– ಇತ್ತ ಕ್ಯಾಂಟರ್ ಪಲ್ಟಿಯಾಗಿ 2,000ಕ್ಕೂ ಹೆಚ್ಚು ಕೋಳಿಗಳ ಸಾವು
ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಆರ್ಟಿಸಿ ಬಸ್ ಸುಮಾರು 15 ಅಡಿಯ ಆಳಕ್ಕೆ ಉರುಳಿಬಿದ್ದಿದ್ದು, ಅದೃಷ್ಟವಶಾತ್ ಬಸ್ಸಿನಲ್ಲಿದ್ದ 30 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನೆಲಮಂಗಲದ ಲಕ್ಕೇನಹಳ್ಳಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಮಂಗಳೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಬಸ್ ಸುಮಾರು 15 ಅಡಿ ಆಳಕ್ಕೆ ಬಿದ್ದಿದ್ದಲ್ಲದೇ 4 ಕೆ.ವಿ. ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಸುಮಾರು 30 ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ಉರುಳಿಬಿದ್ದ ಪರಿಣಾಮ ಗಾಯಗೊಂಡಿದ್ದ ಪ್ರಯಾಣಿಕರನ್ನು ನೆಲಮಂಗಲದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆನೇಕಲ್ ಬಳಿ ಕ್ಯಾಂಟರ್ ಪಲ್ಟಿ:
ಹೊಸೂರು ಮಾರ್ಗವಾಗಿ ಆನೇಕಲ್ ಗೆ ಬರುತ್ತಿದ್ದ ಕ್ಯಾಂಟರ್ ವಾಹನವೊಂದು ಗುಡ್ನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ. ಕ್ಯಾಂಟರ್ ಬಿದ್ದ ರಭಸಕ್ಕೆ ಚಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಆದರೆ ಕ್ಯಾಂಟರಿನಲ್ಲಿ ಸಾಗಿಸುತ್ತಿದ್ದ ಸುಮಾರು 2,000 ಕ್ಕೂ ಅಧಿಕ ಕೋಳಿಗಳು ಸ್ಥಳದಲ್ಲೇ ಸಾವನ್ನಪ್ಪಿವೆ. ಕ್ಯಾಂಟರ್ ವಾಹನವು ನಗರದ ಸುಗುಣ ಚಿಕನ್ ಕಂಪೆನಿಗೆ ಸೇರಿದ್ದಾಗಿದ್ದು, ಆನೇಕಲ್ ಚಿಕನ್ ಅಂಗಡಿಗಳಿಗೆ ಕೋಳಿಗಳನ್ನು ಸಾಗಾಟ ಮಾಡಲಾಗುತ್ತಿತ್ತು. ಘಟನೆ ಸಂಬಂಧ ಆನೇಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv