ಶಿವಮೊಗ್ಗ: ಅನರ್ಹರ ಗೆಲುವಿಗೆ ಎಲ್ಲರೂ ಶ್ರಮಿಸಬೇಕು ಎಂದು ಪಕ್ಷದ ಕಾರ್ಯಕರ್ತರಿಗೆ ಯಡಿಯೂರಪ್ಪ ಕರೆಕೊಟ್ಟಿದ್ದಾರೆ.
ರಾಜ್ಯದಲ್ಲಿ ಉಪ ಚುನಾವಣೆ ದಿನಾಂಕ ಈಗಾಗಲೇ ನಿಗದಿಯಾಗಿದ್ದು, ಅನರ್ಹ ಶಾಸಕರಿಗೆ ಬಿಜೆಪಿ ಟಿಕೆಟ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಜಿಲ್ಲೆಯ ಶಿಕಾರಿಪುರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಈ ಹಿಂದೆ ಕಾಂಗ್ರೆಸ್ ಹಾಗೂ ಜೆಡಿಎಸ್ನ 15 ಶಾಸಕರು ರಾಜೀನಾಮೆ ನೀಡಿ ಹೊರ ಬಂದಿದ್ದಾರೆ. ಈ ಸರ್ಕಾರ ಬರಲು ಕಾರಣರಾಗಿದ್ದಾರೆ. ಆದ್ದರಿಂದ ಉಪ ಚುನಾವಣೆಯಲ್ಲಿ ಅನರ್ಹ ಶಾಸಕರೆಲ್ಲರಿಗೂ ಟಿಕೆಟ್ ನೀಡಲು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಸಹ ನಿರ್ಧಾರ ಮಾಡಿದ್ದಾರೆ. ಈ ಬಗ್ಗೆ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ ಎಂದರು. ಚುನಾವಣೆಯಲ್ಲಿ ಅನರ್ಹ ಶಾಸಕರ ಪರ ಕೆಲಸ ಮಾಡಿ ಗೆಲ್ಲಿಸುವ ಜವಾಬ್ದಾರಿ ಸಹ ನಮ್ಮ ಮೇಲಿದೆ ಎಂದು ತಿಳಿಸಿದರು. ಇದನ್ನೂ ಓದಿ:ಅವರ ದಾರಿ ಅವರಿಗೆ, ನಮ್ಮ ದಾರಿ ನಮಗೆ – ಅನರ್ಹರಿಗೆ ತಿವಿದ ಕತ್ತಿ
ಇದೇ ವೇಳೆ ಚುನಾವಣೆ ನಡೆಯುವ ಪ್ರತಿ ಕ್ಷೇತ್ರಕ್ಕೂ ಇಬ್ಬರು ಸಚಿವರನ್ನು ಉಸ್ತುವಾರಿಯಾಗಿ ನೇಮಕ ಮಾಡಿ ಜವಾಬ್ದಾರಿ ನೀಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ. ಅಲ್ಲದೇ ಕಳೆದ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಸೋಲು ಅನುಭವಿಸಿದವರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ ನೀಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು. ಜೊತೆಗೆ ಬಿಬಿಎಂಪಿ ಮೇಯರ್ ಚುನಾವಣೆ ನ್ಯಾಯಾಲಯದಲ್ಲಿದ್ದು, ಚುನಾವಣೆ ಒಂದೂವರೆ ತಿಂಗಳುಗಳ ಕಾಲ ವಿಳಂಬವಾಗಲಿದೆ ಎಂದರು. ಇದನ್ನೂ ಓದಿ:ತಂತಿ ಮೇಲೆ ನಡೆದು ಯಡಿಯೂರಪ್ಪ ಬಿದ್ದುಬಿಟ್ಟಾರು: ಸಿದ್ದರಾಮಯ್ಯ ಟಾಂಗ್
ಉಪ ಚುನಾವಣೆಗೆ ಇವಿಎಂ ಬೇಡ, ಬ್ಯಾಲೆಟ್ ಪೇಪರ್ ಉಪಯೋಗಿಸಬೇಕು ಎನ್ನು ಕೂಗು ಕೇಳಿಬರುತ್ತಿದೆ. ಜೊತೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೂಡ ಇವಿಎಂ ಬಗ್ಗೆ ಅನುಮಾನವಿದೆ ಎಂದಿದ್ದರು. ಈ ಬಗ್ಗೆ ಯಡಿಯೂರಪ್ಪ ಅವರು ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಗೆದ್ದಾಗ ಇವಿಎಂ ಸರಿಯಿತ್ತು, ಈಗ ಸರಿಯಿಲ್ಲ ಎಂಬುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿ ಹರಿಹಾಯ್ದರು.
ತಂತಿ ಮೇಲಿನ ನಡಿಗೆ ಕುರಿತ ನನ್ನ ಹೇಳಿಕೆಗೆ ಅಪಾರ್ಥ ಕಲ್ಪಿಸುವ ಅಗತ್ಯವಿಲ್ಲ. ಸೀಮಿತ ಸಂಪನ್ಮೂಲವನ್ನೆಲ್ಲಾ ಸಮಾಜ ಮತ್ತು ರಾಜ್ಯದ ಅಭಿವೃದ್ಧಿಗೆ ಬಳಸಬೇಕಿದೆ. ಹೀಗಾಗಿ ಹೆಚ್ಚಿನ ಅನುದಾನವನ್ನು ನೀಡುವುದು ಕಷ್ಟಸಾಧ್ಯ. ಅದನ್ನೇ ಹೇಳಿದ್ದೇನೆ ಅಷ್ಟೇ ಎಂದು ಸ್ಪಷ್ಟಪಡಿಸಿದರು.
ಯಡಿಯೂರಪ್ಪ ಅವರಿಂದಾಗಿ ಲಿಂಗಾಯತ ವೀರಶೈವ ಧರ್ಮ ಉಳಿದಿದೆ ಶಾಸಕ ಎಂಬ ಶಾಮನೂರು ಅವರ ಹೇಳಿಕೆ ಬಗ್ಗೆ ಮಾತನಾಡಿ, ಅದು ಅವರ ವೈಯಕ್ತಿಕ ಅಭಿಪ್ರಾಯ. ಹಿಂದಿನ ಸರ್ಕಾರ ವೀರಶೈವ ಧರ್ಮವನ್ನು ಲಿಂಗಾಯತ ಧರ್ಮದಿಂದ ಪ್ರತ್ಯೇಕಿಸುವ ಸಂದರ್ಭದಲ್ಲಿ ನಾನು ಕಠಿಣ ನಿಲುವು ತೆಗೆದುಕೊಂಡಿದ್ದನ್ನು ಶಾಮನೂರು ಸ್ವಾಗತಿಸಿದ್ದರು. ಬಹುಶಃ ಆ ಕಾರಣಕ್ಕೆ ಅವರು ಹೀಗೆ ಹೇಳಿರಬಹುದು ಎಂದರು. ಇದೇ ವೇಳೆ ಶಿಕಾರಿಪುರ-ರಾಣೆಬೆನ್ನೂರು ರೈಲ್ವೆ ಮಾರ್ಗ ನಿರ್ಮಾಣಕ್ಕೆ ರಾಜ್ಯದ ಪಾಲು 750 ಕೋಟಿ ರೂ. ಬಿಡುಗಡೆಯಾಗಲಿದೆ ಎಂದು ತಿಳಿಸಿದರು.