ಬೆಂಗಳೂರು: ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಶುರುವಾಗಿದ್ದು, ಈಗಾಗಲೇ ಅಂಚೆ ಮತದಾನದ ಎಣಿಕೆ ಬಿರುಸಿನಿಂದ ಶುರುವಾಗಿದೆ.
ಮೊದಲಿಗೆ ಹಾಸನ ಜಿಲ್ಲೆಯಲ್ಲಿ ಅಂಚೆ ಮತದಾನದಲ್ಲಿ ಎ.ಮಂಜು ಮುನ್ನಡೆ ಸಾಧಿಸಿದ್ದಾರೆ ಎಂದು ತಿಳಿದು ಬಂದಿದೆ. ಬಿಜೆಪಿ ಅಭ್ಯರ್ಥಿ ಮಂಜು ಅವರು 350 ಮತ ಹಾಗೂ ಜೆಡಿಎಸ್ ಪ್ರಜ್ವಲ್ 200 ಅಂಚೆ ಮತಗಳನ್ನು ಪಡೆದುಕೊಂಡಿದ್ದಾರೆ.
ಮಂಡ್ಯದಲ್ಲಿ ಅಂಚೆ ಮತ ಎಣಿಕೆಯಲ್ಲಿ ನಿಖಿಲ್ ಕುಮಾರಸ್ವಾಮಿ ಮುನ್ನಡೆ ಸಾಧಿಸಿದ್ದಾರೆ. ಬೆಂಗಳೂರು ದಕ್ಷಿಣದಲ್ಲಿ ತೇಜಸ್ವಿ ಸೂರ್ಯ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಿಥುನ್ ರೈ, ಚಿಕ್ಕಮಗಳೂರಿನಲ್ಲಿ ಶೋಭಾ ಕರಂದ್ಲಾಜೆ ಮತ್ತು ತುಮಕೂರಿನಲ್ಲಿ ದೇವೇಗೌಡ ಅವರು ಅಂಚೆ ಮತ ಎಣಿಕೆಯಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಚಿಕ್ಕೋಡಿ, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ಉತ್ತರ ಕನ್ನಡ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ರಾಯಚೂರಿನಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಇನ್ನೂ ಕಲಬುರಗಿಯಲ್ಲಿ ಖರ್ಗೆ ಹಿನ್ನಡೆ ಸಾಧಿಸಿದ್ದಾರೆ. ಉಮೇಶ್ ಜಾಧವ್ 2 ಸಾವಿರ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಹಾಸನದಲ್ಲಿ ಈಗ ಪ್ರಜ್ವಲ್ ಮುನ್ನಡೆ ಸಾಧಿಸಿದ್ದು, ಮಂಡ್ಯದಲ್ಲಿ ಮತ್ತೆ ನಿಖಿಲ್ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇತ್ತ ಚಾಮರಾಜನಗರದಲ್ಲಿ ಕಾಂಗ್ರೆಸ್ ಹಿನ್ನಡೆ ಸಾಧಿಸಿದ್ದು, ಮೈಸೂರಿನಲ್ಲಿ ಪ್ರತಾಪ್ ಸಿಂಹ ಮುನ್ನಡೆ ಸಾಧಿಸಿದ್ದಾರೆ. ಉತ್ತರ ಭಾರತದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.