ಮಡಿಕೇರಿ: ಮರಳು ಮೂಟೆ ಅಳವಡಿಸಿದ ನಂತರ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಲಘು ವಾಹನ ಸಂಚಾರಕ್ಕೆ ಅವಕಾಶ ನೀಡಲಾಗುವುದು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್ ತಿಳಿಸಿದರು.
ಜಿಲ್ಲಾಡಳಿತ ಭವನ ಬಳಿಯ ಮಂಗಳೂರು ರಸ್ತೆ ತಡೆಗೋಡೆ ವೀಕ್ಷಿಸಿದ ಬಳಿಕ, ಮದೆನಾಡು ಸಮೀಪದ ಸೀಮೆಹುಲ್ಲು ಕಜೆ ಗುಡ್ಡದ ಬದಿಯೊಂದು ಕುಸಿದಿರುವ ಪ್ರದೇಶಕ್ಕೆ ಭಾನುವಾರ ಭೇಟಿ ನೀಡಿ ಸ್ಥಳೀಯರಿಂದ ಮಾಹಿತಿ ಪಡೆದ ನಂತರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಇದನ್ನೂ ಓದಿ: ಬಿಗಿ ಭದ್ರತೆ ನಡೆದ ಮೊದಲ ಅಗ್ನಿಪಥ್ ಏರ್ಫೋರ್ಸ್ ನೇಮಕಾತಿ ಪರೀಕ್ಷೆ
ತಡೆಗೋಡೆಯನ್ನು ಅವೈಜ್ಞಾನಿಕವಾಗಿ ನಿರ್ಮಿಸಲಾಗಿದೆ. ಜೊತೆಗೆ ಜಿಲ್ಲಾಧಿಕಾರಿ ಅವರ ಕಚೇರಿಗೆ ತೆರಳಲು ರಸ್ತೆ ಮಾಡಿದ್ದರ ಪರಿಣಾಮವಾಗಿ ಇಂತಹ ದುಸ್ಥಿತಿ ಎದುರಿಸುವಂತಾಗಿದೆ ಎಂದು ಸ್ಥಳೀಯರೊಬ್ಬರು ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಸಾರ್ವಜನಿಕರಿಗೆ ತೊಂದರೆ ಆಗದಂತೆ ಗಮನಹರಿಸಲಾಗುವುದು. ಸದ್ಯ ಮರಳು ಮೂಟೆ ಅಳವಡಿಸುವ ಕಾರ್ಯ ನಡೆಯುತ್ತಿದ್ದು, ಈ ಬಗ್ಗೆ ಚರ್ಚಿಸಿ ಕ್ರಮವಹಿಸಲಾಗುವುದು ಎಂದರು.
ಮಡಿಕೇರಿ-ಮಂಗಳೂರು ರಸ್ತೆ ಜಿಲ್ಲಾಡಳಿತ ಭವನ ಬಳಿ ತಡೆಗೋಡೆಯ ಸ್ಲ್ಯಾಬ್ಗಳು ಹೊರಚಾಚಿದ ಹಿನ್ನೆಲೆ, ತಾತ್ಕಾಲಿಕವಾಗಿ ಸಾರಿಗೆ ಸಂಚಾರ ಬಂದ್ ಮಾಡಲಾಗಿದೆ. ಮರಳು ಮೂಟೆ ಅಳವಡಿಸಿದ ನಂತರ ಲಘು ವಾಹನ(ದ್ವಿಚಕ್ರ, ಆಟೋ) ಸಂಚಾರಕ್ಕೆ ಅವಕಾಶ ಮಾಡಲಾಗುವುದು. ಆ ನಿಟ್ಟಿನಲ್ಲಿ ಶಾಸಕರು ಮತ್ತು ಜಿಲ್ಲಾಧಿಕಾರಿ ಜೊತೆ ಚರ್ಚಿಸಿ ಮುಂದಿನ ಕ್ರಮ ವಹಿಸಲಾಗುವುದು ಎಂದು ಭರವಸೆ ಕೊಟ್ಟರು. ಇದನ್ನೂ ಓದಿ: ಭೂಕುಸಿತದ ಕಾರಣ ತಿಳಿಯಲು ವಿಜ್ಞಾನಿಗಳ ನೆರವು: ಬಿ.ಸಿ.ನಾಗೇಶ್
ಲೋಕೋಪಯೋಗಿ ಇಲಾಖೆ ಇಇ ನಾಗರಾಜು ಅವರು ತಡೆಗೋಡೆ ಕಾಮಗಾರಿ ಬಗ್ಗೆ ಮಾಹಿತಿ ನೀಡಿದರು. ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚು ರಂಜನ್, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ಡಿವೈಎಸ್ಪಿ ಗಜೇಂದ್ರ ಪ್ರಸಾದ್, ತಹಶಿಲ್ದಾರ್ ಮಹೇಶ್ ಇತರರು ಇದ್ದರು.