ರಾಯಚೂರು: ನಗರದ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ್ ಸಾವು ಪ್ರಕರಣವನ್ನು ಸರ್ಕಾರ ಸಿಐಡಿಗೆ ಒಪ್ಪಿಸಿದೆ.
ರಾಜ್ಯಾದ್ಯಂತ ವಿದ್ಯಾರ್ಥಿಗಳು ಹಾಗೂ ವಿವಿಧೆಡೆಯಿಂದ ಆಕ್ರೋಶ ಹೆಚ್ಚಾದ ಹಿನ್ನೆಲೆಯಲ್ಲಿ ಕೊಲೆ ಮತ್ತು ಅತ್ಯಾಚಾರ ಪ್ರಕರಣ ತನಿಖೆಯನ್ನು ಸಿಐಡಿಗೆ ಒಪ್ಪಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಆಂದೋಲನ ತೀವ್ರ ಸ್ವರೂಪ ಪಡೆಯುತ್ತಿರುವುದರಿಂದ ರಾಯಚೂರು ಡಿವೈಎಸ್ಪಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ಈಗ ಸಿಐಡಿಗೂ ಒಪ್ಪಿಸಲಾಗಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ರಾಯಚೂರಿನಲ್ಲಿ ಮೃತಳ ಪೋಷಕರನ್ನು ಭೇಟಿ ಮಾಡಿದಾಗ ಪೋಷಕರು ನ್ಯಾಯ ಕೊಡಿಸುವಂತೆ ಒತ್ತಾಯಿಸಿದ್ದರು. ಇದಕ್ಕೆ ಸ್ಪಂದಿಸಿದ ಸಿದ್ದರಾಮಯ್ಯ ಗೃಹ ಸಚಿವ ಎಂ.ಬಿ ಪಾಟೀಲ್ ಗೆ ಸಲಹೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವರ ಸೂಚನೆ ಮೇರೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದ್ದಾರೆ.
ಸಿಐಡಿ ತಂಡ ಇಂದು ರಾಯಚೂರಿಗೆ ಆಗಮಿಸಿ ಮಾಹಿತಿ ಕಲೆ ಹಾಕುವ ಸಾಧ್ಯತೆಯಿದೆ. ಜೊತೆಗೆ ಮರಣೋತ್ತರ ಪರೀಕ್ಷಾ ವರದಿ ಕೂಡ ಇಂದು ಪೊಲೀಸರ ಕೈ ಸೇರುವ ಸಾಧ್ಯತೆಯಿದೆ. ಈ ಮೂಲಕ ವಿದ್ಯಾರ್ಥಿನಿ ಸಾವು ಪ್ರಕರಣದ ತನಿಖೆ ಚುರುಕುಗೊಂಡಿದೆ.