ನವದೆಹಲಿ: ದೆಹಲಿಯಲ್ಲಿ (Delhi) ಗಾಳಿಯ ಗುಣಮಟ್ಟ (Air Quality) ತೀವ್ರ ಕುಸಿತ ಕಂಡಿದೆ. ಪರಿಣಾಮ ಸರ್ಕಾರ ಈಗಾಗಲೇ 10 ಮತ್ತು 12 ನೇ ತರಗತಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಎಲ್ಲಾ ವಿದ್ಯಾರ್ಥಿಗಳಿಗೆ ತರಗತಿಗಳನ್ನು ಸ್ಥಗಿತಗೊಳಿಸಿದೆ. 10 ಮತ್ತು 12 ನೇ ತರಗತಿ ವಿದ್ಯಾರ್ಥಿಗಳಿಗೆ ತರಗತಿಗಳನ್ನು ನಿಲ್ಲಿಸಲು ಕ್ರಮ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
ಎನ್ಸಿಆರ್ ಪ್ರದೇಶದಲ್ಲಿ ವಾಯುಮಾಲಿನ್ಯವನ್ನು ತಡೆಯಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಅರ್ಜಿಯನ್ನು ನ್ಯಾಯಮೂರ್ತಿ ಅಭಯ್ ಎಸ್ ಓಕಾ ಮತ್ತು ಆಗಸ್ಟಿನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸುತ್ತಿದೆ.
ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣನ್, 10 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗೆ ದೈಹಿಕ ತರಗತಿಗಳನ್ನು ಅಮಾನತುಗೊಳಿಸಬೇಕು. 10 ಮತ್ತು 12 ನೇ ವಿದ್ಯಾರ್ಥಿಗಳ ಶ್ವಾಸಕೋಶವು ಇತರ ವಿದ್ಯಾರ್ಥಿಗಳಿಗಿಂತ ಭಿನ್ನವಾಗಿರಲು ಸಾಧ್ಯವಿಲ್ಲ ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದರು.
ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ, 10 ಮತ್ತು 12 ನೇ ತರಗತಿಯ ವಿದ್ಯಾರ್ಥಿಗಳಿಗೆ ಎಲ್ಲಾ ತರಗತಿಗಳನ್ನು ನಿಲ್ಲಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು. ಆನ್ಲೈನ್ ತರಗತಿಗಳನ್ನು ನಡೆಸಬೇಕು ಎಂದು ಕೋರ್ಟ್ ನಿರ್ದೇಶನ ನೀಡಿದೆ.
ರಾಷ್ಟ್ರ ರಾಜಧಾನಿಯಲ್ಲಿ ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್ (Graded Response Action Plan) ಅಡಿಯಲ್ಲಿ ಮಾಲಿನ್ಯ-ವಿರೋಧಿ ನಿರ್ಬಂಧಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಳಂಬ ಮಾಡಿದ್ದಕ್ಕಾಗಿ ನ್ಯಾಯಾಲಯವು ದೆಹಲಿ ಸರ್ಕಾರ ಮತ್ತು ವಾಯು ಗುಣಮಟ್ಟ ನಿರ್ವಹಣಾ ಆಯೋಗವನ್ನು (CAQM) ತರಾಟೆಗೆ ತೆಗೆದುಕೊಂಡಿದೆ.
ಗಮನಾರ್ಹವಾಗಿ, ದೆಹಲಿಯಲ್ಲಿನ ವಾಯು ಗುಣಮಟ್ಟ ಸೂಚ್ಯಂಕವು ಸೋಮವಾರ 493ಕ್ಕೆ ಏರಿದೆ. ಇದು ಅತ್ಯಂತ ಕೆಟ್ಟ ಗುಣಮಟ್ಟವನ್ನು ಸೂಚಿಸುತ್ತದೆ.
ವಾಯು ಗುಣಮಟ್ಟ ನಿರ್ವಹಣಾ ಆಯೋಗ ಸೋಮವಾರದಿಂದ GRAP ನ ಹಂತ 4ನ್ನು ಜಾರಿಗೆ ತಂದಿದೆ. ದೆಹಲಿ ಸರ್ಕಾರವು 10 ಮತ್ತು 12 ನೇ ತರಗತಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಎಲ್ಲಾ ವಿದ್ಯಾರ್ಥಿಗಳಿಗೆ ಶಾಲೆಗೆ ರಜೆ ಘೋಷಿಸಿದೆ.
ನ್ಯಾಯಾಲಯದ ಅನುಮತಿಯಿಲ್ಲದೆ GRAP IV ನಿಯಮವನ್ನು ಸಡಿಲಗೊಳಿಸದಂತೆ ಪೀಠವು ದೆಹಲಿ ಸರ್ಕಾರಕ್ಕೆ ನಿರ್ದೇಶನ ನೀಡಿದೆ.