ರಾಯಚೂರು: ಹಿಂದೂ ಧರ್ಮವನ್ನು ಒಡೆಯುವ ಕಾಂಗ್ರೆಸ್ಸಿಗೆ ವೀರಶೈವ ಜನ ಈ ಚುನಾವಣೆಯಲ್ಲಿ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ್ದಾರೆ.
ಜಿಲ್ಲೆಯ ಸಿರವಾರದಲ್ಲಿ ರಾಯಚೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ್ ಪರ ಪ್ರಚಾರದ ವೇಳೆ ಮಾತನಾಡಿದ ಅವರು ವೀರಶೈವ ಲಿಂಗಾಯತ ಧರ್ಮದ ವಿಚಾರವಾಗಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ಅವರು, ಗೃಹ ಸಚಿವ ಎಂ.ಬಿ.ಪಾಟೀಲ್ ಅವರು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಬರೆದ ಪತ್ರ ಬಹಿರಂಗವಾಗಿದೆ. ಹೀಗಾಗಿ ಈ ಚುನಾವಣೆಯಲ್ಲಿ ವೀರಶೈವರು ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸುತ್ತಾರೆ. ಧರ್ಮ ಒಡೆಯುವ ಮೂಲಕ ನಾನು ಮುಖ್ಯಮಂತ್ರಿಯಾಗದಂತೆ ಮಾಡಿದ್ದಕ್ಕೆ ರಾಜ್ಯದ ಜನರು ಪಾಠ ಕಲಿಸುತ್ತಿದ್ದಾರೆ ಎಂದರು.
ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟ ವಿಚಾರವಾಗಿ ಸಚಿವ ಡಿ.ಕೆ.ಶಿವಕುಮಾರ್ ಅವರು ತಪ್ಪಾಗಿದೆ ಎಂದು ಹೇಳುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿಯೂ ವೀರಶೈವ ಸಮಾಜದವರು ಕಾಂಗ್ರೆಸ್ಗೆ ಉತ್ತರ ನೀಡಲಿದ್ದಾರೆ. ರಾಜ್ಯದ 22ಕ್ಕೂ ಹೆಚ್ಚು ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಜಯ ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿಯ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಎಲ್ಲೆಲ್ಲಿ ಅಕ್ರಮವಾಗಿ ಹಣ ಸಂಗ್ರಹವಾಗಿದೆ ಅಲ್ಲಿ ಐಟಿ ದಾಳಿಯಾಗುತ್ತಿದೆ. ಕೇವಲ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಪಕ್ಷಗಳ ಮುಖಂಡರ ಮೇಲೆ ದಾಳಿ ನಡೆಯುತ್ತದೆ ಎಂದು ಹೇಳುವುದು ಸರಿಯಲ್ಲ ಎಂದು ತಿಳಿಸಿದರು.
ಸಿಎಂ ಕುಮಾರಸ್ವಾಮಿ ಅವರು ಪುತ್ರ ನಿಖಿಲ್ನನ್ನು ಗೆಲ್ಲಿಸಲು ಮಂಡ್ಯದಲ್ಲಿ ಕುಳಿತಿದ್ದಾರೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅವರ ವಿರುದ್ಧ ಅನೇಕ ಆರೋಪಗಳನ್ನು ಮಾಡುತ್ತಿದ್ದಾರೆ. ಏನೇ ಆರೋಪ ಮಾಡಿದರೂ ಮಂಡ್ಯದಲ್ಲಿ ಸುಮಲತಾ ಗೆಲ್ಲುವುದು ನಿಶ್ಚಿತ. ಜನರ ದುಡ್ಡು ಲೂಟಿ ಮಾಡಿ, ಚುನಾವಣೆಗಾಗಿ 150 ಕೋಟಿ ರೂ. ಖರ್ಚು ಮಾಡಿ ಗೆಲ್ಲಲು ಹೊರಟಿದ್ದಾರೆ. ಪ್ರಚಾರದ ವೇಳೆ ಮಾಜಿ ಸಚಿವ ಅಂಬರೀಶ್ ಅವರ ಬಗ್ಗೆ ಅಪಮಾನ ಮಾಡಿದ್ದಾರೆ. ಮಂಡ್ಯ ಕ್ಷೇತ್ರದ ಜನರು ಇದಕ್ಕೆ ತಕ್ಕಪಾಠ ಕಲಿಸುತ್ತಾರೆ ಎಂದು ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.