ನವದೆಹಲಿ : ಈ ಬಾರಿ ಎಸ್ಟಿ ಸಮುದಾಯಕ್ಕೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಶಾಸಕ, ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೈಕಮಾಂಡ್ ಮೇಲೆ ಒತ್ತಡ ಹೇರಿದ್ದಾರೆ. ದೆಹಲಿಯಲ್ಲಿ ಕಾಂಗ್ರೆಸ್ ವರಿಷ್ಠರ ನಾಯಕರನ್ನು ಭೇಟಿ ಮಾಡಿರುವ ಅವರು ತಮ್ಮನ್ನ ಅಧ್ಯಕ್ಷ ಸ್ಥಾನಕ್ಕೆ ಪರಿಗಣಿಸುವಂತೆ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಶುಕ್ರವಾರ ದೆಹಲಿಗೆ ಆಗಮಿಸಿದ್ದ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ಮುಖಂಡರಾದ ಅಹ್ಮದ್ ಪಟೇಲ್, ಕೆ.ಸಿ ವೇಣುಗೋಪಾಲ್, ಎ.ಕೆ. ಆ್ಯಂಟನಿ ಸೇರಿ ಹಲವು ನಾಯಕರನ್ನು ಭೇಟಿ ಮಾಡಿ ಒತ್ತಡ ಹಾಕುವ ಪ್ರಯತ್ನ ಮಾಡಿದ್ದಾರೆ. ಹಿಂದೆ ಬೇರೆಲ್ಲ ಸಮುದಾಯಗಳಿಗೆ ಅವಕಾಶ ಮಾಡಿಕೊಡಲಾಗಿದೆ ಈ ಬಾರಿ ಎಸ್ ಟಿ ಸಮುದಾಯಕ್ಕೆ ಅವಕಾಶ ಕೊಡಿ, ಮಾಜಿ ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಬಿ.ಕೆ ಹರಿಪ್ರಸಾದ್ ಸೇರಿ ಹಲವು ನಾಯಕರ ಬೆಂಬಲವೂ ನನಗಿದ್ದು ಅಧ್ಯಕ್ಷ ಹುದ್ದೆಗೆ ಪರಿಗಣಿಸಬೇಕು ಎಂದು ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮುಂದಿನ ವಾರದಲ್ಲಿ ಕೆಪಿಸಿಸಿಗೆ ನೂತನ ಅಧ್ಯಕ್ಷರ ನೇಮಕ ಹಾಗೂ ವಿಪಕ್ಷ ನಾಯಕನ ಸ್ಥಾನನ ಬಗ್ಗೆ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎನ್ನಲಾಗಿದೆ. ಈ ಬೆನ್ನೆಲ್ಲೇ ಸತೀಶ್ ಜಾರಕಿಹೊಳಿ ಭೇಟಿ ಮಹತ್ವ ಪಡೆದುಕೊಂಡಿದ್ದು, ಮಾಜಿ ಸಚಿವ ಡಿ.ಕೆ ಶಿವಕುಮಾರ್, ಮಾಜಿ ಸಂಸದ ಕೆ.ಹೆಚ್. ಮುನಿಯಪ್ಪ ಬಳಿಕ ಹೊಸ ಸ್ವರ್ಧಿ ಹುಟ್ಟಿಕೊಂಡಂತಾಗಿದೆ.