೇ ಎಂದು ಪ್ರಶ್ನಿಸಿದರು. ‘ಆಜಾದ್ ಹಿಂದ್ ಜಿಂದಾಬಾದ್, ಇಂಕಲಾಬ್ ಜಿಂದಾಬಾದ್ ಘೋಷಣೆಗಳನ್ನು ಬಿಜೆಪಿಯವರು ಕೂಗುತ್ತಾರೆಯೇ’ ಎಂದು ಪ್ರಶ್ನಿಸಿದ ಅವರು, ವಂದೇ ಮಾತರಂ ವಿಚಾರವನ್ನು ಮುಂದಿಟ್ಟುಕೊಂಡು ದೇಶದಲ್ಲಿ ಸೌಹಾರ್ದತೆ ಹಾಳು ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ವಂದೇ ಮಾತರಂಗೆ ಅವಮಾನ ಮಾಡಿದ ನಿಮ್ಮನ್ನು ದೇಶ ಕ್ಷಮಿಸಲ್ಲ: ಸೋನಿಯಾ ವಿರುದ್ಧ ಅಮಿತ್ ಶಾ ವಾಗ್ದಾಳಿ
ಸೋನಿಯಾ ಗಾಂಧಿ ವಿರುದ್ಧದ ಆರೋಪವನ್ನು ಆರ್ಎಸ್ಎಸ್ನ ಕುತಂತ್ರ ಎಂದು ಬಣ್ಣಿಸಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕುರ್ಚಿ ಕೇಳಿದವರು ಸೋನಿಯಾ ಗಾಂಧಿ ಎಂಬ ಆರೋಪಗಳ ಬಗ್ಗೆಯೂ ಪ್ರತಿಕ್ರಿಯಿಸಿದರು. 2024ಕ್ಕೂ ಮುನ್ನ ಸಂವಿಧಾನ ಬದಲಿಸಲು ಬಿಜೆಪಿ ಮುಂದಾಗಿತ್ತು, ಆದರೆ ಜನರು ಸೂಕ್ತ ಉತ್ತರ ನೀಡಿದ್ದಾರೆ ಎಂದು ಹರಿಪ್ರಸಾದ್ ಹೇಳಿದರು.
ಜಿಲ್ಲಾಧ್ಯಕ್ಷರ ನೇಮಕ ಶೀಘ್ರ
ಹೈಕಮಾಂಡ್ ನಾಯಕರ ಭೇಟಿಗಾಗಿ ದೆಹಲಿಗೆ ಬಂದಿರುವುದಾಗಿ ಹರಿಪ್ರಸಾದ್ ತಿಳಿಸಿದರು. ಎಐಸಿಸಿ ಪ್ರತಿನಿಧಿಗಳು ಜಿಲ್ಲಾವಾರು ಸಭೆ ನಡೆಸಿ ಸಂಘಟನೆಯ ಕುರಿತು ವರದಿ ನೀಡಿದ್ದಾರೆ. ಈ ವರದಿಗಳ ಬಗ್ಗೆ ಚರ್ಚಿಸಲು ದೆಹಲಿಗೆ ಬಂದಿದ್ದು, ಜಿಲ್ಲಾಧ್ಯಕ್ಷರ ನೇಮಕದ ಬಗ್ಗೆಯೂ ಚರ್ಚೆ ನಡೆಯಲಿದೆ ಎಂದರು. ಈ ತಿಂಗಳಾಂತ್ಯದೊಳಗೆ ಹೊಸ ಜಿಲ್ಲಾಧ್ಯಕ್ಷರ ನೇಮಕಾತಿ ಪೂರ್ಣಗೊಳ್ಳಲಿದೆ ಎಂದು ಕೆಪಿಸಿಸಿ ಅಧ್ಯಕ್ಷರು ಮಾಹಿತಿ ನೀಡಿದರು.

