ಮಂಡ್ಯ: ಕಾವೇರಿ ಜಲಾನಯನ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್ಎಸ್ ಜಲಾಶಯದಲ್ಲಿ ನೀರಿನ ಮಟ್ಟ 100 ಅಡಿ ದಾಟಿದೆ. ಒಂದೂವರೆ ದಿನದಲ್ಲಿ 10 ಅಡಿ ಏರಿಕೆಯಾಗಿದೆ.
124.80 ಅಡಿ ಗರಿಷ್ಠ ಎತ್ತರದ ಡ್ಯಾಂನಲ್ಲಿ ಪ್ರಸ್ತುತ 100.30 ಅಡಿ ನೀರು ಸಂಗ್ರಹಗೊಂಡಿದೆ. ಗುರುವಾರ ಬೆಳಗ್ಗೆ ಜಲಾಶಯದಲ್ಲಿ 91 ಅಡಿ ನೀರು ಸಂಗ್ರಹಗೊಂಡಿತ್ತು. ಕೊಡಗಿನಲ್ಲಿ ನಿರಂತರ ಮಳೆ ಜೊತೆಗೆ ಹೇಮಾವತಿ ಜಲಾಶಯದಿಂದ ನೀರನ್ನು ಹೊರಬಿಟ್ಟ ಪರಿಣಾಮ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.
ಇಂದು ಮಧ್ಯಾಹ್ನ 12 ಗಂಟೆಯಲ್ಲಿ 60 ಸಾವಿರ ಕ್ಯೂಸೆಕ್ ಒಳ ಹರಿವು ಇದ್ದರೆ ಮಧ್ಯಾಹ್ನ 2 ಗಂಟೆ ವೇಳೆಗೆ 63,211 ಕ್ಯೂಸೆಕ್ಗೆ ಏರಿಕೆಯಾಗಿತ್ತು. ಸಂಜೆಯೊಳಗೆ 80 ಸಾವಿರ ಕ್ಯೂಸೆಕ್ ಏರಿಕೆಯಾಗುವ ಸಾಧ್ಯತೆಯಿದೆ. ಸದ್ಯ 443 ಕ್ಯೂಸೆಕ್ ನೀರನ್ನು ಹೊಡಬಿಡಲಾಗುತ್ತಿದೆ.
ಪಶ್ಚಿಮ ಘಟ್ಟ, ಮಲೆನಾಡು, ಕೊಡಗಿನಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾರಂಗಿ ಮತ್ತು ಹೇಮಾವತಿ ಜಲಾಶಯದಿಂದ ನೀರನ್ನು ನದಿಗೆ ಹರಿಸಲಾಗುತ್ತಿದೆ. ಹಾರಂಗಿಯಿಂದ 30 ಸಾವಿರಕ್ಕೂ ಹೆಚ್ಚು, ಹೇಮಾವತಿಯಿಂದ 5 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಪರಿಣಾಮ ಕೆಆರ್ಎಸ್ ನೀರಿನ ಮಟ್ಟ 100 ಅಡಿ ದಾಟಿದೆ.