ಹಾಸನ: ಭತ್ತದ ಹುಲ್ಲು ತುಂಬಿಕೊಂಡು ಹೋಗುತ್ತಿದ್ದ ಲಾರಿಗೆ ವಿದ್ಯುತ್ ತಂತಿ ಸ್ಪರ್ಶವಾಗಿ ಹುಲ್ಲು ಹೊತ್ತಿ ಉರಿದಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದ ಘಟನೆ ಜಿಲ್ಲೆ ಅರಕಲಗೂಡು ತಾಲೂಕಿನ ಚೌರಗಲ್ ಬಳಿ ನಡೆದಿದೆ.
ಚಾಲಕ ಲಾರಿಯಲ್ಲಿ ಭತ್ತದ ಹುಲ್ಲು ತುಂಬಿಕೊಂಡು ಬರುತ್ತಿದ್ದನು. ಆದರೆ ಚೌರಗಲ್ ಬಳಿ ವಿದ್ಯುತ್ ಸ್ಪರ್ಶದಿಂದ ಭತ್ತದ ಹುಲ್ಲು ಹೊತ್ತಿಕೊಂಡು ಧಗಧಗ ಉರಿಯಲಾರಂಭಿಸಿದೆ. ಇದನ್ನು ಗಮನಿಸಿದ ಸ್ಥಳೀಯರು ತಕ್ಷಣ ಚಾಲಕನಿಗೆ ಬೆಂಕಿ ಹೊತ್ತಿರುವ ಬಗ್ಗೆ ತಿಳಿಸಿದ್ದಾರೆ. ತಕ್ಷಣ ಚಾಲಕ ಹೆಚ್ಚಿನ ಅನಾಹುತ ತಪ್ಪಿಸಲು ಲಾರಿಯನ್ನು ಸಮೀಪದಲ್ಲಿ ಹರಿಯುತ್ತಿದ್ದ ಹೇಮಾವತಿ ನದಿಗೆ ಇಳಿಸಿದ್ದಾನೆ.
ನಂತರ ಚಾಲಕ ಲಾರಿಯಿಂದ ಜಿಗಿದು ದಡಕ್ಕೆ ಬಂದು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ಬಗ್ಗೆ ಮಾಹಿತಿ ತಿಳಿದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಚಾಲಕನ ಸಮಯ ಪ್ರಜ್ಞೆಯಿಂದ ಬೆಂಕಿ ಹೊತ್ತಿದ್ದ ಲಾರಿಯನ್ನು ಹೇಮಾವತಿ ನದಿಗೆ ಇಳಿಸಿದ್ದರಿಂದ ಭಾರೀ ಅನಾಹುತ ತಪ್ಪಿದಂತಾಗಿದೆ.