ಮೈಸೂರು/ಮಂಡ್ಯ: ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಅಂತ್ಯಕ್ರಿಯೆ ಇಂದು ಹುಟ್ಟೂರು ಮಂಡ್ಯ ಜಿಲ್ಲೆಯ ಪಾಂಡವಪುರದ ಕ್ಯಾತನಹಳ್ಳಿಯಲ್ಲಿ ನಡೆಯಲಿದೆ.
ಈಗಾಗಲೇ ಮೈಸೂರಿನ ಜೆಎಸ್ಎಸ್ ಆಸ್ಪತ್ರೆಯಿಂದ ಮೃತದೇಹದ ಮೆರವಣಿಗೆ ಸ್ವಗ್ರಾಮ ಕ್ಯಾತನಹಳ್ಳಿಯತ್ತ ಹೊರಟಿದೆ. ನಂತರ ಕ್ಯಾತನಹಳ್ಳಿಯ ಸರ್ಕಾರಿ ಶಾಲಾ ಮೈದಾನದಲ್ಲಿ ಬೆಳಗ್ಗೆ 10 ಗಂಟೆಯವರೆಗೂ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗುತ್ತೆ.
ಪುಟ್ಟಣ್ಣಯ್ಯ ಮೌಢ್ಯ ವಿರೋಧಿಯಾದ ಕಾರಣ ಯಾವುದೇ ವಿಧಿವಿಧಾನಗಳಿಲ್ಲದ ಅಂತ್ಯಕ್ರಿಯೆಗೆ ಕುಟುಂಬಸ್ಥರು ನಿರ್ಧರಿಸಿದ್ದಾರೆ. ನಂತರ ತೆಂಗಿನ ತೋಟದಲ್ಲಿ ಅವರ ತಂದೆ ಮತ್ತು ತಾಯಿಯ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆ ನಡೆಸಲಾಗುತ್ತದೆ.
ಪುಟ್ಟಣ್ಣಯ್ಯ ಎಲ್ಲರನ್ನೂ ಸಮನವಾಗಿ ಕಾಣುತ್ತಿದ್ದರು. ಹೀಗಾಗಿ ಅವರ ಪಾರ್ಥಿವ ಶರೀರಕ್ಕೆ ದಲಿತ ಮಹಿಳೆಯಿಂದ ಮೊದಲಿಗೆ ಪೂಜೆ ನಡೆಯಲಿದೆ ಎಂದು ಪಬ್ಲಿಕ್ ಟಿವಿಗೆ ಪುಟ್ಟಣ್ಣಯ್ಯ ಪುತ್ರ ದರ್ಶನ್ ಹೇಳಿದ್ದಾರೆ.
ಗಣ್ಯ ವ್ಯಕ್ತಿಗಳ ನಿಧನಕ್ಕೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ವಿಚಾರವಾಗಿ ಶಾಸಕ ಪುಟ್ಟಣ್ಣಯ್ಯ ರಜೆ ಘೋಷಣೆಯನ್ನು ವಿರೋಧಿಸುತ್ತಿದ್ದರು. ಈ ಹಿನ್ನಲೆಯಲ್ಲಿ ಇಂದು ಮಂಡ್ಯ ಜಿಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ ಎಂದು ಮಂಡ್ಯ ಜಿಲ್ಲಾಧಿಕಾರಿ ಮಂಜುಶ್ರೀ ಸ್ಪಷ್ಟನೆ ನೀಡಿದ್ದಾರೆ.