ಬೆಂಗಳೂರು: ಸಚಿವ ಸಂಪುಟ ಪುನಾರಚನೆಯ ಬಳಿಕ ಸಚಿವ ಎಂ.ಬಿ.ಪಾಟೀಲ್ ತಮ್ಮಿಷ್ಟದ ಗೃಹ ಖಾತೆಯನ್ನು ಪಡೆಯುವಲ್ಲಿ ಯಶಸ್ವಿಯಾದರು.
ಇಂದು ಸದಾಶಿವನಗರದ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೊದಲ ದಿನವೇ ಡಿಸಿಎಂ ಜಿ.ಪರಮೇಶ್ವರ್ ಅವರಿಗೆ ಸಣ್ಣದೊಂದು ಚಮಕ್ ನೀಡಿದಂತೆ ಕಾಣಿಸಿತು. ಈ ಮೊದಲು ಗೃಹ ಸಚಿವರಾಗಿದ್ದ ಜಿ.ಪರಮೇಶ್ವರ್ ಝೀರೋ ಟ್ರಾಫಿಕ್ ಬಳಕೆ ಮಾಡಿಕೊಳ್ಳುವ ಮೂಲಕ ಸುದ್ದಿಯಾಗಿದ್ದರು. ಈ ಬಗ್ಗೆ ಸಾರ್ವಜನಿಕರು ಸಹ ಡಿಸಿಎಂ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಇನ್ನು ಮಾಧ್ಯಮಗಳು ಸುದ್ದಿ ಬಿತ್ತರಿಸಿದ್ರೆ, ನಿಮಗೆ ಹೊಟ್ಟೆ ಕಿಚ್ಚು, ನನಗಿರುವ ಸೌಲಭ್ಯವನ್ನು ಬಳಸಿಕೊಳ್ಳುತ್ತಿದ್ದೇನೆ ಅಂತಾ ಹೇಳಿದ್ದರು.
ಇಂದು ನೂತನ ಗೃಹ ಸಚಿವರಾದ ಎಂ.ಬಿ.ಪಾಟೀಲ್, ನನಗೆ ಝೀರೋ ಟ್ರಾಫಿಕ್ ಸೌಲಭ್ಯ ಬೇಡ. ಸಿಗ್ನಲ್ ಫ್ರೀ ಕೊಟ್ಟರೆ ಸಾಕು ಎಂಬ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.
ಎಂ.ಬಿ.ಪಾಟೀಲರು ಝೀರೋ ಟ್ರಾಫಿಕ್ ಸೌಲಭ್ಯ ತಿರಸ್ಕರಿಸುತ್ತಿದ್ದಂತೆ ಖಾತೆ ಬಿಟ್ಟು ಕೊಡಲು ಸತಾಯಿಸಿದ್ದಕ್ಕೆ ಪರಮೇಶ್ವರ್ ಅವರಿಗೆ ತಿರುಗೇಟು ಕೊಟ್ಟರಾ ಎಂಬ ಸಣ್ಣದೊಂದು ಚರ್ಚೆ ಕಾಂಗ್ರೆಸ್ ಅಂಗಳದಲ್ಲಿ ಆರಂಭವಾಗಿದೆ.
ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡ ಎಂ.ಬಿ.ಪಾಟೀಲರ ನಿವಾಸಕ್ಕೆ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ಎಸ್ ರಾಜು, ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್, ಸೀಮಂತ ಕುಮಾರ ಸಿಂಗ್, ಸೇರಿ ಇತರೆ ಅಧಿಕಾರಿಗಳ ತಂಡ, ಗೃಹ ಇಲಾಖೆ ಕಾರ್ಯದರ್ಶಿ ರಜನೀಶ ಗೋಯಲ್, ಸೇರಿ ಇಲಾಖೆಯ ಎಲ್ಲ ವಿಭಾಗದ ಮುಖ್ಯ ಅಧಿಕಾರಿಗಳು ಭೇಟಿಯಾಗಿ ಶುಭ ಹಾರೈಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv