-ಅಧಿಕಾರಿಗಳನ್ನು ತರಾಟೆಗೆ ತೆಗೆದಕೊಂಡ ಸಂಸದ ಸಂಗಣ್ಣ ಕರಡಿ
ಕೊಪ್ಪಳ: ವಿಶ್ವ ಯೋಗ ದಿನಾಚರಣೆಗೆ ಜಿಲ್ಲಾಡಳಿತವು ನಿರ್ಲಕ್ಷ್ಯ ತೋರಿದ್ದಕ್ಕೆ ಅಧಿಕಾರಿಗಳನ್ನು ಸಂಸದ ಸಂಗಣ್ಣ ಕರಡಿಯವರು ತರಾಟೆ ತೆಗೆದುಕೊಂಡಿದ್ದಾರೆ.
ಜೂನ್ 21ರಂದು ವಿಶ್ವ ಯೋಗದಿನವನ್ನು ವಿಶ್ವದಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ. 4ನೇ ವರ್ಷದ ವಿಶ್ವ ಯೋಗ ದಿನಾಚರಣೆಯನ್ನು ಖುದ್ದು ಪಾಲ್ಗೊಳ್ಳುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಆಚರಿಸಿದ್ದಾರೆ.
ಇಂದು ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತವು ಆಯೋಜಿಸಿದ್ದ ಯೋಗ ದಿನಾಚರಣೆಗೆ ನಿರ್ಲಕ್ಷ್ಯ ತೋರಿದ ಘಟನೆ ಕಂಡುಬಂದಿದೆ. ಬೆಳಗ್ಗೆ 6 ಗಂಟೆಗೆ ನಿಗದಿಯಾಗಿದ್ದ ಕಾರ್ಯಕ್ರಮ, 6.30 ಆದರೂ ಸಿದ್ಧಗೊಂಡಿರಲಿಲ್ಲ. ಸ್ಥಳಕ್ಕೆ ಆಗಮಿಸಿದ ಸಂಸದರು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕೋಪಗೊಂಡು, ಸ್ಥಳದಲ್ಲಿದ್ದ ಕೆಲವು ಅಧಿಕಾರಿಗಳನ್ನು ತರಾಟೆಗೆ ತೆಗದುಕೊಂಡಿದ್ದಾರೆ. ನಂತರ ಕಾರ್ಯಕ್ರಮ ಮೊಟಕುಗೊಳಿಸಿ ಹೊರಟು ಹೋಗಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಸಂಸದರು, ಜಿಲ್ಲಾಡಳಿತ ಸಂಪೂರ್ಣವಾಗಿ ನಿಷ್ಕ್ರೀಯವಾಗಿದೆ. ಇಂದು ಯೋಗವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ. ಆದರೆ ಕೊಪ್ಪಳದಲ್ಲಿ ಮಾತ್ರ ಯೋಗ ದಿನಾಚರಣೆಗೆ ಅವಮಾನ ಮಾಡಿರುವುದು ದುರಂತದ ಸಂಗತಿಯಾಗಿದೆ. ಇದರಲ್ಲಿ ಜಿಲ್ಲಾಡಳಿತದ ಬೇಜವಬ್ದಾರಿ ಎದ್ದು ಕಾಣುತ್ತಿದ್ದು, ಈ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ದೂರು ನೀಡುವುದಾಗಿ ತಿಳಿಸಿದ್ದಾರೆ.