ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ ‘ಕುರುಕ್ಷೇತ್ರ’ ಬಿಡುಗಡೆಯ ದಿನಾಂಕ ಫಿಕ್ಸ್ ಆಗಿದ್ದು, ಆಗಸ್ಟ್ 9ರ ವರಮಹಾಲಕ್ಷ್ಮಿ ಹಬ್ಬದ ದಿನದಂದು ತೆರೆಗೆ ಅಪ್ಪಳಿಸಲಿದೆ.
ಸಿನಿಮಾ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಿರ್ಮಾಪಕ ಮುನಿರತ್ನ ಅವರು ಚಿತ್ರದ ಬಿಡುಗಡೆ ಬಗ್ಗೆ ಮಾಹಿತಿ ನೀಡಿದರು. ಆಗಸ್ಟ್ 9ಕ್ಕೆ ಕುರುಕ್ಷೇತ್ರ ಸಿನಿಮಾ ಬಿಡುಗಡೆ ಆಗಲಿದ್ದು, ಜುಲೈ ಮೊದಲ ವಾರ ಆಡಿಯೋ ರಿಲೀಸ್ ಮಾಡಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.
ಚಿತ್ರದ ಟೈಟಲ್ ಲಾಂಚ್ ವೇಳೆ ಸುದ್ದಿಗೋಷ್ಠಿ ನಡೆಸಿದ್ದ ಚಿತ್ರತಂಡ ಬರೋಬ್ಬರಿ ಒಂದೂವರೆ ವರ್ಷಗಳ ಮತ್ತೆ ಮಾಧ್ಯಮಗಳ ಮುಂದೇ ಆಗಮಿಸಿತ್ತು. ಆದರೆ ಈ ಸಂದರ್ಭದಲ್ಲಿ ನಟ ದರ್ಶನ್ ಹಾಗೂ ನಟ ನಿಖಿಲ್ ಗೈರಾಗಿದ್ದರು. ಸುದ್ದಿಗೋಷ್ಠಿಯಲ್ಲಿ ಚಿತ್ರದ ನಿರ್ಮಾಪಕ ಮುನಿರತ್ನ, ನಿರ್ದೇಶಕ ನಾಗಣ್ಣ, ಸಂಕಲನಕಾರ ಜೋನಿಹರ್ಷ ಅವರು ಹಾಜರಿದ್ದರು. ಇದೇ ಸಂದರ್ಭದಲ್ಲಿ ಇಬ್ಬರು ನಟರ ಗೈರ ಹಾಜರಿಗೆ ಸ್ಪಷ್ಟನೆ ನೀಡಿದ ನಿರ್ಮಾಪಕರು ಚಿತ್ರ ಬಿಡುಗಡೆ ದಿನಾಂಕ ಮಾತ್ರ ಇಂದು ಘೋಷಣೆ ಮಾಡಲಾಗುತ್ತದೆ. ಪ್ರಚಾರದ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾರೆ ಎಂದರು.
ನಟ ಅಂಬರೀಶ್ ಅವರು ಅನಾರೋಗ್ಯದ ನಡುವೆಯೂ ಸುಮಾರು 20 ದಿನಗಳ ಕಾಲ ಶೂಟಿಂಗ್ ನಲ್ಲಿ ಭಾಗವಹಿಸಿ ಭೀಷ್ಮನ ಪಾತ್ರ ಮಾಡಿದ್ದಾರೆ. ಅಂಬರೀಶ್ ಪಾತ್ರಕ್ಕೆ ಅವರೇ ಡಬ್ ಮಾಡಿದ್ದಾರೆ. ಆದರೆ ಅವರಗೆ ಯಾವುದೇ ಸಂಭಾವನೆ ಕೊಟ್ಟಿಲ್ಲ ಎಂದು ತಿಳಿಸಿದರು.
ಟೀಸರ್ ನಿಂದಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದ ಕುರುಕ್ಷೇತ್ರ ಸಿನಿಮಾ ಬಗ್ಗೆ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಇದ್ದು, ಚಿತ್ರಕ್ಕೆ ಹರಿಕೃಷ್ಣ ಸಂಗೀತ ನೀಡಿದ್ದಾರೆ. ಬಹು ತಾರಾಗಣದ ಕುರುಕ್ಷೇತ್ರ ಸಿನಿಮಾ ನಾಲ್ಕು ಭಾಷೆಗಳಲ್ಲಿ ಬಿಡುಗಡೆ ಆಗಲಿದೆ.