ಕಾರವಾರ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಕುಮಟಾದ ಹೊಸಕಟ್ಟಾ ಗ್ರಾಮದ ತೊರೆಗಜನಿ ವಾಸಿ ಆಪಾದಿತನಾದ ಗೋವಿಂದ ಚೌಡು ಹರಿಕಂತ್ರ (48) ಶಿಕ್ಷೆಗೆ ಗುರಿಯಾದವ. ಉತ್ತರ ಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ತ್ವರಿತಗತಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಪ್ರತಿಭಾ ಬಂಡೂರಾವ್ ಕುಲಕರ್ಣಿ ಅವರು 20 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಘಟನೆ ಏನು?
2022 ರಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಕುರಿತು ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ಬಂಧಿಸಿದ ಅಂದಿನ ತನಿಖಾಧಿಕಾರಿ ಪಿ.ಐ ವಸಂತ ಆಚಾರ್ ಅವರು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಸಾಕ್ಷಿ ಪುರಾವೆಯಿಂದ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿ ನ್ಯಾಯಾಲಯ ಆದೇಶಿಸಿದೆ.
ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸಾರ್ವಜನಿಕ ಅಭಿಯೋಜಕರಾದ ಗುರುಶಾಂತಯ್ಯ ಕುರ್ಡಿಕೇರಿ ರವರು ಸಮರ್ಥವಾಗಿ ವಾದ ಮಂಡಿಸಿದ್ದರು. ಈ ಮೂಲಕ ನೊಂದ ಬಾಲಕಿಗೆ ಪೊಲೀಸ್ ಇಲಾಖೆ ಹಾಗೂ ನ್ಯಾಯಾಲಯ ನ್ಯಾಯ ಒದಗಿಸಿದೆ.
