ಪಾಟ್ನಾ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಹೇಳಿಕೆ ನೀಡಿದ್ದಕ್ಕೆ ಉಪಾಧ್ಯಕ್ಷರನ್ನೇ ಬಿಎಸ್ಪಿ ನಾಯಕಿ ಮಾಯಾವತಿ ವಜಾ ಮಾಡಿದ್ದರು. ಇದರ ಬೆನ್ನಲ್ಲೇ ಈಗ ಬಿಹಾರದ ರಾಷ್ಟ್ರೀಯ ಜನತಾದಳ (ಆರ್ಜೆಡಿ) ವಕ್ತಾರರೊಬ್ಬರು ಪಕ್ಷದಿಂದ ವಜಾಗೊಂಡಿದ್ದಾರೆ.
ಆರ್ಜೆಡಿ ಪಕ್ಷದ ರಾಷ್ಟ್ರೀಯ ವಕ್ತಾರ ಶಂಕರ್ ಚರಣ್ ತ್ರಿಪಾಠಿ ಪಕ್ಷ ವಿರೋಧಿ ಹೇಳಿಕೆ ನೀಡಿದ್ದಾರೆ. ಹೀಗಾಗಿ ಅವರನ್ನು ಪಕ್ಷದಿಂದ ವಜಾ ಮಾಡಲಾಗಿದೆ ಎಂದು ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಎಸ್.ಎಂ.ಖಮರ್ ಆಲಂ ದಿಢೀರ್ ನಿರ್ಧಾರ ಕೈಗೊಂಡಿದ್ದಾರೆ.
ಸೋಮವಾರ ನಡೆದ ಕಾರ್ಯಕ್ರಮವೊಂದರಲ್ಲಿ ಶಂಕರ್ ಚರಣ್ ತ್ರಿಪಾಠಿ ಅವರು, ಲೋಕಸಭೆ ಅವಿಶ್ವಾಸ ಗೊತ್ತುವಳಿ ವೇಳೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯನ್ನು ತಬ್ಬಿಕೊಂಡಿದ್ದು ಹಾಗೂ ಕಣ್ಣು ಸನ್ನೆ ಮಾಡಿರುವ ಕುರಿತು ವ್ಯಂಗ್ಯವಾಡಿದ್ದರು. ರಾಹುಲ್ ಗಾಂಧಿ ಮಗುವಿನಂತೆ ವರ್ತಿಸಿದ್ದಾರೆ ಹಾಗೂ ಲೋಕಸಭೆ ಚುನಾವಣೆಗೆ ತಮ್ಮನ್ನು ತಾವೇ ಪ್ರಧಾನಿ ಅಭ್ಯರ್ಥಿ ಅಂತಾ ಗುರುತಿಸಿಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದರು.
ಕೆಲದಿನಗಳ ಹಿಂದಷ್ಟೇ ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಅವರು ರಾಹುಲ್ ಗಾಂಧಿ ಭಾಷಣಕ್ಕೆ ಪ್ರಶಂಸೆ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಪರೋಕ್ಷವಾಗಿ ಆರ್ಜೆಡಿ ಬೆಂಬಲ ಸೂಚಿಸಿತ್ತು. ಆದರೆ ಶಂಕರ್ ಚರಣ್ ತ್ರಿಪಾಠಿ ಹೇಳಿಕೆಯಿಂದ ಮೈತ್ರಿಗೆ ಹೊಡೆತ ಬೀಳಬಹುದು ಎನ್ನುವ ಕಾರಣಕ್ಕೆ ಪಕ್ಷ ಈ ನಿರ್ಧಾರ ಕೈಗೊಂಡಿದೆ ಎಂದು ವರದಿಯಾಗಿದೆ.
2017ರ ನವೆಂಬರ್ 4ರಂದು ಲಾಲು ಪ್ರಸಾದ್ ಯಾದವ್ ಶಂಕರ್ ತ್ರಿಪಾಠಿ ಅವರನ್ನು ರಾಷ್ಟ್ರೀಯ ವಕ್ತಾರರನ್ನಾಗಿ ನೇಮಕ ಮಾಡಿದ್ದರು.