ಬೆಂಗಳೂರು: ಕೆಎಸ್ಆರ್ಟಿಸಿ (KSRTC) ಎಂಬ ಹೆಸರು ಕರ್ನಾಟಕದಿಂದ ಕೈತಪ್ಪಿದೆ ಎಂಬ ಆತಂಕ ಪಡಬೇಕಾಗಿಲ್ಲ. ಕೇರಳ ಸರ್ಕಾರವು ಈ ಬಗ್ಗೆ ಏನೇ ಹೇಳಿಕೆ ನೀಡಿದರೂ ನಮ್ಮ ಕರ್ನಾಟಕ ಸರ್ಕಾರವು ಈ ಬಗ್ಗೆ ಸೂಕ್ತ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳುವ ಮೂಲಕ ರಾಜ್ಯದ ಹಿತಾಸಕ್ತಿಯನ್ನು ಕಾಪಾಡಿಕೊಳ್ಳುತ್ತದೆ ಎಂದು ಉಪ ಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಹೇಳಿದ್ದಾರೆ.
ಕೆಎಸ್ಆರ್ಟಿಸಿ ಎಂಬ ಹೆಸರನ್ನು ಮುಂದೆಯೂ ಕರ್ನಾಟಕವು ಬಳಸಲು ಸ್ವತಂತ್ರವಾಗಿದೆ. ಈ ಬಗ್ಗೆ ಕೇರಳ ಸರ್ಕಾರದ ಅನುಮತಿ ನಮಗೆ ಬೇಕಾಗಿಲ್ಲ. ಅಗತ್ಯವಿದ್ದರೆ ನ್ಯಾಯಾಲಯಲ್ಲಿ ಕಾನೂನಾತ್ಮಕ ಹೋರಾಟಗಳನ್ನು ನಡೆಸಲು ನಾವು ಹಿಂದೆ ಬೀಳುವುದಿಲ್ಲ ಎಂದು ಸವದಿ ಅವರು ಕಟುವಾಗಿ ಪ್ರತ್ಯುತ್ತರ ನೀಡಿದ್ದಾರೆ.
ರಾಜ್ಯ ರಸ್ತೆ ಸಾರಿಗೆ ನಿಗಮವು ಇನ್ನು ಮುಂದೆ ಕೆಎಸ್ಆರ್ಟಿಸಿ ಎಂದು ಬಳಸುವಂತಿಲ್ಲವೆಂದು, ಕೇಂದ್ರದ ಟ್ರೇಡ್ ಮಾರ್ಕ್ ರಿಜಿಸ್ಟರಿ ಬುಧವಾರ ತನ್ನ ಅಂತಿಮ ತೀರ್ಪನ್ನು ಪ್ರಕಟಿಸಿದ್ದು, ಎರಡು ರಾಜ್ಯಗಳ ನಡುವಿನ ಒಂದು ದಶಕದ ಕಾನೂನಾತ್ಮಕ ಹೋರಾಟವು ಅಂತ್ಯಗೊಂಡಂತಿದೆ ಎಂಬ ಮಾಧ್ಯಮಗಳ ವರದಿಗಳ ಹಿನ್ನೆಲೆಯಲ್ಲಿ ಇಂದು ಕೂಲಂಕುಶವಾಗಿ ಪರಿಶೀಲಿಸಲಾಗಿದ್ದು, ಇದು ವಾಸ್ತವಕ್ಕೆ ದೂರವಾದ ಸಂಗತಿಯಾಗಿದೆ ಎಂಬುದು ದೃಢಪಟ್ಟಿದೆ. ಆದ್ದರಿಂದ ಅನವಶ್ಯಕ ಅಪಪ್ರಚಾರಕ್ಕೆ ಯಾರೂ ಕಿವಿಕೊಡಬಾರದು ಎಂದು ಸವದಿ ಅವರು ಸ್ಪಷ್ಟಪಡಿಸಿದ್ದಾರೆ. ಯಾಕೆಂದರೆ ನಮ್ಮ ಸಾರಿಗೆ ಸಂಸ್ಥೆಗೆ ಕೇಂದ್ರ ಟ್ರೇಡ್ ಮಾರ್ಕ್ ರಿಜಿಸ್ಟರಿ ಅವರಿಂದ ಇಂತಹ ಯಾವುದೇ ಸೂಚನೆ ಅಥವಾ ಆದೇಶ ಇಂದಿನವರೆಗೂ ಬಂದಿಲ್ಲ. ಇದನ್ನೂ ಓದಿ: KSRTC ಟ್ರೇಡ್ ಮಾರ್ಕ್ ಕೇರಳಕ್ಕೆ ಸೇರಿದ್ದು – ಟ್ರೇಡ್ ಮಾರ್ಕ್ ಅಥಾರಿಟಿ ಆಫ್ ಇಂಡಿಯಾದಿಂದ ಆದೇಶ
ಕೆ. ಎಸ್. ಆರ್. ಟಿ. ಸಿ. ಹೆಸರು ಕೈ ತಪ್ಪುವ ಆತಂಕ ಬೇಡ:
ಕೆ.ಎಸ್.ಆರ್.ಟಿ.ಸಿ. ಎಂಬ ಹೆಸರು ಕರ್ನಾಟಕದಿಂದ ಕೈತಪ್ಪಿದೆ ಎಂಬ ಆತಂಕ ಪಡಬೇಕಾಗಿಲ್ಲ. ಕೇರಳ ಸರ್ಕಾರವು ಈ ಬಗ್ಗೆ ಏನೇ ಹೇಳಿಕೆ ನೀಡಿದರೂ ನಮ್ಮ ಕರ್ನಾಟಕ ಸರ್ಕಾರವು ಈ ಬಗ್ಗೆ ಸೂಕ್ತ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳುವ ಮೂಲಕ ರಾಜ್ಯದ ಹಿತಾಸಕ್ತಿಯನ್ನು ಕಾಪಾಡಿಕೊಳ್ಳುತ್ತದೆ.
1/n pic.twitter.com/lRpfEkQrGm
— Laxman Sangappa Savadi | ಲಕ್ಷ್ಮಣ್ ಸಂಗಪ್ಪ ಸವದಿ (@LaxmanSavadi) June 4, 2021
ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಕೆಎಸ್ಆರ್ಟಿಸಿಗೆ ನೀಡಲಾದ ಟ್ರೇಡ್ ಮಾರ್ಕ್ ಪ್ರಮಾಣಪತ್ರದ ವಿರುದ್ಧ ಬೌದ್ಧಿಕ ಆಸ್ತಿ ಮೇಲ್ಮನವಿ ಮಂಡಳಿ (ಐಪಿಎಬಿ)ಯ ಮುಂದೆ ಸಲ್ಲಿಸಿದ ಮೇಲ್ಮನವಿಗಳಲ್ಲಿ ಯಾವುದೇ ಅಂತಿಮ ಆದೇಶಗಳನ್ನು ಸಹ ಹೊರಡಿಸಲಾಗಿಲ್ಲ ಎಂಬುದು ತಿಳಿದುಬಂದಿದೆ. ಏತನ್ಮಧ್ಯೆ, ಸದರಿ ಮಂಡಳಿಯನ್ನು ದಿನಾಂಕ 4.04.2021 ರ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯ ಮೂಲಕ ರದ್ದುಪಡಿಸಲಾಗಿದೆ ಮತ್ತು ಇಲ್ಲಿ ಬಾಕಿ ಇರುವ ಅರ್ಜಿಗಳನ್ನು ಹೈಕೋರ್ಟ್ಗೆ ವರ್ಗಾಯಿಸಲಾಗುತ್ತದೆ. ಆದ್ದರಿಂದ, ಕರ್ನಾಟಕದಲ್ಲಿ ಕೆಎಸ್ಆರ್ಟಿಸಿಯ ಟ್ರೇಡ್ ಮಾರ್ಕ್ ನೋಂದಣಿಯು ಪ್ರಸ್ತುತ ಜಾರಿಯಲ್ಲಿದೆ ಮತ್ತು ಕೆಎಸ್ಆರ್ಟಿಸಿಯು ತನಗೆ ನೀಡಲಾಗಿರುವ ಟ್ರೇಡ್ಮಾರ್ಕ್ಗಳನ್ನು ಬಳಸಲಾಗುವುದಿಲ್ಲ ಎಂಬ ಸುದ್ದಿ-ವರದಿಗಳು ಸತ್ಯಕ್ಕೆ ದೂರವಾಗಿದೆ ಮತ್ತು ಇದನ್ನು ಕಾನೂನಾತ್ಮಕವಾಗಿ ಒಪ್ಪಲಾಗದು. ಆದ್ದರಿಂದ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ‘ಕೆಎಸ್ಆರ್ಟಿಸಿ’ ಟ್ರೇಡ್ಮಾರ್ಕ್ ಬಳಕೆ ಮಾಡುವ ವಿರುದ್ಧವಾಗಿ ಯಾವುದೇ ಕಾನೂನಾತ್ಮಕ ಅಡೆತಡೆಯಾಗಲಿ ಅಥವಾ ನಿಷೇಧವಾಗಲಿ ಇಲ್ಲ ಎಂಬುದನ್ನು ಗಮನಿಸಬೇಕು ಎಂದು ಸವದಿಯವರು ಸಮಜಾಯಿಷಿ ನೀಡಿದ್ದಾರೆ.
ಕೇರಳ ಎಸ್ಆರ್ಟಿಸಿಯು, ಕೆಎಸ್ಆರ್ಟಿಸಿ/ ಕರ್ನಾಟಕ ಸರ್ಕಾರಕ್ಕೆ ನೋಟಿಸ್ ನೀಡಲು ಉದ್ದೇಶಿಸಿದೆ ಎಂದು ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾಗಿದೆ. ಒಂದು ವೇಳೆ ಅಂತಹ ನೋಟಿಸ್ ನೀಡಿದರೆ, ಸಂಸ್ಥೆಯಿಂದ ಸೂಕ್ತವಾದ ಉತ್ತರವನ್ನು ನೀಡಲಾಗುತ್ತದೆ. ನಮ್ಮ ಹಕ್ಕುಗಳನ್ನು ರಕ್ಷಿಸಲು ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲು ನಾವು ಪ್ರಸ್ತುತ ನಮ್ಮ ಕಾನೂನು ತಜ್ಞರ ಸಲಹೆ ಪಡೆಯುತ್ತಿದ್ದೇವೆ. ಆದ್ದರಿಂದ ಊಹಾಪೋಹದ ಯಾವುದೇ ವದಂತಿಯನ್ನು ನಂಬಿ ಆತಂಕಪಡಬೇಕಾಗಿಲ್ಲ ಎಂದು ಸವದಿ ಅವರು ತಿಳಿಸಿದ್ದಾರೆ.