ಬೆಂಗಳೂರು: ಇಂದಿನಿಂದ ಶನಿವಾರದವರೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಧಾರಾಕಾರ ಮಳೆಯಾಗಲಿದೆ.
ಉತ್ತರ ಮತ್ತು ದಕ್ಷಿಣ ಒಳನಾಡು ಭಾಗದಲ್ಲಿ ಇವತ್ತು ಮತ್ತು ನಾಳೆ ಸಾಧಾರಣ ಮಳೆಯಾಗಲಿದ್ದು, ಶುಕ್ರವಾರ ಮತ್ತು ಶನಿವಾರ ಭರ್ಜರಿ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇವತ್ತು ಜಮ್ಮು-ಕಾಶ್ಮೀರ ಸೇರಿದಂತೆ ಬಹುತೇಕ ಉತ್ತರ ಭಾರತ, ಈಶಾನ್ಯ ರಾಜ್ಯಗಳು, ಗೋವಾ, ರಾಯಲಸೀಮೆ, ತಮಿಳುನಾಡಲ್ಲಿ ಧಾರಾಕಾರ ಮಳೆ ಆಗಲಿದೆ.
ಸೋಮವಾರ ರೇಷ್ಮೆನಗರಿ ರಾಮನಗರ ಜಿಲ್ಲೆಯ ಹಲವೆಡೆ ವರುಣ ಅರ್ಭಟಿಸಿದ್ದು, ಹಲವೆಡೆ ಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ರಾಮನಗರದಲ್ಲಿ ಸುಮಾರು 15 ನಿಮಿಷಕ್ಕೂ ಹೆಚ್ಚು ಕಾಲ ಮಳೆಯಾಗಿದ್ದು, ಚನ್ನಪಟ್ಟಣ, ಕನಕಪುರದಲ್ಲಿ ಸಾಧಾರಣ ಮಳೆಯಾಗಿದೆ.
ಇನ್ನೂ ಮಳೆಯಿಂದಾಗಿ ರಸ್ತೆಯ ಮೇಲೆ ಮಳೆಯ ನೀರು ನಿಂತು ವಾಹನ ಸವಾರರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿತ್ತು. ಅಲ್ಲದೇ ಮಳೆಯಿಂದ ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ಕೆಲ ಕಾಲ ಸಂಚಾರ ಅಸ್ತವ್ಯಸ್ತವಾಗಿ ದ್ವಿಚಕ್ರ ವಾಹನ ಸವಾರರು ಸಮಸ್ಯೆ ಅನುಭವಿಸಿದರು.