ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ಸುಮಲತಾ ಅಂಬರೀಶ್ ಅವರು ತಮ್ಮ ನಿರ್ಧಾರ ಪ್ರಕಟಿಸಲಿದ್ದಾರೆ.
ಮಂಗಳವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಮಲತಾ ಅವರಿಗೆ ಟಿಕೆಟ್ ಕೊಡಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಹೀಗಾಗಿ ಸುಮಲತಾ ಅವರು ಇಂದು ಸ್ವತಂತ್ರವಾಗಿ ಸ್ಪರ್ಧೆ ಮಾಡೋ ಬಗೆಗೆ ಅಧಿಕೃತವಾಗಿ ಪ್ರಕಟ ಮಾಡೋ ಸಾಧ್ಯತೆಗಳಿವೆ ಎಂಬುದಾಗಿ ಮೂಲಗಳು ತಿಳಿಸಿವೆ.
ಆರಂಭದಿಂದಲೂ ಕಾಂಗ್ರೆಸ್ ಪಕ್ಷ ನನ್ನ ಆದ್ಯತೆ. ಹೀಗಾಗಿ ಟಿಕೆಟ್ ಕೇಳಿದ್ದೀನಿ ಮೊದಲು ಪಕ್ಷದ ನಿರ್ಧಾರ ಏನೆಂದು ಹೇಳಲಿ ನಂತರ ನನ್ನ ನಿರ್ಧಾರ ಏನೆಂದು ಹೇಳ್ತಿನಿ ಎಂದು ಸುಮಲತಾ ಹೇಳಿದ್ದರು. ಆದ್ರೆ ಮಂಗಳವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡ್ಯ ಜೆಡಿಎಸ್ ಗೆ ಬಿಟ್ಟುಕೊಡಬೇಕಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಿಂದ ಸುಮಲತಾ ಅವರಿಗೆ ಟಿಕೆಟ್ ಕೊಡಲು ಸಾಧ್ಯವಿಲ್ಲ. ಸ್ವತಂತ್ರವಾಗಿ ನಿಲ್ಲೋದು ಅವರಿಗೆ ಬಿಟ್ಟಿದ್ದು ಎಂದು ಹೇಳಿದ್ದರು. ಇದನ್ನೂ ಓದಿ: ರಾಜಕಾರಣಕ್ಕೆ ಗ್ರ್ಯಾಂಡ್ ಎಂಟ್ರಿ ನಿರೀಕ್ಷೆಯಲ್ಲಿದ್ದ ಸುಮಲತಾ ಒಂಟಿಯಾದ್ರಾ?
ಹೀಗಾಗಿ ಇಂದು ಮಂಡ್ಯ ತಾಲೂಕಿನ ಶ್ರೀರಂಗಪಟ್ಟಣ ವಿಧಾನಸಭೆಗೆ ಸೇರಿರುವ ವಿವಿಧ ಹಳ್ಳಿಗಳಲ್ಲಿ ಸುಮಲತಾ ಅವರು ಪ್ರವಾಸ ನಡೆಸಲಿದ್ದಾರೆ. ಈ ವೇಳೆ ಸ್ವತಂತ್ರವಾಗಿ ಸ್ಪರ್ಧೆ ಮಾಡೋ ಬಗೆಗೆ ಅಧಿಕೃತವಾಗಿ ಪ್ರಕಟ ಮಾಡೋ ಸಾಧ್ಯತೆಗಳಿವೆ. ಈಗಾಗಲೇ ಸಮಲತಾ ಅವರು ಹಲವು ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸುವ ನೆಪದಲ್ಲಿ ಕಾಂಗ್ರೆಸ್ ಮುಖಂಡರ ಅಭಿಪ್ರಾಯ ಪಡೆದಿದ್ದರು. ಈ ನಡುವೆ ಸುಮಲತಾಗೆ ಜಿಲ್ಲಾ ಕಾಂಗ್ರೆಸ್ ಮುಖಂಡರ ಬೆಂಬಲ ಸಿಗುತ್ತಾ ಎನ್ನುವ ಚರ್ಚೆ ಕೂಡ ಎದ್ದಿದೆ.
ಜೆಡಿಎಸ್ ಗೆ ಕ್ಷೇತ್ರ ಬಿಟ್ಟುಕೊಡುವುದಕ್ಕೆ ಕೆಲವು ಕಾಂಗ್ರೆಸ್ ಮುಖಂಡರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಪಕ್ಷದ ತೀರ್ಮಾನಕ್ಕೆ ಬದ್ಧರಾಗಿ ಚುನಾವಣೆಯಲ್ಲಿ ಸುಮಲತಾರನ್ನ ಎಷ್ಟರ ಮಟ್ಟಿಗೆ ಬೆಂಬಲಿಸುತ್ತಾರೆ ಅನ್ನೋದು ಮಾತ್ರ ನಿಗೂಢವಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv