ಚಿಕ್ಕಬಳ್ಳಾಪುರ: ನಗರದಲ್ಲಿ ನಡೆದ ಪ್ರಚಾರ ಸಮಾವೇಶದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಎದುರೇ ಮೈತ್ರಿಯಲ್ಲಿ ಭಿನ್ನಮತ ಸ್ಫೋಟವಾಗಿದೆ.
ಪ್ರಚಾರ ಸಭೆಯ ವೇದಿಕೆ ಬ್ಯಾನರ್ ನಲ್ಲಿ ಮಾಜಿ ಶಾಸಕ ಕೆಪಿ ಬಚ್ಚೇಗೌಡ ಅವರ ಫೋಟೋ ಹಾಕಿಲ್ಲ. ಸ್ಥಳೀಯ ಜೆಡಿಎಸ್ ನಾಯಕರ ಹೆಸರನ್ನು ಕಾರ್ಯಕ್ರಮ ಪಟ್ಟಿಯಲ್ಲಿ ಸೇರಿಸಿಲ್ಲ ಎಂದು ಪಕ್ಷದ ಕಾರ್ಯಕರ್ತರು ಆರೋಪಿಸಿದರು. ಅಷ್ಟೇ ಅಲ್ಲದೇ ಸಭೆಯಿಂದ ಹೊರ ನಡೆದ ಜೆಡಿಎಸ್ ಕಾರ್ಯಕರ್ತರು, ಧಿಕ್ಕಾರ ಕೂಗಿದರು.
ಲೋಕಸಭಾ ಚುನಾವಣೆಯನ್ನು ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಯಾಗಿ ಎದುರಿಸಲಾಗುತ್ತಿವೆ. ಹೀಗಾಗಿ ಎರಡೂ ಪಕ್ಷಗಳ ಪ್ರಮುಖ ಮುಖಂಡರ ಹೆಸರು, ಫೋಟೋವನ್ನು ವೇದಿಕೆಯ ಬ್ಯಾನರ್ ನಲ್ಲಿ ಹಾಕಿಸಬೇಕು. ಆದರೆ ಕಾಂಗ್ರೆಸ್ನವರು ಮೈತ್ರಿ ಧರ್ಮ ಪಾಲಿಸುತ್ತಿಲ್ಲ. ಹೀಗಾಗಿ ಸಭೆಯನ್ನು ಬಹಿಷ್ಕರಿಸಿ ಹೊರ ಬಂದಿದ್ದೇವೆ ಎಂದು ಜೆಡಿಎಸ್ ಕಾರ್ಯಕರ್ತರು ತಿಳಿಸಿದ್ದಾರೆ.
ನಮ್ಮನ್ನು ಓಲೈಸಿ ಮತಪಡೆಯುವ ಕಾಂಗ್ರೆಸ್ ವಿಫಲವಾಗುತ್ತಿದೆ. ಸಣ್ಣ ಪುಟ್ಟ ವಿಚಾರದಲ್ಲಿ ನಮ್ಮನ್ನು ಕಡೆಗಣಿಸುತ್ತಿದ್ದಾರೆ. ಹೀಗೆ ಮಾಡಿದರೆ ನಾವು ಯಾಕೆ ಬೆಂಬಲ ನೀಡಬೇಕು ಎಂದು ಕಾರ್ಯತರು ಕಾಂಗ್ರೆಸ್ ನಾಯಕರನ್ನು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ.